ಬೆಂಗಳೂರು: ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕೇರಳ ರಾಜ್ಯಗಳಲ್ಲಿ ಕೋವಿಡ್ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಕಾರ್ಯವನ್ನು ತೀವ್ರಗೊಳಿಸಿ, ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಲು ಕ್ರಮಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಮುಖ್ಯಕಾರ್ಯದರ್ಶಿವರಿಗೆ ಡಿಸಿಎಂ ಗೋವಿಂದ ಕಾರಜೋಳ ಪತ್ರ ಬರೆದಿದ್ದಾರೆ.
ನೆರೆ ರಾಜ್ಯಗಳಲ್ಲಿ ಕೋವಿಡ್ ಉಲ್ಬಣವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಗಡಿ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ಅನೇಕ ತಾಲೂಕುಗಳು ನೆರೆ ರಾಜ್ಯಗಳಿಗೆ ಹೊಂದಿಕೊಂಡಿವೆ. ಸಾರ್ವಜನಿಕರು, ಕೂಲಿ ಮಾಡುವ ಜನರು ನೆರೆ ರಾಜ್ಯಗಳಿಗೆ ಪ್ರತಿ ನಿತ್ಯ ಸಂಚರಿಸುತ್ತಿದ್ದಾರೆ. ಅಲ್ಲದೇ ಜೀವನೋಪಾಯಕ್ಕಾಗಿ ಹೆಚ್ಚು ಜನರು ಗೋವಾಕ್ಕೆ ಹೋಗಿ ಬರುತ್ತಿರುವ ಹಿನ್ನೆಲೆಯಲ್ಲಿ ಇವರಿಗೆ ಸೋಂಕು ತಗುಲಿ ಗಡಿ ಜಿಲ್ಲೆಗಳಲ್ಲಿ ಕೊರೊನಾ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ಯುರೋಪ್, ಅಮೆರಿಕ, ಕೊಲ್ಲಿ ರಾಷ್ಟ್ರಗಳಿಂದ ಬೆಂಗಳೂರಿಗೆ ಹೆಚ್ಚಬೇಕು ವಿಮಾನ ಸೌಲಭ್ಯ
ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟು ತಪಾಸಣೆಗೊಳಪಡಿಸಿ ಮುಂಜಾಗ್ರತಾ ಕ್ರಮಕೈಗೊಳ್ಳಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಆದೇಶಿಸುವಂತೆ ಡಿಸಿಎಂ ಗೋವಿಂದ ಕಾರಜೋಳ ಸೂಚಿಸಿದ್ದಾರೆ.