Advertisement

ಧ್ರುವನಾರಾಯಣ ಶಕ್ತಿ ಪ್ರದರ್ಶನ

01:05 PM Mar 26, 2019 | Team Udayavani |

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ, ಸಂಸದ ಆರ್‌.ಧ್ರುವನಾರಾಯಣ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದರು.

Advertisement

ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಶಾಸಕರಾದ ಆರ್‌. ನರೇಂದ್ರ, ಎಸ್‌. ಯತೀಂದ್ರ, ಅನಿಲ್‌ಚಿಕ್ಕಮಾದು ಅವರೊಂದಿಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿಗೆ ನಾಮಪತ್ರ ಸಲ್ಲಿಸಿದರು.

ಸೋಮವಾರ ಬೆಳಗ್ಗೆ ತಮ್ಮ ಮನೆದೇವರು ಬಿಳಿಗಿರಿರಂಗನಬೆಟ್ಟದ ಬಿಳಿಗಿರಿರಂಗನಾಥಸ್ವಾಮಿ, ಚಾಮರಾಜನಗರದ ಸಾರನಾಥ ಬುದ್ದ ವಿಹಾರ, ಕೊಳದ ಗಣಪತಿ ಹಾಗೂ ಚಾಮರಾಜೇಶ್ವರ ದೇವಸ್ಥಾನದಲ್ಲಿ ಧ್ರುವ ವಿಶೇಷಪೂಜೆ ಸಲ್ಲಿಸಿದರು.

ನಗರದ ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ತೆರೆದ ವಾಹನದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರೊಡನೆ ಮೆರವಣಿಗೆಯಲ್ಲಿ ತೆರಳಿದರು. ಭುವನೇಶ್ವರಿ ವೃತ್ತ, ಬಿ. ರಾಚಯ್ಯ ಜೋಡಿ ರಸ್ತೆ ಮೂಲಕ ಸಾಗಿ ಜಿಲ್ಲಾಡಳಿತ ಭವನದ ಗೇಟ್‌ ಬಳಿ ಮೆರವಣಿಗೆ ಅಂತ್ಯಗೊಂಡಿತು.

ಅಲ್ಲಿಂದ ಜಿಲ್ಲಾ ಉಸ್ತುವಾರಿ ಸಚಿವ‌ ಸಿ.ಪುಟ್ಟರಂಗಶೆಟ್ಟಿ, ಶಾಸಕ ಡಾ.ಯತೀಂದ್ರ, ನರೇಂದ್ರ, ಅನಿಲ್‌ಚಿಕ್ಕಮಾದು ಅವರ ಜೊತೆ ಕಾಲ್ನಡಿಗೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ತಮ್ಮ ನಾಮಪತ್ರ ಸಲ್ಲಿಸಿದರು. ನಂತರ ರಾಮಸಮುದ್ರದಲ್ಲಿರುವ ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

Advertisement

ಮೆರವಣಿಗೆಯಲ್ಲಿ ಮಾಜಿ ಶಾಸಕರಾದ ಎ.ಆರ್‌.ಕೃಷ್ಣಮೂರ್ತಿ, ಎಸ್‌. ಬಾಲರಾಜು, ಎಸ್‌. ಜಯಣ್ಣ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ. ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್‌, ಎಸ್‌.ಸಿ. ಬಸವರಾಜು, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಲತಾಜಯಣ್ಣ, ಜಿಪಂ ಅಧ್ಯಕ್ಷೆ ಶಿವಮ್ಮ, ಸದಸ್ಯರಾದ ಕೆ.ಪಿ. ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್‌,

ಬ್ಲಾಕ್‌ ಅಧ್ಯಕ್ಷರಾದ ಎ.ಎಸ್‌.ಗುರುಸ್ವಾಮಿ, ಮಹಮದ್‌ ಅಸರ್‌, ಮುಖಂಡರಾದ ಡಿ.ಎನ್‌.ನಟರಾಜು, ತೋಟೇಶ್‌, ಜಿಪಂ ಮಾಜಿ ಸದಸ್ಯ ಅರಕಲವಾಡಿ ಸೋಮನಾಯಕ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಾದ ಆರ್‌.ಮಹದೇವು, ಚಿಕ್ಕಮಹದೇವು, ಕಾಗಲವಾಡಿಚಂದ್ರು ಹಾಗೂ ಜಾ.ದಳ ಜಿಲ್ಲಾಧ್ಯಕ್ಷ ಕಾಮರಾಜ್‌, ಮುಖಂಡರಾದ ಮಹೇಶಗೌಡ, ಪಾಲ್ಗೊಂಡಿದ್ದರು.

ಜೆಡಿಎಸ್‌ ಸಾಥ್‌: ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಮಟ್ಟದಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಕಾರ್ಯಕರ್ತರು ಹೊಂದಾಣಿಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜೆಡಿಎಸ್‌ ಮುಖಂಡರು, ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿ ಧ್ರುವನಾರಾಯಣ್‌ ಅವರಿಗೆ ಬೆಂಬಲ ಸೂಚಿಸಿದರು. ಮೆರವಣಿಗೆಯಲ್ಲಿ ಚೆಂಡೆ ಕುಣಿತ, ಡೊಳ್ಳು ಕುಣಿತ ತಂಡ ಭಾಗವಹಿಸಿ ಮೆರಗು ನೀಡಿತು.

ಮತದಾರರ ಆಶೀರ್ವಾದ: ಕಳೆದ 10 ವರ್ಷಗಳಿಂದ ತಾವು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ತಂದಿರುವ ಯೋಜನೆಗಳನ್ನು ಮತದಾರರು ಗುರುತಿಸಿದ್ದು, ಈ ಚುನಾವಣೆಯಲ್ಲೂ ತನ್ನನ್ನು ಆಶೀರ್ವದಿಸಲಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಆರ್‌. ಧ್ರುವನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು. ಸಂಸದನಾಗಿ ಜನರ ನಡುವೆ ಇದ್ದೂ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕ್ಷೇತ್ರದಲ್ಲಿ ಕೈಗೊಂಡಿದ್ದೇನೆ.

ಹೀಗಾಗಿ ಕಳೆದ ಬಾರಿಯಂತೆ ಹೆಚ್ಚು ಅಂತರದಿಂದ ಜಯಗಳಿಸಲಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ನಾಳೆಯಿಂದ ಚುನಾವಣಾ ಪ್ರಚಾರ ಆರಂಭವಾಗಲಿದೆ. ಮಂಡ್ಯದಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖೀಲ್‌ ಅವರ ನಾಮಪತ್ರ ಸಲ್ಲಿಕೆಯಿಂದ ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್‌, ಪುಟ್ಟರಾಜು ಅವರು ತಮ್ಮ ನಾಮಪತ್ರ ಸಲ್ಲಿಕೆಗೆ ಭಾಗವಹಿಸಲು ಆಗಲಿಲ್ಲ.

ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಪ್ರಚಾರ ಸಭೆಗಳಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಹಿತ ಸಚಿವರು ಬಂದು ಸಂಪೂರ್ಣ ಬೆಂಬಲ ನೀಡಲಿದ್ದಾರೆ. ಈಗಾಗಲೇ ಜೆಡಿಎಸ್‌ ಜಿಲ್ಲಾ ಪದಾಧಿಕಾರಿಗಳು ಮೆರವಣಿಗೆಯಲ್ಲಿ ಭಾಗವಹಿಸಿ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದರು.

ಸಂಚಾರ ಅಸ್ತ ವ್ಯಸ್ತ: ಧ್ರುವನಾರಾಯಣ ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ಇದ್ದ ಕಾರಣ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಸೇರಿದ್ದು, ಬಿ. ರಾಚಯ್ಯ ಜೋಡಿರಸ್ತೆಯಲ್ಲಿನ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು.

ಒಂದು ಬದಿಯಲ್ಲಿ ಭಾರಿ ಸಂಖ್ಯೆಯಲ್ಲಿ ಜನ, ವಾಹನ ಇದ್ದ ಕಾರಣ ಮತ್ತೂಂದು ಬದಿ ರಸ್ತೆಯಲ್ಲೇ ಎರಡು ಕಡೆ ವಾಹನಗಳೂ ಸಂಚರಿಸಿದವು. ಇನ್ನು ಈ ವೇಳೆ ಜಿಲ್ಲಾಡಳಿತ ಭವನಕ್ಕೂ ಸಾರ್ವಜನಿಕರ ಪ್ರವೇಶವನು ನಿರ್ಬಂಧಿಸಲಾಗಿತ್ತು. ತಮ್ಮ ಕೆಲಸ, ಕಾರ್ಯಗಳಿಗೆ ಆಗಮಿಸಿದ್ದ ಸಾಕಷ್ಟು ಮಂದಿ ಒಂದು ತಾಸಿಗೂ ಹೆಚ್ಚು ಕಾಲ ಕಾಯಬೇಕಾಯಿತು. ಜಿಲ್ಲಾಡಳಿತ ಭವನದ 200 ಮೀಟರ್‌ ವ್ಯಾಪ್ತಿಯಲ್ಲಿ ಪತ್ರಕರ್ತರಿಗೂ ಪ್ರವೇಶ ನಿರ್ಬಂಧಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next