Advertisement

ಡೆಂಘೀ ನಿಯಂತ್ರಣ ಪ್ರತಿಯೊಬ್ಬರ ಹೊಣೆ: ಡಾ|ಪ್ರಕಾಶ

10:35 AM Aug 02, 2019 | Team Udayavani |

ಕೊಪ್ಪಳ: ಮನೆಯ ಒಳಗೆ ಮತ್ತು ಹೊರಗೆ ನೀರು ನಿಲ್ಲದಂತೆ ಎಚ್ಚರವಹಿಸಿ ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟಲು, ಮನೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ವಿ. ಪ್ರಕಾಶ ಹೇಳಿದರು.

Advertisement

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ ಹಳೇ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆದ ಡೆಂಘೀ ತಡೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಡೆಂಘೀ ಜ್ವರ ಈಡಿಸ್‌ ಜಾತಿಯ ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ ಹಾಗೂ ಇದು ಹಗಲು ಹೊತ್ತಿನಲ್ಲೇ ಕಚ್ಚುತ್ತವೆ. ಈಡಿಸ್‌ ಸೊಳ್ಳೆಗಳು ಶುದ್ಧ ನೀರಿನಲ್ಲಿಯೇ ಸಂತಾನಾಭಿವೃದ್ಧಿ ಮಾಡುತ್ತವೆ. ಆದ್ದರಿಂದ ನೀರು ಶೇಖರಣೆ ಸಲಕರಣೆಗಳನ್ನು ಸದಾಕಾಲ ಮುಚ್ಚಿಡಬೇಕು. ಮನೆಯ ಒಳಗೆ ಮತ್ತು ಹೊರಗೆ ಯಾವುದೇ ರೀತಿಯ ನೀರು ನಿಲ್ಲದಂತೆ ಎಚ್ಚರವಹಿಸಿ ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟಬೇಕು. ಈ ನಿಟ್ಟಿನಲ್ಲಿ ಮನೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದರು.

ಜಿಲ್ಲಾ ಕುಟುಂಬ ಅಧಿಕಾರಿ ಡಾ| ಜಂಬಯ್ಯ ಮಾತನಾಡಿ, ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲಾ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡೆಂಘೀ ಜ್ವರಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲದಿದ್ದರೂ ಜನರೂ ಭಯಪಡುವ ಅವಶ್ಯಕತೆಯಿಲ್ಲ. ಈ ಲಕ್ಷಣಗಳನ್ನಾಧರಿಸಿ ಚಿಕಿತ್ಸೆ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮತ್ತು ಪ್ರಯೋಗಾಲಯ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಜನರು ಅನಗತ್ಯ ಭಯಕ್ಕೆ ಒಳಗಾಗದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದರು.

ಜಿಲ್ಲಾ ಕೀಟಜನ್ಯ ರೋಗಗಳ ಸಲಹೆಗಾರ ಕೆ. ರಮೇಶ್‌ ಮಾತನಾಡಿ, ರಾಜ್ಯಾದ್ಯಂತ ಡೆಂಘೀ ಜ್ವರದ ಹಾವಳಿ ಹೆಚ್ಚಾಗಿದೆ. ಯಾವುದೇ ಜ್ವರವಿರಲಿ ಶೀಘ್ರವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಕ್ತ ಪರೀಕ್ಷೆ ಮಾಡಿಸಿ ಉಚಿತ ಚಿಕಿತ್ಸೆ ಪಡೆಯಬೇಕು. ಮಲಗುವಾಗ ಸೊಳ್ಳೆಪರದೆ ಬಳಸಲು ಹಾಗೂ ವಾರಕ್ಕೊಮ್ಮೆ ನೀರು ಶೇಖರಣ ಸಲಕರಣೆಗಳನ್ನು ಖಾಲಿಮಾಡಿ ಸ್ವಚ್ಛಗೊಳಿಸಿ ನೀರು ತುಂಬಿ ಮುಚ್ಚಿಡಲು ಜನ ಸಮುದಾಯಕ್ಕೆ ಮುಂದುವರಿಬೇಕು. ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣಕ್ಕಾಗಿ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಆರೋಗ್ಯ ಇಲಾಖೆಯೊಂದಿಗೆ ಜನಸಮುದಾಯದ ಸಹಕಾರ ಹಾಗೂ ಸಹಭಾಗಿತ್ವ ಅತ್ಯವಶ್ಯಕವಾಗಿದೆ ಎಂದರು.

Advertisement

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಮಹೇಶ್‌, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ, ಜಿಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿ, ಕಿರಿಯ ಮಹಿಳಾ ತರಬೇತಿ ಕೇಂದ್ರದ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಅಂಗವಾಗಿ ಬಸ್‌ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next