Advertisement

ಲಾಕ್‌ಡೌನ್ ಬೇಕೇ, ಬೇಡವೇ ಎನ್ನುವುದನ್ನು ಜನರೇ ನಿರ್ಧರಿಸಲಿ : ಜಿಲ್ಲಾಧಿಕಾರಿ ಜಿ. ಜಗದೀಶ್

08:30 PM Jul 31, 2021 | Team Udayavani |

ಕಾಪು: ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಳಕ್ಕೆ ಪರೋಕ್ಷವಾಗಿ ಜನರೇ ಕಾರಣರಾಗುತ್ತಿದ್ದು, ಜನ ಮತ್ತೊಮ್ಮೆ ಮೈಮರೆತರೆ ತಾವಾಗಿಯೇ ಲಾಕ್‌ಡೌನ್‌ನ ಸುಳಿಯೊಳಗೆ ಸಿಲುಕಿ ಕೊಳ್ಳುವ ಅನಿವಾರ್ಯತೆ ಎದುರಾಗಬಹುದು. ನಮ್ಮ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಬೇಕೇ ? ಬೇಡವೇ ? ಎನ್ನುವುದನ್ನು ಸ್ವತಃ ಜಿಲ್ಲೆಯ ಜನರೇ ನಿರ್ಧರಿಸಬೇಕಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

Advertisement

ಕಳತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 100ರ ಆಸುಪಾಸಿನಲ್ಲಿ ಕೋವಿಡ್ ಪಾಸಿಟಿವ್ ಕೇಸ್‌ಗಳು ಬರುತ್ತಿದ್ದವು. ಪಾಸಿಟಿವಿಟಿ ದರ ಶೇ. 2 ರಿಂದ 3ರ ಆಸುಪಾಸಿನಲ್ಲಿತ್ತು. ಆದರೆ, ಕಳೆದ 3-4 ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದ್ದು ಶೇ. 4 ರಿಂದ 4.5 ರವರೆಗೆ ಏರುತ್ತಿದೆ. ಒಂದೆರಡು ದಿನಗಳಲ್ಲಿ ಆಗಿರುವ ಬೆಳವಣಿಗೆಗಳನ್ನು ನೋಡಿಕೊಂಡು ಏನೂ ಹೇಳಲಾಗದು. ಮತ್ತೆ ಪಾಸಿಟಿವಿಟಿ ದರ ಏರಿಕೆಯಾದರೆ ಕಠಿಣ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾದೀತು ಎಂದು ಅವರು ಹೇಳಿದ್ದಾರೆ.

ಜಿಲ್ಲೆಯಲ್ಲಿ ಪ್ರಸ್ತುತ ಎಲ್ಲವೂ ಓಪನ್ ಆಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಮಹಾರಾಷ್ಟ್ರ ಮತ್ತು ಕೇರಳದ ನಡುವೆ ಜಿಲ್ಲೆಗೆ ನಿಕಟ ಸಂಪರ್ಕ ಹೊಂದಿರುವುದರಿಂದ ಕೋವಿಡ್ ಪ್ರಕರಣಗಳು ಮತ್ತೆ ಏರಿಕೆಯಾಗುವಂತಾಗಿದೆ. ಈ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬೇಕಾದ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳಲು ಮತ್ತು ಕಠಿಣ ನಿಯಮಗಳನ್ನು ಜಾರಿಗೊಳಿಸಲು ಜಿಲ್ಲಾಡಳಿತ ಬದ್ಧವಿದೆ ಎಂದರು.

ಸಾರ್ವಜನಿಕ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರ ಪಾಲನೆ ಸಹಿತವಾಗಿ ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಹಾಗೂ ಸರಕಾರದ ಮುನ್ಸೂಚನೆಗಳನ್ನು ಪಾಲಿಸುವುದು ಅತ್ಯಗತ್ಯವಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಜನರು ಅವಶ್ಯವಿರುವ ಎಲ್ಲಾ ಕೆಲಸಗಳನ್ನೂ ಮಾಡಿ ಮುಗಿಸಿರಿ. ಆದರೆ ಜನಸೇರಿಸಿ ನಡೆಸುವ ಕಾರ್ಯಕ್ರಮಗಳನ್ನು ಮುಂದೂಡಿದಲ್ಲಿ, ನಾವು ಸಾಮಾನ್ಯರಾಗಿ ಬದುಕಬಹುದು. ಇಲ್ಲದಿದ್ದಲ್ಲಿ ನಮ್ಮ ಕಾಲ ಮೇಲೆ ನಾವೇ ಚಪ್ಪಡಿ ಎಳೆದುಕೊಳ್ಳಬೇಕಾದೀತು, ನಾವಾಗಿಯೇ ಮತ್ತೆ ಲಾಕ್‌ಡೌನ್ ಅನ್ನು ತಂದುಕೊಳ್ಳಬೇಕಾದೀತು ಎಂದು ಎಚ್ಚರಿಕೆ ನೀಡಿದರು.

ಮಾರ್ಗಸೂಚಿ ಪಾಲಿಸದವರ ವಿರುದ್ಧ ಕಠಿಣ ಕ್ರಮ : ಪ್ರತಿ ಸ್ಥಳದಲ್ಲೂ ಅಧಿಕಾರಿಗಳೇ ಬಂದು ಹೇಳಬೇಕಾಗಿಲ್ಲ. ಸಾರ್ವಜನಿಕರಿಗೂ ಜವಾಬ್ದಾರಿಯಿದೆ. ತಮ್ಮ ಆರೋಗ್ಯದ ರಕ್ಷಣೆಗೆ ತಾವೇ ಯೋಚನೆ ಮಾಡಬೇಕಿದೆ. ನಾವು ಸಲಹೆ, ಸೂಚನೆ ಮತ್ತು ಮಾರ್ಗದರ್ಶನ ನೀಡುತ್ತೇವೆ. ಆದರೆ ಜನರು ಅದನ್ನು ಪಾಲಿಸದಿದ್ದಲ್ಲಿ ನಾವು ದಂಡ ವಿಧಿಸುವುದು ಅನಿವಾರ್ಯವಾದೀತು. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮತ್ತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಮಾರ್ಗಸೂಚಿ ಪಾಲಿಸದವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.

Advertisement

ಕಠಿಣ ನಿಯಮಾವಳಿ ಜಾರಿ ಬಗ್ಗೆ ಶೀಘ್ರ ಅಧಿಕಾರಿಗಳೊಂದಿಗೆ ಸಭೆ : ಕೋವಿಡ್ ಹೆಚ್ಚಳವಾಗಿರುವ ಜಿಲ್ಲೆಗಳಲ್ಲಿ ಹೆಚ್ಚುವರಿ ನಿರ್ಬಂಧಗಳನ್ನು ಪಾಲಿಸಲು, ಹೊಸ ಮಾರ್ಗಸೂಚಿ ಕ್ರಮಗಳನ್ನು ತೆಗೆದುಕೊಳ್ಳಲು ಸರಕಾರ ಆಯಾಯ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. ಸರಕಾರ ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದೆ. ಕೋವಿಡ್ ನಿಯಮಾವಳಿಗಳ ಪಾಲನೆಯ ಬಗ್ಗೆ ಹೆಚ್ಚುವರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ, ಕಠಿಣ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಶೀಘ್ರ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನಿರ್ಧಾರ ತೆಗೆದುಕೊಳ್ಳಲಾಗುವುದು. ಎಲ್ಲಿಯೂ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ, ಜನರು ತಮ್ಮಷ್ಟಕ್ಕೆ ವರ್ತಿಸಲು ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟ ಪಡಿಸಿದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಜಿ. ಪಂ. ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next