ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಹಾಗೂ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ “ಜ್ಞಾನ ದರ್ಶಿನಿ’ ಮತ್ತು “ಜ್ಞಾನ ವರ್ಷಿಣಿ 2024’ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಬಿಡುಗಡೆ ಹಾಗೂ ರಾಜ್ಯಮಟ್ಟದ ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ ಸಮಾರಂಭ ಆ.10ರಂದು ಬೆಳಗ್ಗೆ 10.30ಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಜರಗಲಿದೆ.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದು, ಶಾಂತಿವನ ಟ್ರಸ್ಟ್ನ ಟ್ರಸ್ಟಿಗಳಾದ ಹೇಮಾವತಿ ವೀ.ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿರುವರು.
ಹಾವೇರಿ ಶ್ರೀ ಹುಕ್ಕೇರಿಮಠದ ಶ್ರೀಮನ್ ನಿರಂಜನ ಪ್ರಣವಸ್ವರೂಪಿ ಸದಾಶಿವ ಮಹಾಸ್ವಾಮಿಗಳು ಕೃತಿ ಬಿಡುಗಡೆ ಮಾಡುವರು. ಕನ್ನಡ ಚಲನಚಿತ್ರ ಸಂಗೀತ ನಿರ್ದೇಶಕ, ಅರ್ಜುನ್ ಜನ್ಯ ಅವರು ಪುರಸ್ಕಾರ ಪ್ರದಾನಿಸುವರು. ಅಭ್ಯಾಗತರಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ. ಜಿಲ್ಲೆಯ ಉಪ ನಿರ್ದೇಶಕ (ಆಡಳಿತ) ವೆಂಕಟೇಶ ಸುಬ್ರಾಯ ಪಟಗಾರ ಭಾಗವಹಿಸಲಿದ್ದಾರೆ.
ಸನಾತನ ನಾಟ್ಯಾಲಯ ಮಂಗಳೂರು ಇವರಿಂದ ಗಾಯನ ಮತ್ತು ನೃತ್ಯ, ದಾವಣಗೆರೆಯ ರಾಷ್ಟ್ರೀಯ ಕಲಾವಿದ ಶಾಂತಯ್ಯ ಪರಡಿಮಠ ಇವರಿಂದ ಕುಂಚ ನಡೆಯಲಿದೆ ಎಂದು ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ ಹಾಗೂ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.