Advertisement

ಕರಾವಳಿಯಲ್ಲಿ ಡೆಂಗ್ಯೂ ಡಂಗುರ! ಮುನ್ನೆಚ್ಚರಿಕೆ ಅಗತ್ಯ, ನಿರ್ಲಕ್ಷ್ಯ ಸಲ್ಲದು

10:45 AM Sep 24, 2022 | Team Udayavani |

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಪ್ರತಿಕೂಲ ಹವಾ ಮಾನದ ಪರಿಣಾಮ ಡೆಂಗ್ಯೂ ಸೋಂಕು ತನ್ನ ಕಬಂಧಬಾಹು ವಿಸ್ತರಿಸುತ್ತ ಆತಂಕ ಸೃಷ್ಟಿಸಿದೆ. ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಡೆಂಗ್ಯೂ ದಾಖಲೆಯತ್ತ ಮುನ್ನುಗ್ಗುತ್ತಿದೆ.

Advertisement

ದ.ಕ. ಜಿಲ್ಲೆಯಲ್ಲಿ ಈ ವರ್ಷ 272 ಮಂದಿಯಲ್ಲಿ ಡೆಂಗ್ಯೂ ಕಾಣಿಸಿಕೊಂಡಿದ್ದು, ಇದರಲ್ಲಿ 110 ಪ್ರಕರಣ ಮಂಗಳೂರು ಪಾಲಿಕೆ ವ್ಯಾಪ್ತಿಯದ್ದು. ಆರೋಗ್ಯ ಇಲಾಖೆಯ ಅಂಕಿ ಅಂಶದ ಹೊರತಾ ಗಿಯೂ ಕೆಲವೊಂದು ಪ್ರಕರಣಗಳು ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದೆ. ಆದರೆ ಅದು ವರದಿಯಾಗುತ್ತಿಲ್ಲ. ಉಡುಪಿ ಜಿಲ್ಲೆಯಲ್ಲಿ ಇಷ್ಟರವರೆಗೆ 456 ಮಂದಿಗೆ ಡೆಂಗ್ಯೂ ಕಾಣಿಸಿಕೊಂಡಿದೆ.

ಡೆಂಗ್ಯೂ ಹರಡುವುದು ಹೇಗೆ?
ಹೆಣ್ಣು ಈಡಿಸ್‌ ಈಜಿಪ್ಟಿ ಸೊಳ್ಳೆ ಕಡಿತದಿಂದ ಡೆಂಗ್ಯೂ ಸೋಂಕು ಹರಡುತ್ತದೆ. ರಕ್ತ ನಾಳಗಳಿಗೆ ಈ ವೈರಸ್‌ ಹಾನಿ ಉಂಟು ಮಾಡುತ್ತದೆ. ಈ ಸೊಳ್ಳೆ ಹಗಲಿನ ಸಮಯದಲ್ಲಿಯೇ ಕಡಿಯುತ್ತದೆ. ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ಅಗತ್ಯ. ಬಿಟ್ಟು ಬಿಟ್ಟು ಮಳೆ ಬರುವ ಕಾರಣ ಮನೆಯ ಸುತ್ತಮುತ್ತ ನಿರುಪಯುಕ್ತ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಇಲ್ಲಿ ಲಾರ್ವಾ ಉತ್ಪತ್ತಿಯಾಗುವ ಸಾಧ್ಯತೆ ಇರುತ್ತದೆ.

ರೋಗ ಲಕ್ಷಣಗಳೇನು?
ಡೆಂಗ್ಯೂ ಜ್ವರ ಉಂಟಾದ ತತ್‌ಕ್ಷಣ ಮಕ್ಕಳು ಅಥವಾ ದೊಡ್ಡವರಲ್ಲಿ ರೋಗ ಲಕ್ಷಣ ಹೆಚ್ಚಾಗಿ ಕಂಡುಬರುವುದಿಲ್ಲ. ಆದರೆ ದಿನ ಕಳೆದಂತೆ ಏಳು ದಿನಗಳ ಬಳಿಕ ಒಂದೊಂದು ಲಕ್ಷಣ ಕಾಣಿಸಿಕೊಳ್ಳುತ್ತದೆ. ಸಾಮಾನ್ಯವಾಗಿ ತಲೆನೋವು, ಮೈ ಕೈ ನೋವು, ಕೀಲು ನೋವು, ವಾಕರಿಕೆ, ವಾತ, ತುರಿಕೆ, ಕಣ್ಣುಗಳ ಹಿಂಭಾಗ ನೋವು, ದೇಹದ ಅಲ್ಲಲ್ಲಿ ಕಲೆಗಳು ಕಾಣಿಸಿಕೊಳ್ಳುತ್ತವೆ.

ಸಾರ್ವಜನಿಕರು ಏನು ಮಾಡಬೇಕು?
ಕುದಿಸಿ ಆರಿಸಿದ ಉಗುರು ಬೆಚ್ಚಗಿನ ನೀರನ್ನೇ ಕುಡಿಯಬೇಕು. ಜ್ವರ ಬಾಧಿಸಿದ ಯಾರೂ ಕೂಡ ತಣ್ಣೀರನ್ನು ಕುಡಿಯಬಾರದು. ಸ್ನಾನಕ್ಕೂ ಬಿಸಿನೀರನ್ನು ಉಪಯೋಗಿಸಬೇಕು. ತಲೆ ಮೇಲೆ ನೀರು ಹಾಕಿಕೊಂಡಾಗ ಶೀತ ಅಧಿಕವಾಗಿ ಜ್ವರ, ತಲೆನೋವು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜ್ವರ ಕಡಿಮೆಯಾಗುವವರೆಗೆ ತಲೆ ಸ್ನಾನ ಮಾಡದಿರುವುದೇ ಉತ್ತಮ ಎನ್ನುತ್ತಾರೆ ವೈದ್ಯರು.

Advertisement

ಲಾರ್ವಾ ಪತ್ತೆ ಹಿನ್ನೆಲೆಯಲ್ಲಿ ಮಂಗಳೂರು ಪಾಲಿಕೆ ವ್ಯಾಪ್ತಿ ಸಹಿತ, ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆಯಿಂದ ಮನೆ ಮನೆ ಸರ್ವೇ ನಡೆಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು, ಮಲೇರಿಯ ನಿಯಂತ್ರಣ ಕಾರ್ಯಕರ್ತರು, ಆರೋಗ್ಯ ಸುರಕ್ಷತಾ ಅಧಿಕಾರಿಗಳು ಮತ್ತು ಪಾಲಿಕೆ ವ್ಯಾಪ್ತಿಯಲ್ಲಿ ಎಂಪಿಡಬ್ಲೂ$Â ಕಾರ್ಯಕರ್ತರು ಮನೆ ಮನೆ ಭೇಟಿ ನೀಡಿ ಈಡೀಸ್‌ ಸೊಳ್ಳೆ ಉತ್ಪಾದನ ತಾಣಗಳನ್ನು ಗುರುತಿಸಿ, ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮಾಹಿತಿ ನೀಡುತ್ತಿದ್ದಾರೆ.

ನಿರ್ಲಕ್ಷ್ಯ ಸಲ್ಲದು
ಡೆಂಗ್ಯೂ ನಿರ್ಮೂಲನೆಗೆ ಆರೋಗ್ಯ ಇಲಾಖೆಯ ಜತೆಗೆ ಸಾರ್ವಜನಿಕರ ಸಹಕಾರವು ಅಗತ್ಯ. ಡೆಂಗ್ಯೂ ತಡೆಯುವ ನಿಟ್ಟಿನಲ್ಲಿ ಲಾರ್ವಾ ಸರ್ವೇ ನಡೆಯುತ್ತಿದೆ. ಡೆಂಗ್ಯೂ ಹರಡುವ ಲಾರ್ವಾ ಉತ್ಪತ್ತಿಯಾಗುವುದೇ ನಿಂತಿರುವ ಶುದ್ಧ ನೀರಿನಲ್ಲಿ. ಮನೆ ಸುತ್ತಮುತ್ತ ನೀರು ನಿಲ್ಲಿಸದಂತೆ ನೋಡಿಕೊಳ್ಳಬೇಕು. ಯಾವುದೇ ಜ್ವರವನ್ನು ನಿರ್ಲಕ್ಷ್ಯ ಮಾಡಬಾರದು.
– ಡಾ| ನವೀನ್‌ಚಂದ್ರ ಕುಲಾಲ್‌, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ

ಮುನ್ನೆಚ್ಚರಿಕೆ ಕ್ರಮಗಳು
– ಹವಾಮಾನ ಬದಲಾವಣೆ ಕಾರಣದಿಂದಾಗಿ ಡೆಂಗ್ಯೂ, ಮಲೇರಿಯದಂತಹ ಸಾಂಕ್ರಾಮಿಕ ಕಾಯಿಲೆ ನಿಯಂತ್ರಣಕ್ಕೆ ಜನರೇ ಜಾಗೃತರಾಗಬೇಕಿದೆ.
– ಮನೆಯ ಸುತ್ತ ನಿರುಪಯುಕ್ತ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ
– ಸಾಮಾನ್ಯ ಜ್ವರವನ್ನೂ ನಿರ್ಲಕ್ಷಿಸದೆ ಹತ್ತಿರದ ವೈದ್ಯರನ್ನು ಭೇಟಿಯಾಗಿ
– ಕಿಟಕಿಗಳನ್ನು ಮುಚ್ಚಿ, ಕಿಟಕಿಗೆ ಸೊಳ್ಳೆ ಪರದೆ ಉಪಯೋಗಿಸಿ
– ನೀರಿನ ಸಂಗ್ರಹಕ್ಕೆ ಭದ್ರವಾದ ಮುಚ್ಚಿದ ವ್ಯವಸ್ಥೆ ಇರಬೇಕು, ಟಯರ್‌, ನಿರುಪಯುಕ್ತ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಬೇಕು.
– ತೊಟ್ಟಿ, ಡ್ರಮ್‌ಗಳಲ್ಲಿ 2 ರಿಂದ 3 ದಿನಗಳಿಗೊಮ್ಮೆ ನೀರು ಬದಲಾಯಿಸಿ ಸ್ವತ್ಛಗೊಳಿಸಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next