Advertisement

ಈ ಬಾರಿ ಸರಳ ಸ್ವಾತಂತ್ರ್ಯ ದಿನಾಚರಣೆ

06:12 PM Aug 06, 2021 | Team Udayavani |

ದಾವಣಗೆರೆ : ಕೋವಿಡ್‌ ಮಾರ್ಗಸೂಚಿ ಹಾಗೂ ಭಾರತ ಸರ್ಕಾರದ ಗೃಹ ಮಂತ್ರಾಲಯದ ನಿರ್ದೇಶನದಂತೆ ಈ ಬಾರಿಯ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆ. 15 ರಂದು ಆಚರಿಸಲಾಗುವ ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಸದ್ಯ 250 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಹಾಗಾಗಿ ಯಾವುದೇ ಕಾರಣಕ್ಕೂ ಮೈಮರೆಯುವಂತಿಲ್ಲ. ಅಲ್ಲದೆ ಡೆಲ್ಟಾದ ಹೊಸ ತಳಿಯ 4 ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಿವೆ. ಎಲ್ಲರೂ ಮತ್ತಷ್ಟು ಎಚ್ಚರಿಕೆ ವಹಿಸಬೇಕಾಗಿದೆ ಎಂದು ತಿಳಿಸಿದರು.

Advertisement

ಕೊರೊನಾ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಎನ್‌ಸಿಸಿ, ಸ್ಕೌಟ್ಸ್‌ ಮತ್ತು ಗೈಡ್ಸ್‌ ಮಕ್ಕಳು ಪಾಲ್ಗೊಳ್ಳಲು ಅವಕಾಶ ಇರುವುದಿಲ್ಲ. ಕೇಂದ್ರ ಸರ್ಕಾರದ ಗೃಹ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿ ಅನ್ವಯ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧಾರಣೆ ಮಾಡಿ ಮತ್ತು ಸ್ಯಾನಿಟೈಸೇಷನ್‌ ನಿರ್ವಹಿಸಿ ಹೆಚ್ಚು ಜನರನ್ನು ಸೇರಿಸದೆ ಜಿಲ್ಲಾ ಮಟ್ಟದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕಿದೆ.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಜೆಯೂ ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ ಎಂದರು. ಆ. 15ರಂದು ಬೆಳಗ್ಗೆ 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಡಿಆರ್‌, ಸಿವಿಲ್‌, ಹೋಂ, ಅಬಕಾರಿ, ಅರಣ್ಯ ಮತ್ತು ಅಗ್ನಿ ಶಾಮಕದಳ ಒಟ್ಟು ಆರು ತಂಡಗಳು ಮಾತ್ರ ಪಥಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಎನ್‌ಸಿಸಿ, ಸ್ಕೌಟ್‌ ಮತ್ತು ಗೈಡ್‌ ಇತರೆ ವಿದ್ಯಾರ್ಥಿಗಳ ತಂಡಗಳಿಗೆ ಅವಕಾಶ ಇರುವುದಿಲ್ಲ. ಕೋವಿಡ್‌ ಸೈನಿಕರಾದ ವೈದ್ಯರು, ಆರೋಗ್ಯ ಸಿಬ್ಬಂದಿಗಳು, ಕೋವಿಡ್‌ ಗುಣಮುಖರಾದವರು, ಪೌರ ಕಾರ್ಮಿಕರು ಆಶಾ ಕಾರ್ಯರ್ಕತೆಯರು, ಅಂಗನವಾಡಿ ಕಾರ್ಯಕರ್ತೆಯರನ್ನು ಗೌರವಿಸಲಾಗುವುದು ಎಂದರು.

ಜಿಲ್ಲಾ ಮಟ್ಟದ ಇಲಾಖಾ ಮುಖ್ಯಸ್ಥರು ತಮ್ಮ ಕಚೇರಿಗಳಲ್ಲಿ ಬೆಳಗ್ಗೆ 7:30ಕ್ಕೆ ತಪ್ಪದೇ ಧ್ವಜಾರೋಹಣ ನೆರವೇರಿಸಬೇಕು. ನಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಬೆಳಿಗ್ಗೆ 7:50ಕ್ಕೆ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾಜರಿರುವಂತೆ ಸೂಚಿಸಿದರು. ಆ. 14 ಮತ್ತು 15 ರಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ವಿದ್ಯುತ್‌ ದೀಪಾಲಂಕಾರ ಮಾಡುವಂತೆ ಆಯಾ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಧ್ವಜಾರೋಹಣದ ಪೂರ್ವಸಿದ್ಧತೆ, ಧ್ವಜ ಕಟ್ಟುವ ಇತರೆ ಜವಾಬ್ದಾರಿಯನ್ನು ಜಿಲ್ಲಾ ರಕ್ಷಣಾಧಿಕಾರಿ, ಉಪ ನಿರೀಕ್ಷಕರು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮತ್ತು ಯುವಜನ ಸೇವಾ ಹಾಗೂ ಕ್ರೀಡಾಧಿಕಾರಿಗೆ ಜವಾಬ್ದಾರಿ ವಹಿಸಲಾಯಿತು. ವೇದಿಕೆ ನಿರ್ಮಾಣ, ಶಾಮಿಯಾನ, ವಿದ್ಯುತ್‌ ದೀಪಾಲಂಕಾರ ಇತರೆ ವ್ಯವಸ್ಥೆ, ಅಲಂಕಾರ, ಆಹ್ವಾನ ಪತ್ರಿಕೆ ಮುದ್ರಣ, ಕ್ರೀಡಾಂಗಣ ಸಿದ್ಧತೆ ಮತ್ತು ಸ್ವಚ್ಚತೆಯ ಜವಾಬ್ದಾರಿ ವಿವಿಧ ಇಲಾಖೆಯವರಿಗೆ ವಹಿಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್‌, ಜಿಪಂ ಸಿಇಒ ಡಾ| ವಿಜಯಮಹಾಂತೇಶ ದಾನಮ್ಮನವರ್‌, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್‌, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್‌ ಮುದಜ್ಜಿ ಇತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next