Advertisement

ಎತ್ತರದ ಗಣೇಶ ಪ್ರತಿಷ್ಠಾಪನೆಗೆ ನಿರ್ಬಂಧ

10:00 AM Aug 28, 2019 | Naveen |

ದಾವಣಗೆರೆ: ಸಾರ್ವಜನಿಕವಾಗಿ ಗರಿಷ್ಠ ಐದು ಅಡಿಗಿಂತ ಎತ್ತರದ ಗಣಪತಿ ಪ್ರತಿಷ್ಠಾಪಿಸಲು ಅನುಮತಿ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಜಿ.ಬೀಳಗಿ ತಿಳಿಸಿದ್ದಾರೆ.

Advertisement

ಮಂಗಳವಾರ, ತಮ್ಮ ಕಚೇರಿ ಸಭಾಂಗಣದಲ್ಲಿ ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಸರ್ಕಾರದ ಆದೇಶದ ಪ್ರಕಾರ 5 ಅಡಿಗಿಂತ ಎತ್ತರದ ಗಣಪತಿ ಪ್ರತಿಷ್ಠಾಪಿಸುವಂತಿಲ್ಲ. ಹಾಗಾಗಿ ನಗರದಲ್ಲಿಯೂ ಸಹ ಐದು ಅಡಿಗಿಂತ ಎತ್ತರದ ಗಣಪತಿ ಮೂರ್ತಿಗಳನ್ನು ಕೂರಿಸಲು ಯಾವುದೇ ಅನುಮತಿ ನೀಡಲಾಗುವುದಿಲ್ಲ ಎಂದರು.

ಅಲ್ಲದೆ, ಯಾವುದೇ ಕಾರಣಕ್ಕೂ ಪಿಓಪಿ ಗಣಪತಿ ಅಥವಾ ಪ್ಲಾಸ್ಟಿಕ್‌ ಗಣೇಶ ಮೂರ್ತಿಗಳನ್ನು ಹಬ್ಬಗಳಲ್ಲಿ ಬಳಸುವಂತಿಲ್ಲ. ಪರಿಸರಕ್ಕೆ ಹಾನಿಯಾಗದಂತೆ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆ ಹಾಗೂ ಅನ್ಯ ಜಿಲ್ಲೆ, ರಾಜ್ಯಗಳಿಂದ ಪಿಓಪಿ ಗಣಪತಿ ಮೂರ್ತಿಗಳನ್ನು ತಂದು ಮಾರಾಟ ಮಾಡುವಂತಿಲ್ಲ. ಹಾಗೇನಾದರೂ ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸಾರ್ವಜನಿಕರಿಗೆ ಪಿಓಪಿ ಗಣಪಗಳ ತಯಾರಿ ಮತ್ತು ಮಾರಾಟ ಕಂಡುಬಂದಲ್ಲಿ ಪಾಲಿಕೆಗೆ ಮಾಹಿತಿ ನೀಡಲು ಮನವಿ ಮಾಡಿದರು.

ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪಿಓಪಿಯಿಂದ ಸಿದ್ದಪಡಿಸಿದ ಗಣಪತಿಗಳನ್ನು ಬಳಸುವಂತಿಲ್ಲ. ಅಂತಹ ಮೂರ್ತಿಗಳನ್ನು ವಶಪಡಿಸಿಕೊಂಡು ಧಾರ್ಮಿಕ ವಿಧಿ-ವಿಧಾನಗಳಿಗೆ ಭಂಗವಾಗದಂತೆ ವಿಲೇವಾರಿ ಮಾಡಲಾಗುವುದು. ಪಿಓಪಿ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Advertisement

ಗಣೇಶ ಮೂರ್ತಿಗಳನ್ನು ಸಾರ್ವಜನಿಕರು ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ವಿಸರ್ಜಿಸಬೇಕು. ವಿಸರ್ಜನೆ ಸಂದರ್ಭದಲ್ಲಿ ಹಸಿಕಸ (ಹೂ-ಹಣ್ಣು, ಬಾಳೆಕಂಬ, ಮಾವಿನ ತೋರಣ ಇತ್ಯಾದಿ) ಸಮೇತ ಮೂರ್ತಿಗಳನ್ನು ವಿಸರ್ಜಿಸದೇ ಪ್ರತ್ಯೇಕವಾಗಿ ವಿಲೇವಾರಿ ಮಾಡಬೇಕು. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ ನಿಂದ ತಯಾರಿಸಿದ ಮೂರ್ತಿಗಳು, ಬಣ್ಣ ಲೇಪಿತ ವಿಗ್ರಹಗಳು ಪರಿಸರ ಹಾಗೂ ಜಲ ಮೂಲಗಳಿಗೆ ಹಾನಿಕಾರಕವಾಗಿದ್ದು, ಇದನ್ನು ತಡೆಗಟ್ಟಲು ಸೂಕ್ತ ಕ್ರಮ ವಹಿಸಿಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ವಾರ್ಡ್‌ ಮಟ್ಟದಲ್ಲಿ ಪೊಲೀಸರ ಸಹಯೋಗದೊಂದಿಗೆ ಸಮಿತಿಗಳನ್ನು ರಚಿಸಿಕೊಂಡು ಗಣೇಶ ಮೂರ್ತಿಗಳನ್ನು ಸೂಕ್ತ ವಿಲೇವಾರಿಗೆ ಕ್ರಮ ವಹಿಸಬೇಕು. ಸಾರ್ವಜನಿಕ ಗಣಪತಿಗಳನ್ನು ವಿಸರ್ಜಿಸಲು ನಿರ್ದಿಷ್ಟ ಜಲ ಮೂಲಗಳನ್ನು ನಿಗದಿಪಡಿಸಿ ಈ ಬಗ್ಗೆ ಸೂಕ್ತ ಪ್ರಕಟಣೆ ಹೊರಡಿಸಬೇಕು. ಶಾಲಾ-ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪರಿಸರಸ್ನೇಹಿ ಹಬ್ಬ ಆಚರಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಮಹಾನಗರಪಾಲಿಕೆ ಆಯುಕ್ತ ಮಂಜುನಾಥ್‌ ಬಳ್ಳಾರಿ ಮಾತನಾಡಿ, ಈಗಾಗಲೇ ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ ಮತ್ತು ಪಾಲಿಕೆಯಿಂದ ಬೇರೆ ಬೇರೆ ತಂಡಗಳನ್ನು ರಚಿಸಿ ಪಿಓಪಿ ವಿಗ್ರಹಗಳ ತಯಾರಿಕೆ ಮತ್ತು ಮಾರಾಟವಾಗದಂತೆ ಕ್ರಮವಹಿಸಲಾಗಿದೆ. ಮೂರ್ತಿಗಳ ವಿಸರ್ಜನೆ ವೇಳೆ ಹಸಿಕಸವನ್ನು ಹಾಕಲು ಪ್ರತ್ಯೇಕ ಟ್ರ್ಯಾಕ್ಟರ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಮಾತನಾಡಿ, ಜಿಲ್ಲೆ ಹಾಗೂ ತಾಲೂಕು ಮಟ್ಟಗಳಲ್ಲಿ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಈಗಾಗಲೇ ಸಮಿತಿ ರಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಬಾತಿ ಹಾಗೂ ಶಿರಮಗೊಂಡನಹಳ್ಳಿ ಹತ್ತಿರ ಮೂರ್ತಿಗಳ ವಿಸರ್ಜನೆಗೆ ಸ್ಥಳ ನಿಗದಿಪಡಿಸಲಾಗಿದೆ. ನಗರದಲ್ಲಿ ಗಣಪತಿ ಮೂರ್ತಿ ವಿಸರ್ಜನೆಗೆ ವಿವಿಧೆಡೆ 30 ಮೊಬೈಲ್ ಟ್ರ್ಯಾಕ್ಟರ್‌ (ನೀರಿರುವ)ಗಳ ವ್ಯವಸ್ಥೆ ಮಾಡಲಾಗುವುದು. ಜಗಳೂರು, ಮಲೆಬೇನ್ನೂರು, ಚನ್ನಗಿರಿ, ಹರಿಹರ ಹಾಗೂ ಹೊನ್ನಾಳಿಯಲ್ಲಿ ಮೂರ್ತಿಗಳ ವಿಸರ್ಜನೆಗೆ ಸ್ಥಳ ನಿಗದಿಪಡಿಸಲಾಗಿದೆ. ಹಬ್ಬದ ಮುಂಜಾಗ್ರತಾ ಕ್ರಮಗಳಾಗಿ ಮಣ್ಣಿನ ಗಣೇಶ ಮೂರ್ತಿ ಪೂಜಿಸಲು, ವಿಷಕಾರಿ ರಾಸಾಯನಿಕ, ಲೋಹ, ಪ್ಲಾಸ್ಟಿಕ್‌ ಲೇಪಿತ ಗಣೇಶ ಮೂರ್ತಿಗಳನ್ನು ಬಳಸದಂತೆ ಸೂಚಿಸಲಾಗಿದೆ ಎಂದು ಸಭೆ ಗಮನಕ್ಕೆ ತಂದರು.

ಸಾರ್ವಜನಿಕರ ಬಾವಿ, ಕೆರೆ, ಹೊಳೆ ಜಲಮೂಲಗಳಲ್ಲಿ ಮೂರ್ತಿಗಳನ್ನು ವಿಸರ್ಜಿಸದೇ ಬಕೆಟ್, ಸಂಚಾರಿ ವಿಸರ್ಜನಾ ವಾಹನ ಅಥವಾ ಸೂಚಿತ ನೀರಿನ ಕಟ್ಟೆಗಳಲ್ಲಿ ಮಾತ್ರ ವಿಸರ್ಜಿಸಬೇಕು. ಹಾಗೂ ಧ್ವನಿವರ್ಧಕಗಳನ್ನು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯ ವರೆಗೆ ಮಾತ್ರ ಬಳಸುವಂತೆ ಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ರಾಜೀವ್‌, ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಕೊಟ್ರೇಶ್‌, ತಹಶೀಲ್ದಾರ್‌ ಸಂತೋಷಕುಮಾರ್‌, ಇತರೆ ಇಲಾಖೆಗಳ ಅಧಿಕಾರಿಗಳಿದ್ದರು.

ನಿಯಮ ಮೀರಿದಲ್ಲಿ ಡಿಜೆಗಳ ವಶ, ಕ್ರಮ
ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿ, ಆರೋಗ್ಯ ಹಾಗೂ ಪರಿಸರ ಮಾಲಿನ್ಯ ತಡೆಯುವ ದೃಷ್ಟಿಯಿಂದ ಜಿಲ್ಲಾದ್ಯಂತ ಹೆಚ್ಚಿನ ಶಬ್ದ ಹೊರಸೂಸುವ ಎಲ್ಲಾ ಧ್ವನಿವರ್ಧಕ ಸಾಧನಗಳ ಬಳಕೆಯನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದಲ್ಲಿ ಡಿಜೆಗಳನ್ನು ಜಪ್ತಿ ಮಾಡಿ ಮಾಲೀಕರು ಹಾಗೂ ಸಂಘ ಸಂಸ್ಥೆಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು.
ಮಹಾಂತೇಶ ಜಿ.ಬೀಳಗಿ,
 ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next