Advertisement

ಕೋವಿಡ್ ಹೆಚ್ಚಳ: ಸಾರ್ವಜನಿಕರ ನೆರವಿಗೆ ಧಾವಿಸುವಂತೆ ಡಿಸಿಎಂ ಅಶ್ವತ್ಥನಾರಾಯಣ ಕರೆ

08:47 PM Apr 17, 2021 | Team Udayavani |

ಬೆಂಗಳೂರು: ಕೋವಿಡ್‌ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ ಜನರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಶನಿವಾರ ಪಕ್ಷದ ಮುಖಂಡರ ಸಭೆ ನಡೆಸಿದರು.

Advertisement

ಸಾರ್ವಜನಿಕರಿಗೆ ಪಕ್ಷದಿಂದ ನೆರವಿನ ಹಸ್ತ ಚಾಚುವುದು ಮಾತ್ರವಲ್ಲದೆ, ಕ್ಷೇತ್ರದಲ್ಲಿ ಜನರು ಮತ್ತು ಆಸ್ಪತ್ರೆಗಳ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದ ಡಿಸಿಎಂ , ಲಸಿಕೆ ಅಭಿಯಾನಕ್ಕೂ ಕೈಜೋಡಿಸಬೇಕು ಎಂದರು.

ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಡಿಸಿಎಂ ಕೊಟ್ಟ ಸೂಚನೆಗಳು :

ಕ್ಷೇತ್ರದಲ್ಲಿ ಕೋವಿಡ್‌ ಸೋಂಕು ಹೆಚ್ಚಾಗುವುದನ್ನು ತಡೆಯಲು ಪಕ್ಷದಿಂದ ಎಲ್ಲ ಪ್ರಯತ್ನವನ್ನೂ ಮಾಡಬೇಕು. ಕಾರ್ಯಕರ್ತರು ಮನೆಮನೆಗೂ ಭೇಟಿ ನೀಡಿ ಕೆಮ್ಮು, ನೆಗಡಿ, ಶೀತ ಇತ್ಯಾದಿ ಯಾವುದೇ ರೋಗ ಲಕ್ಷಣಗಳಿದ್ದವರನ್ನು ಪತ್ತೆ ಹಚ್ಚಿ ಅವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವೊಲಿಸಬೇಕು. ಜತೆಗೆ ಎಲ್ಲರೂ ಲಸಿಕೆ ಪಡೆಯುವಂತೆ ಹೇಳಬೇಕು.

ರೋಗದ ಸೋಂಕು ತಗುಲಿದ ಕೂಡಲೇ ಚಿಕಿತ್ಸೆ ಪಡೆಯಬೇಕು. ಉಲ್ಬಣ ಸ್ಥಿತಿಗೆ ರೋಗ ಬಂದಾಗ ಅದನ್ನು ನಿಯಂತ್ರಿಸುವುದು ಕಷ್ಟವಾಗುತ್ತದೆ. ಈ ಅಂಶವನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು.

Advertisement

ಕೋವಿಡ್‌ ಪರೀಕ್ಷಾ ಕೇಂದ್ರಗಳು, ಲಸಿಕೆ ಹಾಕುವ ಕೇಂದ್ರಗಳ ಬಗ್ಗೆ ಜನರಿಗೆ ಕರಪತ್ರಗಳನ್ನು ಹಂಚುವ ಮೂಲಕ ಮಾಹಿತಿ ನೀಡಿ. ಜತೆಗೆ, ವಾರ್ಡುವಾರು ವಾಟ್ಸಾಪ್‌ ಗ್ರೂಪ್‌ಗಳನ್ನು ಮಾಡಿಕೊಂಡು ಮಾಹಿತಿ ವಿನಿಮಯ ಮಾಡಿಕೊಳ್ಳಿ. ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಿ.  ಜನರಿಗೆ ಅಗತ್ಯ ಮಾಹಿತಿ ಸಿಗುವಂತೆ ಎಲ್ಲ ಪ್ರಯತ್ನಗಳನ್ನೂ ಮಾಡಿ.

ಕ್ಷೇತ್ರದಲ್ಲಿರುವ ಹಿರಿಯ ನಾಗರಿಕರು, ವಿಕಲಚೇತನರು, ದೈಹಿಕವಾಗಿ ಅಥವಾ ಆರ್ಥಿಕವಾಗಿ ದುರ್ಬಲರಾಗಿರುವ ಜನರಿಗೆ ನೆರವಾಗಿ. ಅವರಿಗೆ ವೈದ್ಯಕೀಯ ಸೇವೆ, ಔಷಧ ಇತ್ಯಾದಿ ಸುಲಭವಾಗಿ ಸಿಗುವಂತೆ ಮಾಡಲು ಸಹಾಯ ಮಾಡಿ. ಕೋವಿಡ್‌ ಸೋಂಕು ಬಂದಾಗ ಲಾಕ್‌ಡೌನ್‌ ಇದ್ದ ಸಂದರ್ಭದಲ್ಲಿ ಅರ್ಪಣಾ ಮನೋಭಾವದಿಂದ ನಾವೆಲ್ಲರೂ ಕೆಲಸ ಮಾಡಿದ್ದೆವು. ಈಗಲೂ ಹಾಗೆಯೇ ಜನರ ಸೇವೆ ಮಾಡಬೇಕು.

ಯಾವುದೇ ಕಾರಣಕ್ಕೂ ಕೋವಿಡ್‌ನಿಂದ ಪ್ರಾಣ ನಷ್ಟ ಆಗಬಾರದು. ಜನರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ, ಪಕ್ಷದಿಂದ ಆಗುವ ಎಲ್ಲ ನೆರವನ್ನೂ ಒದಗಿಸಬೇಕು.

ಸಭೆಯಲ್ಲಿ ಪಕ್ಷದ ಉತ್ತರ ವಿಭಾಗದ ಉಪಾಧ್ಯಕ್ಷ ಡಾ.ವಾಸು, ಮಲ್ಲೇಶ್ವರ ಕ್ಷೇತ್ರದ ಮಂಡಲ ಅಧ್ಯಕ್ಷರಾದ ಕಾವೇರಿ ಕೇದಾರನಾಥ್‌ ಮುಂತಾದವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next