Advertisement

ಹೊಸ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್ : ಗಡಿಭಾಗಗಳಲ್ಲಿ ಹೆಚ್ಚಿನ ಪರೀಕ್ಷೆ : ಸುಧಾಕರ್

08:28 PM Jun 27, 2021 | Team Udayavani |

ಬೆಂಗಳೂರು/ಚಿಕ್ಕಬಳ್ಳಾಪುರ : ಕೋವಿಡ್ ಹೊಸ ವೈರಾಣು ನಿಯಂತ್ರಣಕ್ಕೆ ಜೀನೋಮ್ ಸೀಕ್ವೆನ್ಸ್ ಮಾಡುತ್ತಿದ್ದು, 600 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡೆಲ್ಟಾ ಪ್ಲಸ್ ವೈರಾಣು ಸೋಂಕಿನ ಇಬ್ಬರು ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನೂ 600 ಮಾದರಿಗಳನ್ನು ಜಿನೋಮ್ ಸೀಕ್ವೆನ್ಸ್ ಗೆ ಕಳುಹಿಸಲಾಗಿದೆ. ಈ ವರದಿ ಬರಲಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ರಾಜ್ಯಗಳಲ್ಲಿ ಇರುವಂತಹ ಕೊರೊನಾ ಆತಂಕ ನಮ್ಮಲ್ಲಿ ಇನ್ನೂ ಬಂದಿಲ್ಲ. ಆದರೆ ಮಹಾರಾಷ್ಟ್ರ ಮತ್ತು ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ. ರಾಜ್ಯಕ್ಕೆ ಪ್ರವೇಶಿಸುವವರಿಗೆ ರಾಂಡಮ್ ಆಗಿ ಪರೀಕ್ಷೆ ಮಾಡಲು ಸೂಚಿಸಲಾಗಿದೆ ಎಂದರು.

ಬೆಂಗಳೂರಿನಲ್ಲಿ 50 ಲಕ್ಷಕ್ಕೂ ಅಧಿಕ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ದೇಶದ ಯಾವುದೇ ನಗರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕೆ ನೀಡಿಲ್ಲ. ಹೀಗಾಗಿ ಇದೊಂದು ದಾಖಲೆಯಾಗಿದೆ. ರಾಜ್ಯದಲ್ಲಿ ಮೊದಲನೇ ಡೋಸ್ ಪಡೆದವರ ಪ್ರಮಾಣ ಶೇ.40 ರಷ್ಟಿದೆ (1.85 ಕೋಟಿ). 45 ಲಕ್ಷಕ್ಕೂ ಹೆಚ್ಚು ಜನರು ಎರಡೂ ಡೋಸ್ ಪಡೆದಿದ್ದಾರೆ. ಲಸಿಕೆ ನೀಡಲು ಆದ್ಯತೆಯಲ್ಲಿ ಕೆಲ ಗುಂಪುಗಳನ್ನು ರಚಿಸಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯಡಿ ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಯ ಕುಟುಂಬದವರು, ಪೊಲೀಸರ ಕುಟುಂಬದವರು, ಮಾಧ್ಯಮದವರು, ಹೀಗೆ ಜನಸಂಪರ್ಕ ಹೆಚ್ಚು ಇರುವವರನ್ನು ರಕ್ಷಣೆ ಮಾಡಲು ಆದ್ಯತೆ ನೀಡಲಾಗಿದೆ. 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪಾಲಕರಿಗೆ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು ಎಂದರು.

ಇದನ್ನೂ ಓದಿ :ಒಲಿಂಪಿಕ್ಸ್‌: ಭಾರತ ಸೇರಿ ಇತರ 5 ದೇಶಗಳ ಕ್ರೀಡಾಳುಗಳಿಗೆ ಹೆಚ್ಚಿನ ಕೋವಿಡ್‌ ಟೆಸ್ಟ್‌

ಬೇರೆ ರಾಜ್ಯಗಳಿಂದ ಬರುವವರನ್ನು ನೂರಕ್ಕೆ ನೂರು ವೈದ್ಯಕೀಯ ತಪಾಸಣೆ ಮಾಡಲು ಸಾಧ್ಯವಾಗುತ್ತಿಲ್ಲ. ಆದರೂ ಸಾಧ್ಯವಾದಷ್ಟು ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಕೇರಳ ಒಂದರಿಂದಲೇ ಕೆಲವು ಲಕ್ಷ ಜನರು ರಾಜ್ಯದೊಳಗೆ ಬರುತ್ತಿದ್ದಾರೆ. ಆದರೂ ಇದನ್ನು ಗಂಭೀರವಾಗಿ ಪರಿಗಣಿಸಿ ಸಾಧ್ಯವಾದಷ್ಟು ಜನರಿಗೆ ಪರೀಕ್ಷೆ ಮಾಡಲಾಗುತ್ತಿದೆ. ಜನರು ಲಸಿಕೆ ಪಡೆಯಲೇಬೇಕು. ಪಡೆದ ನಂತರವೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಇದರಿಂದಲೇ ಕೋವಿಡ್ ನಿಂದ ದೂರವಿರಲು ಸಾಧ್ಯ ಎಂದರು.

Advertisement

ಮಕ್ಕಳ ದತ್ತು

ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಚಿಕ್ಕಬಳ್ಳಾಪುರ ಜಿಲ್ಲೆಯ 9 ಮಕ್ಕಳನ್ನು ಸಚಿವರು ದತ್ತು ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಜಿಲ್ಲಾಡಳಿತಕ್ಕೆ ಈ ಕುರಿತು ಮಾಹಿತಿ ನೀಡಲಾಗಿದೆ. ಈ ಮಕ್ಕಳ ಶೈಕ್ಷಣಿಕ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಪ್ರತಿ ಮಕ್ಕಳಿಗೆ ತಲಾ 1 ಲಕ್ಷ ರೂ. ನೀಡಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಈ ರೀತಿ ದತ್ತು ಪಡೆಯುವ ಅಗತ್ಯವಿದೆ. ಮುಖ್ಯಮಂತ್ರಿಗಳು ಇದಕ್ಕಾಗಿ ಯೋಜನೆಯನ್ನು ಈಗಾಗಲೇ ಜಾರಿ ಮಾಡಿದ್ದಾರೆ ಎಂದರು.

ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವಿಗೀಡಾದ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next