Advertisement

ಕರ್ತವ್ಯ ಲೋಪ ಸಹಿಸುವುದಿಲ್ಲ

12:01 PM Aug 21, 2018 | Team Udayavani |

ಬೆಂಗಳೂರು: ಫ್ಲೆಕ್ಸ್‌ ತೆರವು ಕಾರ್ಯಾಚರಣೆಯಲ್ಲಿ ಪಾಲಿಕೆ ಅಧಿಕಾರಿಗಳ ಕರ್ತವ್ಯ ಲೋಪವನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಹಾನಗರ ಪಾಲಿಕೆ ಹೈಕೋರ್ಟ್‌ ಮತ್ತೂಮ್ಮೆ ಎಚ್ಚರಿಕೆ ನೀಡಿದೆ.

Advertisement

ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸೋಮವಾರ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್‌. ದೇವದಾಸ್‌ ಅವರಿದ್ದ ವಿಭಾಗೀಯ ಪೀಠ, ಪಾಲಿಕೆಗೆ ಈ ಸೂಚನೆ ನೀಡಿತು.

ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ರಸ್ತೆ ಹಾಗೂ ಎಂಟನೇ ಮೈಲಿ ರಸ್ತೆಯಲ್ಲಿ ಅಳವಡಿಸಿರುವ ಫ್ಲೆಕ್ಸ್‌, ಬ್ಯಾನರ್‌ ತೆರವು ಮಾಡದೇ ಇರಲು ಕಾರಣವೇನು ಪಾಲಿಕೆ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಪೀಠ, ಫ್ಲೆಕ್ಸ್‌ಗಳನ್ನು ತೆರವುಗೊಳಿಸದಿದ್ದರೆ ಅಧಿಕಾರಿಗಳನ್ನೇ ಹೊಣೆಯಾಗಿ ಮಾಡಬೇಕು.

ಈ ವಿಚಾರದಲ್ಲಿ ಶೇ.1ರಷ್ಟು ಕರ್ತವ್ಯ ಲೋಪವನ್ನು ಕೂಡ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿತು. ವಿಮಾನ ನಿಲ್ದಾಣ ರಸ್ತೆ ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ ಎಂಬ ವಕೀಲರ ಸ್ಪಷ್ಟನೆಗೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಮುಂದಿನ ವಿಚಾರಣೆ ವೇಳೆ ಈ ಕುರಿತು ದಾಖಲೆಗಳೊಂದಿಗೆ ಸ್ಪಷ್ಟೀಕರಣ ನೀಡುವಂತೆ ತಾಕೀತು ಮಾಡಿತು.

ಅನಧಿಕೃತ ಫ್ಲೆಕ್ಸ್‌ ಅಳವಡಿಕೆ ಹಾಗೂ ಪಾಲಿಕೆ ಸಿಬ್ಬಂದಿ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದ 200 ಪ್ರಕರಣಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 33 ಪ್ರಕರಣಗಳಲ್ಲಿ ಆರೋಪಿಗಳನ್ನು ಗುರ್ತಿಸಲಾಗಿದೆ. ಈ ಎಲ್ಲ ಪ್ರಕರಣಗಳನ್ನು ವಿಚಾರಣೆಗಾಗಿ 56 ಎಸಿಎಂಎಂ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ ಎಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದಾರೆ. ಅರ್ಜಿ ವಿಚಾರಣೆಯನ್ನು ನ್ಯಾಯಪೀಠ ಮಂಗಳವಾರ ನಡೆಸಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next