Advertisement

ಸೋಂಕು ತಡೆಗೆ ಖಾಸಗಿ ವೈದ್ಯರು ಕೈ ಜೋಡಿಸಲಿ

08:59 PM May 20, 2021 | Team Udayavani |

ದಾವಣಗೆರೆ: ಕೋವಿಡ್‌ ಸೋಂಕು ಗ್ರಾಮ ಮಟ್ಟದಲ್ಲಿ ವೇಗವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟಲು ಜಿಲ್ಲೆಯಲ್ಲಿರುವ ಖಾಸಗಿ ವೈದ್ಯರು ಗ್ರಾಮಗಳನ್ನು ದತ್ತು ಪಡೆದು ಸತತ 10 ದಿನಗಳ ಕಾಲ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ ರೋಗ ಪತ್ತೆ, ಚಿಕಿತ್ಸೆ ನಿರ್ಧರಣೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದರು.

Advertisement

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕೋವಿಡ್‌ ಸೋಂಕಿತರ ಆರೋಗ್ಯ ಮೇಲ್ವಿಚಾರಣೆ ಮಾಡಲು ವೈದ್ಯರ ನಿಯೋಜನೆಗಾಗಿ ಬುಧವಾರ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಾವಣಗೆರೆ ಜಿಲ್ಲೆ ವೈದ್ಯಕೀಯ ಕ್ಷೇತ್ರದಲ್ಲಿ ಇಡೀ ರಾಜ್ಯದಲ್ಲಿಯೇ ಖ್ಯಾತಿ ಪಡೆದಿದೆ. ಅನೇಕ ತಜ್ಞ ವೈದ್ಯರು ಜಿಲ್ಲೆಯಲ್ಲಿದ್ದು ಸಾರ್ವಜನಿಕರಿಗೆ ಸೇವೆ ನೀಡುತ್ತಿದ್ದಾರೆ. ದೇಶದಲ್ಲಿ ಈ ಹಿಂದೆ ಸಂಭವಿಸಿದ ಲಾತೂರ್‌ ಭೂಕಂಪ, ಕಂಡು ಕೇಳರಿಯದ ಪ್ರವಾಹ, ಕೊಡಗಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಭೂಕುಸಿತ ಸಂದರ್ಭಗಳಲ್ಲಿ ಜಿಲ್ಲೆಯ ಖಾಸಗಿ ವೈದ್ಯರ ತಂಡ ದುರಂತ ಸ್ಥಳಗಳಿಗೆ ತೆರಳಿ ಜನರ ಪ್ರಾಣ ರಕ್ಷಣೆ ಮಾಡಿದ ನಿದರ್ಶನವಿದೆ. ಹಾಗಾಗಿ ಜಿಲ್ಲೆಯ ವೈದ್ಯರ ಬಗ್ಗೆ ನಮಗೆ ಹೆಮ್ಮೆ ಇದೆ. ಸದ್ಯ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದ್ದು, ಗ್ರಾಮಗಳಲ್ಲಿ ವೇಗವಾಗಿ ವ್ಯಾಪಿಸುತ್ತಿದೆ. ಇದರಿಂದಾಗಿ ಜಿಲ್ಲೆ ಕಷ್ಟದ ಪರಿಸ್ಥಿತಿ ಎದುರಿಸುತ್ತಿದೆ. ಇಂಥ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ಖಾಸಗಿ ವೈದ್ಯರ ಸಹಕಾರ ಈಗ ಅತ್ಯಗತ್ಯವಾಗಿದೆ ಎಂದರು.

ಜಿಲ್ಲೆಯ ಗ್ರಾಮಗಳಲ್ಲಿ ಸರ್ಕಾರಿ ವೈದ್ಯರು, ಅಂಗನವಾಡಿ, ಆಶಾ ಕಾರ್ಯಕತೆರ್ಯರು, ಕಂದಾಯ ಇಲಾಖೆಯ ಸಿಬ್ಬಂದಿಗಳು ಈಗಾಗಲೇ ಲಭ್ಯರಿದ್ದು, ಅವರೊಂದಿಗೆ ಖಾಸಗಿ ವೈದ್ಯರನ್ನು ಒಳಗೊಂಡ ತಂಡ ರಚಿಸಲಾಗುವುದು. ಈ ತಂಡಕ್ಕೆ ಅಗತ್ಯ ಕೋವಿಡ್‌ ಕಿಟ್‌, ಸ್ಥಳದಲ್ಲಿಯೇ ಸೋಂಕು ಪತ್ತೆ ಹಚ್ಚಲು ರ್ಯಾಪಿಡ್‌ ಆಂಟಿಜನ್‌ ಟೆಸ್ಟ್‌ ಕಿಟ್‌, ಔಷಧಿಗಳು ಸೇರಿದಂತೆ ಎಲ್ಲ ಸೌಲಭ್ಯ ಒದಗಿಸಲಾಗುವುದು. ಅಲ್ಲದೇ ವಾಹನ ವ್ಯವಸ್ಥೆಯನ್ನೂ ಮಾಡಲಾಗುವುದು. ಖಾಸಗಿ ವೈದ್ಯರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮಗಳನ್ನು ದತ್ತು ತೆಗೆದುಕೊಂಡು ಸತತ 10 ದಿನಗಳ ಕಾಲ ನಿಗದಿತ ಅವಧಿಯಲ್ಲಿ ಸೇವಾ ಮನೋಭಾವದೊಂದಿಗೆ ಸಹಕಾರ ನೀಡಿದಲ್ಲಿ ಕೋವಿಡ್‌ನ್ನು ಗ್ರಾಮ ಮಟ್ಟದಲ್ಲಿ ತಡೆಗಟ್ಟಲು ಸಾಧ್ಯವಿದೆ ಎಂದು ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ವಿಜಯಮಹಾಂತೇಶ್‌ ದಾನಮ್ಮನವರ್‌ ಮಾತನಾಡಿ, ಖಾಸಗಿ ವೈದ್ಯರು ಕನಿಷ್ಟ ಎರಡು ತಿಂಗಳು ಗ್ರಾಮಗಳನ್ನು ದತ್ತು ಸ್ವೀಕರಿಸಬೇಕು. ಖಾಸಗಿ ಹಾಗೂ ಸರ್ಕಾರಿ ವೈದ್ಯರನ್ನು ಒಳಗೊಂಡ ನಿಯೋಜಿತ ತಂಡಗಳು ದತ್ತು ಸ್ವೀಕೃತ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನರಲ್ಲಿ ವಿಶ್ವಾಸ ಮೂಡಿಸಬೇಕು. ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೋಂಕು ಲಕ್ಷಣ ಹೊಂದಿರುವ ವ್ಯಕ್ತಿಗಳನ್ನು ಗುರುತಿಸಿ ಅವರ ಪ್ರಾಥಮಿಕ ಸಂಪರ್ಕಿತರ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ರೋಗ ಲಕ್ಷಣಗಳುಳ್ಳ ಜನರಿಗೆ ರ್ಯಾಪಿಡ್‌ ಟೆಸ್ಟ್‌ ಮಾಡಬೇಕು. ಸೋಂಕು ದೃಢಪಟ್ಟವರ ಆರೋಗ್ಯ ಸ್ಥಿತಿಗತಿ ಹಾಗೂ ಸೋಂಕಿನ ತೀವ್ರತೆಗೆ ಅನುಗುಣವಾಗಿ ಹೋಂ ಐಸೋಲೇಷನ್‌, ಕೋವಿಡ್‌ ಕೇರ್‌ ಸೆಂಟರ್‌ ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಕುರಿತು ನಿರ್ಧರಿಸಬೇಕು.

Advertisement

ಕೋವಿಡ್‌ ಸೋಂಕು ಲಕ್ಷಣ ಪ್ರಾರಂಭವಾದ ಐದು ದಿನಗಳ ಒಳಗಾಗಿ ಸೋಂಕಿತರಿಗೆ ಚಿಕಿತ್ಸೆ ಪ್ರಾರಂಭವಾಗಬೇಕು. ಖಾಸಗಿ ವೈದ್ಯರು ಇದಕ್ಕೆ ಸಹಕರಿಸುವ ಮೂಲಕ ಜಿಲ್ಲೆಯನ್ನು ಕೋವಿಡ್‌ ಸೋಂಕಿನಿಂದ ಮುಕ್ತಗೊಳಿಸಲು ಮುಂದಾಗಬೇಕು. ಇದಕ್ಕಾಗಿ ಅಗತ್ಯವಿರುವ ಎಲ್ಲ ನೆರವನ್ನು ಒದಗಿಸಲಾಗುವುದು ಎಂದು ಹೇಳಿದರು. ಸಭೆಯಲ್ಲಿ ಭಾಗವಹಿಸಿದ್ದ ನರ್ಸಿಂಗ್‌ ಅಸೋಸಿಯೇಷನ್‌, ದಂತ ವೈದ್ಯರ ಸಂಘ ಸೇರಿದಂತೆ ವಿವಿಧ ವೈದ್ಯಕೀಯ ಕ್ಷೇತ್ರಗಳ ಸಂಘಗಳ ಪ್ರತಿನಿಧಿಗಳು ಜಿಲ್ಲಾಡಳಿತದ ಕರೆಗೆ ಸ್ಪಂದಿಸಿದರು.

ಕೋವಿಡ್‌ ನಿಯಂತ್ರಣಕ್ಕೆ ಯಾವುದೇ ಸೇವೆ ಸಲ್ಲಿಸಲು ಸದಾ ಸಿದ್ಧರಿದ್ದೇವೆ ಎನ್ನುವ ಭರವಸೆಯನ್ನು ಇದೇ ಸಂದರ್ಭದಲ್ಲಿ ನೀಡಿದರು. ಸಭೆಯಲ್ಲಿ ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಡಿಎಚ್‌ಒ ಡಾ| ನಾಗರಾಜ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ರಾಘವನ್‌, ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ನಟರಾಜ್‌ ಸೇರಿದಂತೆ ವಿವಿಧ ಅಧಿಕಾರಿಗಳು, ನಗರದ ವಿವಿಧ ಆಸ್ಪತ್ರೆಗಳ ವೈದ್ಯರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next