Advertisement

ರೈತರ ಉತ್ಪನ್ನಕ್ಕೆ ಉತ್ತಮ ಬೆಲೆ ಘೋಷಿಸಿ

03:04 PM Jan 14, 2022 | Shwetha M |

ತಾಳಿಕೋಟೆ: ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಭಾರತೀಯ ಕಿಸಾನ್‌ ಸಂಘ ಕರ್ನಾಟಕ ಪ್ರದೇಶ ಉತ್ತರ ಕರ್ನಾಟಕ ಪ್ರಾಂತ ತಾಲೂಕು ಘಟಕದ ನೇತೃತ್ವದಲ್ಲಿ ತಹಶೀಲ್ದಾರ್‌ ಅನೀಲಕುಮಾರ ಢವಳಗಿ ಮೂಲಕ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಮನವಿ ಸಲ್ಲಿಸಿದರು.

Advertisement

ಜೀವನಕ್ಕೆ ಅತ್ಯವಶ್ಯವಾಗಿ ಬೇಕಾದ ಆಹಾರ ಉತ್ಪಾದಿಸುವ ಕೃಷಿ ಕ್ಷೇತ್ರ ಇಂದು ದುಸ್ಥಿತಿಯತ್ತ ಸಾಗುತ್ತಿದೆ. 1990ರ ದಶಕದಿಂದ 3.5 ಲಕ್ಷಕ್ಕೂ ಅಧಿ ಕ ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಪ್ರತಿ ವರ್ಷ ಕೃಷಿ ತ್ಯಜಿಸಿ ನಗರದತ್ತ ಸಾಗುತ್ತಿರುವವರ ಸಂಖ್ಯೆ ಏರುತ್ತಿದೆ. ರೈತರು ಬೆಳೆಗಳ ವೆಚ್ಚ ಅಧಿಕವಾಗಿ, ಪ್ರಕೃತಿ ವಿಕೋಪದಿಂದ ನಷ್ಟವುಂಟಾಗಿ ಮತ್ತು ಲಾಭದಾಯಕ ಬೆಲೆ ಸಿಗದ ಕಾರಣ ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಬೇರೆ ಕ್ಷೇತ್ರಗಳ ಉತ್ಪಾದಕರು ತಾವು ಉತ್ಪಾದಿಸಿದ ಉತ್ಪನ್ನಗಳಿಗೆ ತಾವೇ ದರ ನಿಗದಿಪಡಿಸುತ್ತಾರೆ. ಆದರೆ ರೈತನಿಗೆ ಮಾತ್ರ ಇದು ಸಾಧ್ಯವಾಗುತ್ತಿಲ್ಲ. ಮಧ್ಯವರ್ತಿಗಳು ದರ ನಿಗದಿ ಮಾಡುತ್ತಿದ್ದಾರೆ. ಇದೇ ಪರಿಸ್ಥಿತಿ ಹೀಗೆ ಮುಂದುವರಿದರೆ ಕೃಷಿ ಕ್ಷೇತ್ರ ಅವನತಿಗೊಂಡು ಆಹಾರದ ಅಭಾವ ಉಂಟಾಗುತ್ತದೆ. ಈ ವ್ಯವಸ್ಥೆ ಸರಿಯಾಗಬೇಕಾದರೆ ರೈತರಿಗೆ ಉತ್ಪಾದನಾ ವೆಚ್ಚದ ಆಧಾರದ ಮೇಲೆ ಲಾಭದಾಯಕ ಬೆಲೆ ದೊರೆಯುವಂತಾಗಬೇಕು. ರೈತರ ಆದಾಯ ದ್ವಿಗುಣಗೊಳ್ಳಬೇಕೆಂಬುದು ಕೇಂದ್ರ ಸರ್ಕಾರದ ಉತ್ತಮ ಚಿಂತನೆಯೇ ಸರಿ. ಆದರೆ, ಸರ್ಕಾರ ಕೇವಲ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಿಸಿದರೆ ಸಾಲದು. ರೈತನ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸಿ, ಕಡಿಮೆ ಬೆಲೆಗೆ ಖರೀದಿಯಾಗಬಾರದು, ಪ್ರತಿ ವರ್ಷ ಬೆಲೆ ಘೋಷಣೆಯು ಹಣದುಬ್ಬರ ದರಕ್ಕೆ ಅನುಗುಣವಾಗಿರಲಿ, ಮಂಡಿಯೊಳಗೆ ಅಥವಾ ಹೊರಗೆ ಘೋಷಿತ ಬೆಲೆಗಿಂತ ಕಡಿಮೆ ದರದಲ್ಲಿ ಖರೀದಿಸಿದರೆ ಶಿಕ್ಷಾರ್ಹವಾಗಿಸಬೇಕೆಂಬ ವಿವಿಧ ಬೇಡಿಕೆ ಈಡೇರಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ರಾಷ್ಟ್ರಪತಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಈ ವೇಳೆ ಭಾರತೀಯ ಕಿಸಾನ್‌ ಸಂಘ ಕರ್ನಾಟಕ ಪ್ರದೇಶ ಉತ್ತರ ಕರ್ನಾಟಕ ಪ್ರಾಂತ ತಾಲೂಕು ಘಟಕದ ಅಧ್ಯಕ್ಷ ಹಣಮಗೌಡ ಬಸರಡ್ಡಿ, ಕಾರ್ಯದರ್ಶಿ ಬಿ.ಎಸ್‌. ಇಸಾಂಪೂರ, ಜಿಲ್ಲಾ ಉಪಾಧ್ಯಕ್ಷ ಎನ್‌. ಎಸ್‌.ದೇಸಾಯಿ, ಐ.ಎನ್‌. ಚೋರಗಸ್ತಿ, ಎನ್‌.ಜೆ. ಅಂಬಿಗೇರ, ಎಸ್‌.ಎಸ್‌. ಹಜೇರಿ, ನಾನಾಗೌಡ ಬಸರಡ್ಡಿ, ಕರಿಂ ಜಮಾದಾರ, ಸಿದ್ರಾಮ ಕೊಡಗಾನೂರ, ಯಲ್ಲಪ್ಪ ಚಲವಾದಿ, ಆರ್‌.ಡಿ. ಬಿಳಗಿ, ಐ.ಎಂ. ಕಂದಗಲ್ಲ, ಬಿ.ಐ. ಹಿರೇಮಠ, ಶಂಕರಗೌಡ ಪಾಟೀಲ, ರಾಮಪ್ಪ ಹರಿಜನ, ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next