Advertisement

ಕೊರೊನಾ ಕಟ್ಟಿ ಹಾಕಲು ಶಾಸಕದ್ವಯರ ಶ್ರಮ

08:36 PM May 25, 2021 | Team Udayavani |

„ರಾ. ರವಿಬಾಬು

Advertisement

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುರುವುದನ್ನು ತಡೆಗಟ್ಟುವ, ಸೋಂಕಿತರಿಗೆ ಅಗತ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಮತ್ತು ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಇಬ್ಬರೂ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಣೆ ಮಾಡುತ್ತ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ.

ಲಸಿಕಾ ಶಿಬಿರ ಆಯೋಜನೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಕೊರೊನಾ ಲಸಿಕೆ ಪ್ರಕ್ರಿಯೆ ಪ್ರಾರಂಭವಾದ ನಂತರ ವಾರ್ಡ್‌ವಾರು ಲಸಿಕಾಕರಣ ಶಿಬಿರ ಆಯೋಜಿಸುವ ಜೊತೆಗೆ ಅನೇಕ ಲಸಿಕಾ ಶಿಬಿರಗಳಿಗೆ ತೆರಳಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸುಸೂತ್ರವಾಗಿ ಲಸಿಕೆ ದೊರೆಯುವ ವ್ಯವಸ್ಥೆ ಮಾಡುವ ಮೂಲಕ ಹಿರಿಯ ನಾಗರಿಕರು, ಮುಂಚೂಣಿ ಕಾರ್ಯಕರ್ತರಿಗೆ ನೆರವಾಗಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್‌ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣ ದಲ್ಲಿ ನಡೆದ ಪ್ರತಿ ಕೋವಿಡ್‌ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಜೊತೆಗೆ ಕೆಲವಾರು ಅತ್ಯಮೂಲ್ಯ ಸಲಹೆ, ಸೂಚನೆ ನೀಡಿದ್ದಾರೆ.

ಕೋವಿಡ್‌ ಅಬ್ಬರದ ನಡುವೆ ರೈತರು ಅದರಲ್ಲೂ ವಿಶೇಷವಾಗಿ ಭತ್ತ ಬೆಳೆಗಾರರಿಗೆ ಖರೀದಿ ಕೇಂದ್ರದಲ್ಲಿ ನೋಂದಣಿಗೆ ಕಾಲಾವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳ ಗಮನ ಸೆಳೆಯುವ ಮೂಲಕ ರೈತರ ನೆರವಿಗೆ ಧಾವಿಸಿದ್ದಾರೆ.

Advertisement

ಪ್ರತಿ ನಿತ್ಯ ಕೋವಿಡ್‌ ಪರೀಕ್ಷೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆಯುವ ಜೊತೆಗೆ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡುವಂತೆ ತಾಕೀತು ಮಾಡುತ್ತಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.

ದಾವಣಗೆರೆ ಹೊರ ವಲಯದಲ್ಲಿ ಸಿರಿಗೆರೆಯ ತರಳಬಾಳು ಜಗದ್ಗುರುಗಳು ಪ್ರಾರಂಭಿಸಿರುವ ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿನ ಆಗು-ಹೋಗುಗಳ ಬಗ್ಗೆ ಸದಾ ಗಮನ ಹರಿಸುವ ಮೂಲಕ ಸೋಂಕಿತರಿಗೆ ಅಗತ್ಯ ನೆರವು ಒದಗಿಸುತ್ತಿದ್ದಾರೆ.

ಲಸಿಕೆಗೆ 9 ಕೋಟಿ ರೂ. ನೀಡುವ ವಾಗ್ಧಾನ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ವಯೋಮಿತಿಯ ಕಾರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸಭೆ, ಆಸ್ಪತ್ರೆ, ಕೇರ್‌ ಸೆಂಟರ್‌ಗಳ ಭೇಟಿ ಸಂದರ್ಭದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿಲ್ಲವಾದರೂ ತಮ್ಮ ಗೃಹ ಕಚೇರಿಯಲ್ಲಿ ನಿಗದಿತ ಅವಧಿಯಲ್ಲಿ ಸಭೆ ನಡೆಸುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ.

ಎರಡು ಆಸ್ಪತ್ರೆ, ವೈದ್ಯಕೀಯ ಕಾಲೇಜು, ನರ್ಸಿಂಗ್‌ ಕಾಲೇಜುಗಳ ಆಡಳಿತ ಅನುಭವ ಹೊಂದಿರುವ ಅವರು ಆರೋಗ್ಯ ಕ್ಷೇತ್ರ ಒಳಗೊಂಡಂತೆ ಎಲ್ಲ ಅಧಿಕಾರಿಗಳ ವರ್ಗಕ್ಕೆ ಸಕಾಲಿಕ ಸಲಹೆ, ಸೂಚನೆ ನೀಡುತ್ತಿದ್ದಾರೆ. ಸಲಹೆ, ಸೂಚನೆಗಳ ಪಾಲನೆಯತ್ತ ಗಮನ ನೀಡುತ್ತಿದ್ದಾರೆ.

ನಿಗದಿತ ಸಮಯದಲ್ಲಿ ತಮ್ಮ ಒಡೆತನದ ಬಾಪೂಜಿ ಮತ್ತು ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆಯ ವೈದ್ಯರ ಸಭೆಗಳನ್ನು ನಡೆಸುವ ಮೂಲಕ ಕೊರೊನಾ ಸೋಂಕಿತರಿಗೆ ಉತ್ಕೃಷ್ಟ ಗುಣಮಟ್ಟದ ಚಿಕಿತ್ಸೆ ದೊರಕಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಕ್ಕೆ 2 ಲಕ್ಷ ಡೋಸ್‌ ಕೊರೊನಾ ಲಸಿಕೆಗೆ ತಗುಲುವ 18 ಕೋಟಿ ರೂ. ವೆಚ್ಚದ ಅರ್ಧ ಭಾಗ 9 ಕೋಟಿ ರೂ. ನೀಡುವ ವಾಗ್ಧಾನ ಮಾಡಿದ್ದಾರೆ. ಆಸ್ಪತ್ರೆಗಳಲ್ಲಿ ಸೋಂಕಿತರು ದಾಖಲು, ಅಗತ್ಯ ಸೌಲಭ್ಯ ಒದಗಿಸುವ ಜವಾಬ್ದಾರಿಯನ್ನು ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅವರಿಗೆ ವಹಿಸಿದ್ದರೂ ಸದಾ ನಿಗಾವಹಿಸುವ ಕೆಲಸ ಮಾಡುತ್ತಿದ್ದಾರೆ.

ನಗರದ ಕೆ.ಆರ್‌. ರಸ್ತೆಯಲ್ಲಿರುವ ತಮ್ಮ ಒಡೆತನದ ಆಸ್ಪತ್ರೆಯಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಪ್ರಾರಂಭಕ್ಕೆ ಜಿಲ್ಲಾಡಳಿತದ ಜೊತೆ ಚರ್ಚಿಸಿದ್ದಾರೆ. ಸರ್ಕಾರ ಖಾಸಗಿಯಾಗಿ ಲಸಿಕೆ ಖರೀದಿಗೆ ಅನುಮತಿ ನೀಡಿದಲ್ಲಿ ಲಸಿಕೆ ಖರೀದಿಗೂ ಸಜ್ಜಾಗಿದ್ದಾರೆ.

ಈಗಾಗಲೇ 2-3 ಕಂಪನಿಗಳ ಜೊತೆ ಚರ್ಚೆಯೂ ನಡೆದಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರದ ಇಬ್ಬರು ಶಾಸಕರು ಕೊರೊನಾ ನಿಯಂತ್ರಿಸುವ ಮತ್ತು ಸೋಂಕಿತರಿಗೆ ಅಗತ್ಯ ಸೌಲಭ್ಯ ಒದಗಿಸುವಲ್ಲಿ ಕಾರ್ಯತತ್ಪತರಾಗಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next