Advertisement

ಡೆಂಘೀ ನಿಯಂತ್ರಣ ಎಲ್ಲರ ಹೊಣೆ

05:40 PM May 17, 2019 | Suhan S |

ಕೊಪ್ಪಳ: ಡೆಂಘೀ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಡೆಂಘೀ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದು ಜಿಪಂ ಸಿಇಒ ಆರ್‌.ಎಸ್‌. ಪೆದ್ದಪ್ಪಯ್ಯ ಹೇಳಿದರು.

Advertisement

ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಗುರುವಾರ ನಡೆದ ವಿವಿಧ ಇಲಾಖೆಗಳ ಸಮನ್ವಯ ಸಭೆ ಹಾಗೂ ರಾಷ್ಟ್ರೀಯ ಡೆಂಘೀ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡೆಂಘೀ ಜ್ವರ ವೈರಸ್‌ನಿಂದ ಬರುವ ಸಾಂಕ್ರಾಮಿಕ ರೋಗವಾಗಿದ್ದು, ಇದು ಸೋಂಕಿತ ಈಡೀಸ್‌ ಜಾತಿಯ ಸೊಳ್ಳೆಯ ಕಡಿತದಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನಿಂತ ನೀರಿನಲ್ಲಿ ಹಾಗೂ ನೀರು ಶೇಖರಣೆ ಸಲಕರಣೆಗಳಲ್ಲಿ ಮೊಟ್ಟೆ ಇಟ್ಟು ಸಂತನಾಭಿವೃದ್ಧಿ ಮಾಡುತ್ತವೆ. ಈ ಸೊಳ್ಳೆಯ ಬಹುತೇಕ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಹಾಗಾಗಿ ಡೆಂಘಿ ಜ್ವರ ಹತೋಟಿ ಪ್ರತಿಯೊಬ್ಬರ ಕೈಯಲ್ಲಿದೆ. ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಈ ನಿಟ್ಟಿ ಅಗತ್ಯ ಜಾಗೃತಿ ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡು ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಪ್ರಭಾರಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಜಂಬಯ್ಯ ಮಾತನಾಡಿ, ಒಂದು ಸೋಂಕಿತ ಸೊಳ್ಳೆಯು ಮನುಷ್ಯನನ್ನು ಕಚ್ಚಿದ 8ರಿಂದ 14 ದಿನಗಳ ನಂತರ ಡೆಂಘೀ ಜ್ವರದ ಲಕ್ಷಣಗಳು ಕಂಡು ಬರುತ್ತವೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಚರ್ಮದ ಮೇಲೆ ಗುಳ್ಳೆಗಳು, ಮಾಂಸ ಖಂಡಗಳಲ್ಲಿ ನೋವು ಕಾಣಿಸಿಕೊಳ್ಳುವುದು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಕಾಣಿಸಿಕೊಳ್ಳುತ್ತದೆ. ಡೆಂಘೀ ಜ್ವರಕ್ಕೆ ಯಾವುದೇ ನಿರ್ಧಿಷ್ಟ ಚಿಕಿತ್ಸೆ ಅಥವಾ ಲಸಿಕೆಯಾಗಲಿ ಇಲ್ಲ. ಈ ರೋಗದ ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.

ನಿಂತ ನೀರು ಸೊಳ್ಳೆಯ ತವರು, ಆದ್ದರಿಂದ ಎಲ್ಲಾ ಬಗೆಯ ನೀರಿನ ತೊಟ್ಟಿ ಡ್ರಮ್‌, ಬ್ಯಾರಲ್, ಏರ್‌ ಕೂಲರ್‌ಗಳನ್ನು ವಾರಕೊಮ್ಮೆ ಖಾಲಿ ಮಾಡಿ ಮತ್ತು ಸ್ವಚ್ಛಗೊಳಿಸಿ ಒಣಗಿಸಿ ಪುನಃ ನೀರು ತುಂಬಿ ಸೊಳ್ಳೆಗಳು ನುಸುಳದಂತೆ ಮುಚ್ಚಳಿಕೆಯಿಂದ ಭದ್ರವಾಗಿ ಮುಚ್ಚಬೇಕು. ಮನೆಯ ಒಳಗೆ ಮತ್ತು ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟಬೇಕು. ಮನೆಯ ಸುತ್ತ ಬಯಲಿನಲ್ಲಿ ಮತ್ತು ಮಾಳಿಗೆ ಮೇಲೆ ಟೈರ್‌ ಟ್ಯೂಬ್‌, ಒಡೆದ ಬಕೆಟ್, ಎಳನೀರು ಚಿಪ್ಪು, ಹೂವಿನ ಕುಂಡ, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಈಡೀಸ್‌ ಸೊಳ್ಳೆಯು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ ಈ ಸಮಯದಲ್ಲಿ ಆದಷ್ಟು ಮೈತುಂಬಾ ಬಟ್ಟೆಯನ್ನು ಧರಿಸಬೇಕು. ಮನೆಯ ಒಳಗೆ ಸೊಳ್ಳೆ ಬರದಂತೆ ಕಿಟಕಿ, ಬಾಗಿಲುಗಳಿಗೆ ಜಾಲರಿ ಅಳಸುವುದು ಹಾಗೂ ಸೊಳ್ಳೆ ನಿರೋಧಕ ಬಳಸಬೇಕು. ಮಲಗುವಾಗ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಸಾರ್ವಜನಿಕರು ಈ ಕ್ರಮಗಳನ್ನು ಅನುಸರಿಸಬೇಕು ಎಂದರು.

Advertisement

ಸಭೆಯಲ್ಲಿ ಜಿಲ್ಲಾ ಆರ್‌.ಸಿ.ಎಚ್. ಅಧಿಕಾರಿ ಡಾ| ಲಿಂಗರಾಜ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಮಹೇಶ, ತಾಲೂಕು ಆರೋಗ್ಯಾಧಿಕಾರಿ ಡಾ| ರಾಮಾಂಜನೇಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next