Advertisement

ತುರ್ತು ಪರಿಸ್ಥಿತಿ ನಿರ್ವಹಣೆ ಸಿದ್ಧತೆಗೆ ಡಿಸಿ ಸೂಚನೆ

06:11 PM Jun 02, 2021 | Team Udayavani |

ಬಾಗಲಕೋಟೆ: ಪ್ರವಾಹ ಹಾಗೂ ಅತಿವೃಷ್ಟಿ ಯಂತಹ ತುರ್ತು ಪರಿಸ್ಥಿತಿ ಉಂಟಾದಲ್ಲಿ ತಕ್ಷಣಕ್ಕೆ ಜನರ ರಕ್ಷಣೆ ಹಾಗೂ ತಾತ್ಕಾಲಿಕ ಪುನರ್ವಸತಿಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹವಾಮಾನ ಇಲಾಖೆಯು ಕಾಲಕಾಲಕ್ಕೆ ಮುನ್ಸೂಚನೆ ಹಾಗೂ ಹವಾಮಾನ ವರದಿ ನೀಡಲಿದ್ದು, ಈ ವರದಿಯನ್ನು ಆಧರಿಸಿ ಸಂಬಂಧಿಸಿದ ಅಧಿಕಾರಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಪ್ರವಾಹ ನಿರ್ವಹಣೆಯಲ್ಲಿ ಚೆನ್ನಾಗಿ ಕಾರ್ಯನಿರ್ವಹಿಸಿದ್ದು, ಈ ಬಾರಿ ಕೂಡ ಅದೇ ರೀತಿಯಲ್ಲಿ ತಂಡಗಳನ್ನು ರಚಿಸಲು ತಿಳಿಸಿದರು.

ತುರ್ತು ಸಂದರ್ಭಗಳಲ್ಲಿ ನದಿ ತೀರದ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲು ಅಗತ್ಯವಿರುವ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲೆಗೆ ಅಗತ್ಯವಿರುವ ಬೋಟ್‌ಗಳ ಕುರಿತು ಎಲ್ಲ ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್‌ ರು ಕೂಡಲೇ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ತುರ್ತು ಸಂದರ್ಭದಲ್ಲಿ ಜನರನ್ನು ಸ್ಥಳಾಂತರಿಸಲು ಹಾಗೂ ಪರಿಹಾರ ಕಾರ್ಯಕ್ಕೆ ಅಗತ್ಯವಿರುವ ಸಿಬ್ಬಂದಿ ಮತ್ತು ಸ್ವಯಂಸೇವಾ ಸಂಸ್ಥೆಗಳ ಪಟ್ಟಿಯನ್ನು ಸಿದ್ಧವಾಗಿಟ್ಟುಕೊಳ್ಳಲು ತಿಳಿಸಿದರು. ದಿನದ 24 ಗಂಟೆ ಕಂಟ್ರೋಲ್‌ ರೂಮ್‌ ಸ್ಥಾಪನೆ ತುರ್ತು ಸಂದರ್ಭದಲ್ಲಿ ಪರಿಹಾರ ಹಾಗೂ ಪುನರ್ವಸತಿ ಕಾರ್ಯಗಳಿಗೆ ಅನುಕೂಲವಾಗುವಂತೆ ಮತ್ತು ಸಾರ್ವಜನಿಕರಿಗೆ ಸೂಕ್ತ ಮಾಹಿತಿ ಒದಗಿಸಲು ಎಲ್ಲ ತಾಲೂಕು ತಹಶೀಲ್ದಾರ್‌ ಕಾರ್ಯಾಲಯದಲ್ಲಿ ದಿನ 24 ಗಂಟೆಗಳ ಕಂಟ್ರೋಲ್‌ ರೂಮ್‌ ಸ್ಥಾಪಿಸಬೇಕು. ಈ ಕಂಟ್ರೋಲ್‌ ರೂಮ್‌ ಗಳು ಜಿಲ್ಲಾಮಟ್ಟದ ಕಂಟ್ರೋಲ್‌ ರೂಮ್‌ ಜತೆಗೆ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು.

ಸಂಬಂಧಿಸಿದ ನೋಡಲ್‌ ಅಧಿಕಾರಿಗಳು ತಮಗೆ ನಿಯೋಜಿಸಲಾದ ತಾಲೂಕುಗಳಿಗೆ ತೆರಳಿ ತಾಲೂಕು ಮಟ್ಟದಲ್ಲಿ ಸಭೆಯನ್ನು ನಡೆಸುವ ಮೂಲಕ ಕೆಳಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಮಾಹಿತಿ ನೀಡಬೇಕು ಎಂದರು. ಜಲಾಶಯ ಮಟ್ಟದ ಮೇಲೆ ನಿರಂತರ ನಿಗಾ: ಜಿಲ್ಲೆಯ ಹಾಗೂ ನೆರೆಯ ಮಹಾರಾಷ್ಟ್ರದ ಜಲಾಶಯಗಳ ಅಧಿಕಾರಿಗಳ ಜತೆ ನಿರಂತರ ಸಂಪರ್ಕವಿಟ್ಟುಕೊಂಡು ಜಲಾಶಯ ಮಟ್ಟ ಹಾಗೂ ನೀರು ಬಿಡುಗಡೆ ಬಗ್ಗೆ ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು.

ಜಲಾಶಯಗಳಿಂದ ನೀರು ಬಿಡುಗಡೆ ಕುರಿತು ಮುಂಚಿತವಾಗಿಯೇ ಜನರಿಗೆ ತಿಳಿಸುವ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಬೇಕು. ಇದರಿಂದ ಸಮಸ್ಯೆಗಳು ಉಂಟಾಗದಂತೆ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು. ಈ ಬಾರಿ ಕೋವಿಡ್‌ ಸೋಂಕು ಕೂಡ ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪರಿಹಾರ ಕೇಂದ್ರ ನಿರ್ವಹಣೆಗೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಪರಿಹಾರ ಕೇಂದ್ರಗಳಲ್ಲಿ ಸೂಕ್ತ ಅಂತರ ಕಾಯ್ದುಕೊಳ್ಳುವುದು; ಮಾಸ್ಕ್, ಸ್ಯಾನಿಟೈಸರ್‌ ವಿತರಣೆಗೆ ಕ್ರಮ ವಹಿಸಲು ತಿಳಿಸಿದರು.

Advertisement

ಮಳೆಗಾಲದಲ್ಲಿ ರಸ್ತೆಬದಿಯ ಮರಗಳು ಬಿದ್ದು ಸಂಚಾರಕ್ಕೆ ಮತ್ತು ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದ್ದರಿಂದ ಮಳೆಗಾಲ ಆರಂಭವಾಗುವುದಕ್ಕೆ ಮುಂಚೆಯೇ ಈ ಬಗ್ಗೆ ಗಮನಹರಿಸಬೇಕು ಎಂದು ಜಿಪಂ. ಸಿಇಒ ಟಿ. ಬೂಬಾಲನ್‌ ತಿಳಿಸಿದರು. ತುರ್ತು ಪರಿಸ್ಥಿತಿಯಲ್ಲಿ ಜನರ ರಕ್ಷಣೆಗೆ ಎಲ್ಲ ಅಗತ್ಯ ನೆರವು ನೀಡಲಾಗುವುದು ಎಂದು ಹಾಗೂ ತಾಲೂಕಿಗೊಂದರಂತೆ ತಂಡಗಳನ್ನು ರಚಿಸಿರುವ ಬಗ್ಗೆ ಸಭೆಯಲ್ಲಿ ಉಪಸ್ಥಿತರಿದ್ದ ಅಗ್ನಿಶಾಮಕ ಅಧಿಕಾರಿಗಳು ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ತಹಶೀಲ್ದಾರ್‌ ಎಸ್‌.ಎಸ್‌.ನಾಯ್ಕಲಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ, ವಿಪತ್ತು ನಿರ್ವಹಣಾ ಪರಿಣಿತ ಬಾಹುಬಲಿ ಕೊಂಡಾಳಿ ಮುಂತಾದವರುಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next