ಭದ್ರಾವತಿ: ಅರಣ್ಯ ನಾಶ ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ಕಾಯ್ದೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೊಳಿಸಿವೆ. ಆದರೂ ಸಹ ಅರಣ್ಯ ನಾಶಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಹೇಳಿದರು.
ನಗರಸಭೆ ವ್ಯಾಪ್ತಿ ವಾರ್ಡ್ ನಂ.29ರ ಸಿದ್ದಾಪುರ ಎನ್ಟಿಬಿ ಲೇಔಟ್ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದ್ದ “ಜೀವ ವೈವಿಧ್ಯ ಜಾಗೃತಿ ಅಭಿಯಾನ’ದಡಿರೋಪಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹೆಚ್ಚುತ್ತಿರುವ ಅರಣ್ಯ ನಾಶಕ್ಕೆ ಕಡಿವಾಣ ಹಾಕುವ ಜೊತೆಗೆ ಪರಿಸರ ಮಾಲಿನ್ಯ ತಡೆಗಟ್ಟಲು ಮುಂದಾಗಬೇಕಿದೆ.
ಅದರಲ್ಲೂ ಭದ್ರಾವತಿ ತಾಲೂಕಿನಲ್ಲಿ ಅರಣ್ಯನಾಶ ಹೆಚ್ಚಿನ ಪ್ರಮಾಣದಲ್ಲಿದ್ದು, ಪ್ರಸ್ತುತ ಅಸ್ತಿತ್ವದಲ್ಲಿರುವ ಅರಣ್ಯವನ್ನಾದರೂ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಬೇಕಾಗಿದೆ ಎಂದರು.
ನಗರಸಭೆ ಆಡಳಿತಾಧಿಕಾರಿಯಾಗಿರುವ ಉಪ ವಿಭಾಗಾ ಧಿಕಾರಿ ಟಿ.ವಿ. ಪ್ರಕಾಶ್ ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಗಮನಹರಿಸುವುದಾಗಿ ಭರವಸೆ ನೀಡಿದರು. ಸಹಾಯಕ ಅರಣ್ಯ ಸಂರಕ್ಷಣಾ ಧಿಕಾರಿ ಸುಬ್ರಮಣ್ಯ ಮಾತನಾಡಿ, ಜೀವ ವೈವಿಧ್ಯ ಮಂಡಳಿ ಕೈಗೊಳ್ಳುತ್ತಿರುವ ಕಾರ್ಯಕ್ಕೆ ಅರಣ್ಯ ಇಲಾಖೆ ಹೆಚ್ಚಿನ ಸಹಕಾರ ನೀಡಲಿದೆ ಎಂದರು. ನಗರದ ಸ್ತ್ರೀರೋಗ ತಜ್ಞೆ ಡಾ| ವೀಣಾ ಎಸ್. ಭಟ್ ಮಾತನಾಡಿದರು.
ನಗರಸಭೆ ಪೌರಾಯುಕ್ತ ಪರಮೇಶ್ವರ್, ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ವೆಂಕಟಗಿರಿ, ವಲಯ ಅರಣ್ಯಾಧಿಕಾರಿ ಮಂಜುನಾಥ್, ಉಪ ವಲಯ ಅರಣ್ಯಾಧಿಕಾರಿ ಬಿ.ಆರ್. ದಿನೇಶ್ಕುಮಾರ್, ನಗರಸಭೆ ಕಂದಾಯಾಧಿಕಾರಿ ರಾಜ್ ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್, ಹಿರಿಯ ಆರೋಗ್ಯ ನಿರೀಕ್ಷಕಿ ಆಶಾಲತಾ, ಕಿರಿಯ ಆರೋಗ್ಯ ನಿರೀಕ್ಷಕಿ ಶೃತಿ, ಗೋವಿಂದ ಇನ್ನಿತರರು ಇದ್ದರು.