Advertisement

ತುಮಕೂರಲ್ಲಿ ದೇವೇಗೌಡರು ಗೆಲ್ಲಲ್ಲ: ಶೆಟ್ಟರ್‌

01:03 AM Apr 05, 2019 | Team Udayavani |

ಬೆಳಗಾವಿ: ಜೆಡಿಎಸ್‌ ಪಕ್ಷದ ಕಾರ್ಯಕರ್ತರೇ ತಮ್ಮ ಪಕ್ಷದ ಮೇಲೆ ನಂಬಿಕೆ ಕಳೆದುಕೊಂಡಿರುವ ಕಾರಣಕ್ಕೆ ದೇವೇಗೌಡರು ತುಮಕೂರಿನಿಂದ ಸ್ಪರ್ಧೆ ಮಾಡಿದ್ದಾರೆ. ಆದರೆ, ಅಲ್ಲಿಯೂ ದೇವೇಗೌಡರು ಗೆಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ.

Advertisement

ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೆಡಿಎಸ್‌ ಮೇಲೆ ಈಗ ಕಾರ್ಯಕರ್ತರಿಗೆ ನಂಬಿಕೆ ಉಳಿದಿಲ್ಲ. ಹೀಗಾಗಿ, ತುಮಕೂರಿನಿಂದ ಸ್ಪರ್ಧೆ ಮಾಡಿರುವ ದೇವೇಗೌಡರು ಮನೆಗೆ ಹೋಗುವುದು ನಿಶ್ಚಿತ. ರಾಜ್ಯದಲ್ಲಿ ಕಾಂಗ್ರೆಸ್‌ ಸ್ಥಿತಿ ಶೋಚನೀಯವಾಗಿದೆ. ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಈ ಹಿಂದೆ ವಿಧಾನಸಭಾ ಚುನಾವಣೆಗೂ ಮುಂಚೆ ಅವರು 130 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ನಾನೇ ಮತ್ತೆ ಮುಖ್ಯಮಂತ್ರಿ ಎಂದು ಬೀಗಿದ್ದರು. ಆದರೆ, ಸಿದ್ದರಾಮಯ್ಯ ಅವರ ಪಕ್ಷ 80 ಕ್ಷೇತ್ರಗಳಲ್ಲಿಯೂ ಜಯ ಗಳಿಸಲಿಲ್ಲ. ಈ ಭಾರಿಯೂ ಅದೇ ಭ್ರಮನಿರಸನವಾಗಲಿದೆ ಎಂದರು.

ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಹಾಗೂ ಹಾಸನದಲ್ಲಿ ಬಿಜೆಪಿಯ ಎ.ಮಂಜು ಜಯಗಳಿಸಲಿದ್ದಾರೆ. ಉತ್ತರ ಕರ್ನಾಟಕದ ಯಾವುದೇ ಭಾಗದಲ್ಲಿ ಕಾಂಗ್ರೆಸ್‌ ಗೆಲ್ಲುವುದು ಸಾಧ್ಯವಿಲ್ಲ ಎಂದರು.

ಇದೇ ವೇಳೆ, ರಾಹುಲ್‌ ಬಗ್ಗೆ ಟೀಕಾಪ್ರಹಾರ ನಡೆಸಿದ ಅವರು, ಹಿಂದೂಗಳು ಕಾಂಗ್ರೆಸ್‌ಗೆ ಮತ ಹಾಕಲ್ಲ ಎನ್ನುವ ತೀರ್ಮಾನಕ್ಕೆ ಬಂದು ಮುಸ್ಲಿಂ, ಕ್ರಿಶ್ಚಿಯನ್‌ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ರಾಹುಲ್‌ ಅವರು ಕೇರಳದ ವಯನಾಡಿಗೆ ಪಲಾಯನ ಮಾಡಿದ್ದಾರೆ. ಆದರೆ, ಅಮೇಥಿ ಹಾಗೂ ವಯನಾಡು ಎರಡೂ ಕಡೆಗಳಲ್ಲಿ ರಾಹುಲ್‌ ಗಾಂಧಿಗೆ ಸೋಲು ಖಚಿತ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next