Advertisement

ಹಂತ ಹಂತಗಳಲ್ಲಿ ನೀರು; ಮಹಾ ಒಪ್ಪಿಗೆ

04:49 PM Jun 24, 2021 | Team Udayavani |

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಜಲಾಶಯಗಳು ಸಂಪೂರ್ಣ ಭರ್ತಿಯಾದಾಗ ಒಮ್ಮೆಲೇ ನೀರು ಬಿಡುಗಡೆ ಮಾಡಿದರೆ ರಾಜ್ಯದಲ್ಲಿ ತೊಂದರೆಯಾಗುತ್ತದೆ. ಆದ್ದರಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

Advertisement

ಮುಂಗಾರು ಮಳೆಯಿಂದ ತೊಂದರೆಗೊಳಗಾದ ಪ್ರದೇಶಗಳಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಚಿಕ್ಕೋಡಿ ಉಪವಿಭಾಗ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಂತ ಹಂತವಾಗಿ ನೀರು ಬಿಡುಗಡೆಗೆ ಮಹಾರಾಷ್ಟ್ರ ಸರಕಾರ ಸಹಮತ ವ್ಯಕ್ತಪಡಿಸಿದೆ. ಪ್ರವಾಹ ಪರಿಸ್ಥಿತಿ ಉದ್ಭವಿಸಿದರೆ ನದಿತೀರದ ಜನರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಪ್ರವಾಹ ಬಂದಾಗ ಸಂಪೂರ್ಣ ಜಲಾವೃತವಾಗುವ ಗ್ರಾಮಗಳ ಜನರು ಹಾಗೂ ಜಾನುವಾರುಗಳ ರಕ್ಷಣೆಗೆ ಆದ್ಯತೆ ನೀಡಬೇಕು. ಪ್ರವಾಹ ಸಂದರ್ಭದಲ್ಲಿ ತುರ್ತು ಸೇವೆಗೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ದೀರ್ಘ‌ ರಜೆ ನೀಡಬಾರದು. ತುರ್ತು ಸಂದರ್ಭದಲ್ಲಿ ಚಿಕಿತ್ಸೆಗೆ ಅಗತ್ಯವಿರುವ ಔಷಧ ಮತ್ತಿತರ ಅಗತ್ಯ ಸಾಮಗ್ರಿಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಚಿಕಿತ್ಸೆಗೆ ಆಗಮಿಸುವ ಜನರಿಗೆ ಔಷಧ ಚೀಟಿ ಬರೆದುಕೊಟ್ಟರೆ ಸಂಬಂಧಿಸಿದ ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮನೆ ಹಾನಿ ಸಮೀಕ್ಷೆ: ಮನೆ ಹಾನಿಯ ಕುರಿತು ಅನೇಕ ಜನರು ಅಹವಾಲು ಸಲ್ಲಿಸುತ್ತಾರೆ. ಮುಕ್ತ ಮನಸ್ಸಿನಿಂದ ಪರಿಹಾರ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಬೇಕು. ಮಣ್ಣು ಹಾಗೂ ಮೇಲ್‌ ಮುದ್ದಿಗಳು ಈ ಭಾಗದಲ್ಲಿ ಪಕ್ಕಾ ಮನೆಗಳೇ ಆಗಿರುವುದರಿಂದ ಅವುಗಳನ್ನು ಪಕ್ಕಾ ಮನೆ ಎಂದೇ ಪರಿಗಣಿಸಿ ಪರಿಹಾರ ನೀಡಬೇಕು. ಭಾಗಶಃ ಮನೆಹಾನಿಗಳನ್ನು ಸಮೀಕ್ಷೆ ಮಾಡುವಾಗ ಸ್ಥಳೀಯ ಜನರ ಸ್ಥಿತಿಗತಿ ಆಧರಿಸಿ ಉದಾರ ಮನೋಭಾವದಿಂದ ಪರಿಹಾರಕ್ಕೆ ಪರಿಗಣಿಸಬೇಕು ಎಂದರು.

ಪ್ರವಾಹ ಮುನ್ನೆಚ್ಚರಿಕೆ ಅಗತ್ಯ: ಪ್ರತಿವರ್ಷ ಪ್ರವಾಹ ಉಂಟಾಗುತ್ತಿದೆ. ಈ ಬಾರಿ ಆರಂಭದಲ್ಲಿಯೇ ಜಾಸ್ತಿ ಮಳೆಯಾಗಿರುವುದರಿಂದ ಬಹಳಷ್ಟು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ವಿಧಾನಪರಿಷತ್‌ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. ನೆರೆಯ ರಾಜ್ಯದ ಅಧಿಕಾರಿಗಳ ಜತೆ ಸಮನ್ವಯದಿಂದ ಪ್ರವಾಹ ಸ್ಥಿತಿ ನಿರ್ವಹಿಸಬೇಕು. ನದಿತೀರದ ಗ್ರಾಮಗಳಲ್ಲಿ ಕೆಲವು ಕಡೆ ಹೆಚ್ಚಿನ ಜನಸಂಖ್ಯೆ ಇರುವುದರಿಂದ ತುರ್ತು ಸಂದರ್ಭದಲ್ಲಿ ತಕ್ಷಣವೇ ಸ್ಥಳಾಂತರಕ್ಕೆ ಅನುಕೂಲವಾಗುವಂತೆ ಆಯಾ ಗ್ರಾಮದಲ್ಲಿ ಬೋಟ್‌ ಸಜ್ಜಾಗಿಟ್ಟಿರಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಪ್ರವಾಹ ಸಂದರ್ಭದಲ್ಲಿ ಜನರನ್ನು ಸ್ಥಳಾಂತರಿಸಿ ತಾತ್ಕಾಲಿಕ ವಸತಿ ಕಲ್ಪಿಸಲು ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶಗಳಿದ್ದು, ಈ ಬಗ್ಗೆ ಪರಿಶೀಲಿಸಬೇಕು ಎಂದು ಮಹಾಂತೇಶ ಕವಟಗಿಮಠ ತಿಳಿಸಿದರು.

Advertisement

ನೆರೆ ರಾಜ್ಯದ ಗಡಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ಈ ಬಾರಿ ಕೂಡ ಸಮಸ್ಯೆ ಉದ್ಭವಿಸದಂತೆ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಈಗಾಗಲೇ ಕಾಳಜಿ ಕೇಂದ್ರಕ್ಕಾಗಿ ಗುರುತಿಸಲಾಗಿರುವ ಯಾವುದಾದರೂ ಶಾಲಾ ಕಟ್ಟಡಗಳು ಶಿಥಿಲಗೊಂಡಿದ್ದರೆ ಅವುಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಚಿಕ್ಕೋಡಿ ಉಪ ವಿಭಾಗದಲ್ಲಿ ಇದುವರೆಗೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ ಉಪ ವಿಭಾಗಾಧಿಕಾರಿ ಯುಕೇಶ್‌ ಕುಮಾರ್‌, ಜೂನ್‌ ತಿಂಗಳಲ್ಲಿ ಒಟ್ಟಾರೆ ವಾಡಿಕೆ ಮಳೆಗಿಂತ ಶೇ.94 ಅಧಿಕ ಮಳೆಯಾಗಿದೆ. ಸದ್ಯಕ್ಕೆ ಕೇವಲ 67 ಕ್ಯೂಸೆಕ್‌ ನೀರಿನ ಹರಿವು ಇದೆ. ಎರಡೂವರೆ ಲಕ್ಷ ಕ್ಯೂಸೆಕ್‌ ನೀರಿನ ಹರಿವು ಇದ್ದರೆ ಮಾತ್ರ ಪ್ರವಾಹ ಸ್ಥಿತಿ ಉದ್ಭವಿಸುತ್ತದೆ ಎಂದು ತಿಳಿಸಿದರು. ಎಲ್ಲ ತಾಲೂಕುಗಳಲ್ಲಿ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ. ಎಸ್‌.ಡಿ.ಆರ್‌.ಎಫ್‌ ಹಾಗೂ ಎನ್‌.ಡಿ.ಆರ್‌. ಎಫ್‌. ತಂಡಗಳನ್ನು ನಿಯೋಜಿಸಲಾಗಿದೆ. ನುರಿತ ಈಜುಗಾರರನ್ನು ಗುರುತಿಸಲಾಗಿದ್ದು, ಅಗತ್ಯತೆ ಆಧರಿಸಿ ಅವರ ಸೇವೆಯನ್ನು ಪಡೆದುಕೊಳ್ಳಲಾಗುವುದು ಎಂದರು. ಇತ್ತೀಚೆಗೆ ಸುರಿದ ಮಳೆಯಲ್ಲಿ 43 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಚಿಕ್ಕೋಡಿ ಉಪ ವಿಭಾಗದಲ್ಲಿ 168 ಕಾಳಜಿ ಕೇಂದ್ರಗಳನ್ನು ಸಿದ್ಧಪಡಿಸಲಾಗಿಟ್ಟುಕೊಳ್ಳಲಾಗಿದೆ ಎಂದು ಯುಕೇಶ್‌ ಕುಮಾರ್‌ ಹೇಳಿದರು.

ಸಭೆಯಲ್ಲಿ ಜವಳಿ ಮತ್ತು ಕೈಮಗ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ, ರಾಜ್ಯಸಭೆ ಸದಸ್ಯ ಈರಣ್ಣಾ ಕಡಾಡಿ, ಶಾಸಕ ಮಹೇಶ ಕುಮಟೊಳ್ಳಿ, ಜಿಪಂ ಸಿಇಒ ದರ್ಶನ್‌ ಎಚ್‌ .ವಿ., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿಡಿಪಿಐ ಗಜಾನನ ಮನ್ನಿಕೇರಿ, ಡಿವೈಎಸ್‌ಪಿ ಮನೋಜ ನಾಯಿಕ, ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next