Advertisement

ಮಹಿಳೆ, ಮಕ್ಕಳ ಸಾಗಾಣಿಕೆ ಜಾಲ ಪತ್ತೆ ಹಚ್ಚಿ

09:32 PM Oct 18, 2019 | Lakshmi GovindaRaju |

ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರತಿ ತಾಲೂಕು ಮಟ್ಟದಲ್ಲಿರುವ ಸಾಂತ್ವನ ಕೇಂದ್ರಗಳು ಸ್ತ್ರೀಶಕ್ತಿ ಸಂಘಗಳ ನೆರವಿನಿಂದ ಅಕ್ರಮವಾಗಿ ಮಹಿಳೆಯರು ಹಾಗೂ ಮಕ್ಕಳ ಸಾಗಾಣಿಕೆ ಮಾಡುವ ಜಾಲಗಳನ್ನು ಪತ್ತೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ನೊಂದವರಿಗೆ ಸಾಂತ್ವನ ಹೇಳಬೇಕೆಂದು ಜಿಲ್ಲಾಧಿಕಾರಿ ಆರ್‌.ಲತಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

Advertisement

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನೇಕ ಯೋಜನೆ ಜಾರಿ: ಮಹಿಳಾ ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳು ಕೈಜೋಡಿಸಿ ಕಾರ್ಯನಿರ್ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಸಂರಕ್ಷಣೆಗಾಗಿ ಜಿಲ್ಲೆಯ 6 ತಾಲೂಕುಗಳಲ್ಲಿ ಬಡತನ ನಿರ್ಮೂಲನೆ ಸೇರಿದಂತೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ.

ಈ ಯೋಜನೆಗಳನ್ನು ಪ್ರತಿಯೊಬ್ಬ ನಿರ್ಗತಿಕ ಮಹಿಳೆಯರು ಸಾಂತ್ವನ ಕೇಂದ್ರಗಳು, ಸ್ವಾಧಾರಿತ ಕೇಂದ್ರಗಳು, ಸ್ತ್ರೀಶಕ್ತಿ ಸಂಘಗಳು, ಅಂಗನವಾಡಿ ಕೇಂದ್ರಗಳು ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆಯುತ್ತಿರುವ ಕೇಂದ್ರಗಳಿಗೆ ಭೇಟಿ ನೀಡಿ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದರು.

ಧೈರ್ಯದಿಂದ ಎದುರಿಸಿ: ಕುಟುಂಬದಲ್ಲಿ ಎದುರಾಗುವ ದೈಹಿಕ, ಲೈಂಗಿಕ, ಆರ್ಥಿಕ, ಭಾವನಾತ್ಮಕ ಹಿಂಸೆಗಳಿಗೆ ಮಹಿಳೆಯರು ಅಂಜದೆ ಧೈರ್ಯವಾಗಿ ಎದುರಿಸಿ ಮುನ್ನುಗ್ಗಬೇಕು. ಪ್ರತಿ ತಾಲೂಕು ಹಂತದಲ್ಲಿರುವ ಸಾಂತ್ವನ ಕೇಂದ್ರಗಳಲ್ಲಿ ಉಚಿತವಾಗಿ ಸಿಗುವ ಸೌಲಭ್ಯಗಳನ್ನು ಪಡೆಯಬೇಕು.

Advertisement

ಕಾರ್ಯಪ್ರವೃತ್ತವಾಗಲಿ: ಕಾನೂನು ಸೇವೆಗಳ ಪ್ರಾಧಿಕಾರದಿಂದ ಕೋರ್ಟ್‌ ವಿಚಾರಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಿಕೊಳ್ಳಬೇಕು. ಪ್ರಸ್ತುತ ಜಿಲ್ಲೆಯಲ್ಲಿ ಕಾರ್ಯನಿರ್ವಹಣೆಯಲ್ಲಿರುವ ಸಾಂತ್ವನ ಕೇಂದ್ರಗಳು ಹಾಗೂ ಸ್ತ್ರೀಶಕ್ತಿ ಸಂಘಗಳು ಕಾರ್ಯಪ್ರವೃತ್ತಿಯಾಗುವ ಅಗತ್ಯತೆ ಇದೆ. ಜಿಲ್ಲಾಡಳಿತ ಸಂಘಗಳಿಗೆ ಅಗತ್ಯ ಇರುವ ಯಾವುದೇ ಸಹಾಯವನ್ನು ಮಾಡಲಿದೆ ಎಂದರು.

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ತರಬೇಕು. ಸಾರ್ವಜನಿಕ ಸ್ಥಳಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ, ಬಸ್‌ ನಿಲ್ದಾಣಗಳಲ್ಲಿ ಮಾದಕ ವಸ್ತುಗಳ ಸೇವನೆ ತಡೆಗೆ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.

ಪೌಷ್ಟಿಕ ಪುನಶ್ಚೇತನ ಕೇಂದ್ರ ಸ್ಥಾಪನೆ: ಜಿಪಂ ಸಿಇಒ ಬಿ.ಫೌಜಿಯಾ ತರುನ್ನುಮ್‌ ಮಾತನಾಡಿ, ಜಿಲ್ಲಾಸ್ಪತ್ರೆಯಲ್ಲಿ ಎನ್‌ಆರ್‌ಸಿ ಘಟಕ ನೀಡುವ ಚಿಕಿತ್ಸೆಯಿಂದ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳ ಸಂಖ್ಯೆಯಲ್ಲಿ ಇಳಿಮುಖ ಆಗಿದೆ. ಎನ್‌ಆರ್‌ಸಿ ಘಟಕ ನೀಡುವ ಚಿಕಿತ್ಸೆ ಅತ್ಯುತ್ತಮದಾಗಿದ್ದು, ಇದರ ಸೌಲಭ್ಯವನ್ನು ಜಿಲ್ಲೆಯ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಪ್ರತಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ಪೌಷ್ಟಿಕ ಪುನಶ್ಚೇತನ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಶೀಘ್ರವೇ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರಂಭಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್‌.ದೇವರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಲಕ್ಷ್ಮೀದೇವಮ್ಮ, ಮಕ್ಕಳ ತಜ್ಞ ಡಾ.ಪ್ರಕಾಶ್‌, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಮ್ಮದ್‌ ಉಸ್ಮಾನ್‌, ರಾಜೇಂದ್ರ ಪ್ರಸಾದ್‌, ಮೇರಿ ಚೆಲ್ವಾದೊರೈ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಾಂತ್ವನ ಕೇಂದ್ರಗಳ ಮುಖ್ಯಸ್ಥರು, ಸ್ತ್ರೀಶಕ್ತಿ ಸಂಘದವರು ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಮಹಿಳಾ, ಮಕ್ಕಳ ಮೇಲೆ 156 ದೌರ್ಜನ್ಯ ಪ್ರಕರಣ:  ಜಿಲ್ಲೆಯಲ್ಲಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಅಧಿನಿಯಮದಡಿ 2018-19ನೇ ಸಾಲಿನಲ್ಲಿ ಜುಲೈ 2018ರ ಅಂತ್ಯಕ್ಕೆ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಒಟ್ಟು 24 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 12 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ.

ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯವನ್ನು ತಡೆಯಲು ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಮಿತಿಯನ್ನು ರಚಿಸಲಾಗಿದ್ದು ಜಿಲ್ಲೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಒಟ್ಟು 74 ಪ್ರಕರಣ ದಾಖಲಾಗಿದ್ದು, 25 ಪ್ರಕರಣ ಇತ್ಯರ್ಥ ಮಾಡಲಾಗಿದೆ. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 82 ಪ್ರಕರಣ ದಾಖಲಾಗಿದ್ದು, ಇದರಲ್ಲಿ 34 ಪ್ರಕರಣ ಇತ್ಯರ್ಥ ಮಾಡಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕಿ ಜಿ.ಕೆ.ಲಕ್ಷಿ¾àದೇವಮ್ಮ ಸಭೆಗೆ ಮಾಹಿತಿ ನೀಡಿದರು.

ಬಾಲ್ಯ ವಿವಾಹ ತಡೆಯಲು ಜಿಲ್ಲೆಯಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಸರ್ಕಾರಿ ಹಾಸ್ಟೆಲ್‌ ಕಟ್ಟಡಗಳ ಮೇಲೆ 1098 ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಮುಖಾಂತರ ಪ್ರಚಾರ ಮಾಡಬೇಕು. ಇಲಾಖೆಯಿಂದ ಬಾಲ್ಯ ವಿವಾಹ ತಡೆ ಕುರಿತು ಅರಿವು ಮೂಡಿಸಲು ಗೋಡೆ ಬರಹವನ್ನು ಪ್ರತಿ ತಾಲೂಕಿಗೆ 39 ರಂತೆ ಒಟ್ಟು 234 ಗೋಡೆ ಬರಹಗಳನ್ನು ಬರೆಸಿ ಬಾಲ್ಯ ವಿವಾಹದ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಬೇಕು.
-ಆರ್‌.ಲತಾ, ಜಿಲ್ಲಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next