Advertisement

ನ್ಯಾ|ನಾಗಮೋಹನದಾಸ್‌ ವರದಿ ಜಾರಿಗೆ ಒತ್ತಾಯ

05:49 PM May 14, 2022 | Team Udayavani |

ರಾಯಚೂರು: ನ್ಯಾ| ನಾಗಮೋಹನದಾಸ್‌ ವರದಿ ಜಾರಿಗೊಳಿಸುವ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಒತ್ತಾಯಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

Advertisement

ಪರಿಶಿಷ್ಟ ಜಾತಿ ಶೇ.15ರಿಂದ ಶೇ.17 ಹಾಗೂ ಪರಿಶಿಷ್ಟ ಪಂಡಗಕ್ಕೆ ಶೇ.3ರಿಂದ ಶೇ.7.5 ಮೀಸಲಾತಿ ಹೆಚ್ಚಿಸಬೇಕು ಎಂಬ ಬೇಡಿಕೆಯಿದೆ. ಆದರೆ, ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಚುನಾವಣೆ ಪೂರ್ವದಲ್ಲಿ ನೀಡಿದ ಬೇಡಿಕೆ ಈಡೇರಿಸುತ್ತಿಲ್ಲ. ಈ ಹಿಂದಿನ ಸಮ್ಮಿಶ್ರ ಸರ್ಕಾರವು ನಿವೃತ್ತ ನ್ಯಾ| ಎಚ್‌. ಎನ್‌ ನಾಗಮೋಹನದಾಸ್‌ ಅಧ್ಯಕ್ಷತೆಯಲ್ಲಿ ಆಯೋಗ ರಚನೆ ಮಾಡಲಾಗಿತ್ತು. ರಾಜಕೀಯ ಬದಲಾವಣೆ ಹಿನ್ನೆಲೆಯಲ್ಲಿ ನಂತರ ಅಧಿಕಾರಕ್ಕೆ ಬಂದ ಸರ್ಕಾರವೂ ಆಯೋಗ ಮುಂದುವರಿಸಿ ಆದೇಶ ಹೊರಡಿಸಿತ್ತು. ರಾಜನಹಳ್ಳಿಯಲ್ಲಿರುವ ಮಹರ್ಷಿ ವಾಲ್ಮೀಕಿ ಗುರುಪೀಠದ ಆಶ್ರಯದಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಾಗಮೋಹನದಾಸ್‌ ವರದಿ ಬಂದ ತಕ್ಷಣ ಮೀಸಲಾತಿ ಹೆಚ್ಚಿಸುವ ಭರವಸೆ ನೀಡಿದ್ದರು. ಆದರೆ, ವರದಿ ಜಾರಿಯಾಗಿ ಒಂದು ವರ್ಷ 8 ತಿಂಗಳು ಕಳೆದರೂ ಇನ್ನೂ ಜಾರಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈಗ ಪ್ರಸನ್ನಾನಂದಪುರಿ ಸ್ವಾಮಿ ಕಳೆದ ಮೂರು ತಿಂಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮೀಸಲಾತಿಗಾಗಿ ಹೋರಾಟ ನಡೆಸಿದ್ದಾರೆ. ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದ್ದು, ಮುಖ್ಯಮಂತ್ರಿ ಮಾತ್ರ ಬದಲಾಗಿದ್ದಾರೆ. ಆದರೆ, ನಮ್ಮ ಬೇಡಿಕೆಗೆ ಮಾತ್ರ ಸ್ಪಂದಿಸುತ್ತಿಲ್ಲ. ಮೀಸಲಾತಿ ಹೆಚ್ಚಳದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳದಿದ್ದಲ್ಲಿ 19ರಂದು ಜಿಲ್ಲಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಕೆ. ಶಿವಕುಮಾರ ವಕೀಲ, ಉಪಾಧ್ಯಕ್ಷ ಎಂ. ಭೀಮರಾಯ ವಕೀಲ, ಪ್ರಧಾನ ಕಾರ್ಯದರ್ಶಿ ಹನುಮೇಶ ನಾಯಕ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೌನೇಶ ನಾಯಕ ದೊರೆ, ಹನುಮಯ್ಯ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next