Advertisement
ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ದೇವೇಗೌಡರು, ಕಾವೇರಿ ನದಿ ನೀರಿನ ನಿರ್ವಹಣಾ ಪ್ರಾಧಿಕಾರದಿಂದ ಕರ್ನಾಟಕಕ್ಕೆ ಯಾವುದೇ ನಷ್ಟವಾಗುವುದಿಲ್ಲ ಮತ್ತು ಸುಪ್ರೀಂಕೋರ್ಟ್ನ ತೀರ್ಪಿನಂತೆ ನೀರಿನಲ್ಲಿ ಹೆಚ್ಚಿನ ಪಾಲು ಸಿಗುತ್ತದೆ ಎಂದು ಕೇಂದ್ರ ಸರ್ಕಾರ ಭರವಸೆ ನೀಡಬೇಕು. ಆ ನಂತರವಷ್ಟೇ ಸುಪ್ರೀಂ ಆದೇಶದ ಅನ್ವಯ ನಿರ್ವಹಣಾ ಮಂಡಳಿ ರಚಿಸಬಹುದು ಎಂದರು.
Related Articles
Advertisement
ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಸಂತೋಷ ಪಡುವಂತಹ ಅಂಶ ಇಲ್ಲ. ಕರ್ನಾಟಕಕ್ಕೆ ಅನ್ಯಾಯ ಆಗಿರುವುದು ಗಡ್ಕರಿ ಆವರ ಗಮನಕ್ಕೆ ತಂದಿದ್ದೇನೆ. ಅವರು ಸಹ ಮರು ಪರಿಶೀಲನಾ ಅರ್ಜಿ ಹಾಕುವಂತೆ ಸಲಹೆ ನೀಡಿದರು. ಸುಪ್ರೀಂಕೋರ್ಟ್ ಹದಿನೈದು ವರ್ಷ ವಾಪಸ್ ಬರದಂತೆ ಹೇಳಿದೆ. ಮಂಡಳಿ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರವೇ ಮರುಪರಿಶೀಲನೆ ಅರ್ಜಿ ಸಲ್ಲಿಸಲು ಸಲಹೆ ನೀಡಿದ್ದೇನೆ ಎಂದು ತಿಳಿಸಿದರು.
ಕಾವೇರಿ ಕುರಿತು ಮುಖ್ಯಮಂತ್ರಿಗಳು ಕರೆದ ಸಭೆಗೆ ಗೈರು ಹಾಜರಿ ಕುರಿತು ಪ್ರತಿಕ್ರಿಯಿಸಿದ ದೇವೇಗೌಡರು ಸರ್ವಪಕ್ಷ ಸಭೆಗೆ ಹೋಗಲಾಗದು ಎಂದು ಮೊದಲೇ ತಿಳಿಸಿದ್ದೆ ಎಂದರು.
ಇಂದು ಸಿಎಸ್ಗಳ ಸಭೆಈ ಮಧ್ಯೆ ಕಾವೇರಿ ನದಿ ನಿರ್ವಹಣಾ ಮಂಡಳಿ ರಚನೆ ಸಂಬಂಧ ಕೇಂದ್ರ ಜಲ ಸಂಪನ್ಮೂಲ ಇಲಾಖೆ ಶುಕ್ರವಾರ ನಾಲ್ಕೂ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಸಭೆ ಕರೆದಿದೆ. ಇದರಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಪಾಲ್ಗೊಳ್ಳಲಿದ್ದಾರೆ. ಆರು ವಾರಗಳಲ್ಲಿ ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರೀಂಕೋರ್ಟ್ ಆದೇಶದಲ್ಲಿ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ ಎಂದು ಸಚಿವಾಲಯದ ಕಾರ್ಯದರ್ಶಿ ಯು.ಪಿ.ಸಿಂಗ್ ಹೇಳಿದ್ದಾರೆ. ಅಲ್ಲದೆ ಈ ಸಂದರ್ಭದಲ್ಲೇ ತೀರ್ಪಿನ ಜಾರಿ ಬಗ್ಗೆಯೂ ಚರ್ಚಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.