Advertisement

ದುಡ್ಡು ಕೊಟ್ಟರೆ ಮಾತ್ರ ಕೆಲಸವೇ?

12:11 PM Jun 26, 2018 | Team Udayavani |

ಬೆಂಗಳೂರು: ಸ್ವಾಧೀನಪಡಿಸಿಕೊಂಡ ಭೂಮಿಗೆ ಪರ್ಯಾಯ ಭೂಮಿ ನೀಡುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನವ್ಯಕ್ತಪಡಿಸಿರುವ ಹೈಕೋರ್ಟ್‌, ದುಡ್ಡು ಕೊಟ್ಟರೆ ಮಾತ್ರ ಅಧಿಕಾರಿಗಳು ಕೆಲಸ ಮಾಡುತ್ತಾರೆಯೇ ಎಂದು ಪ್ರಶ್ನಿಸಿದೆ.

Advertisement

ಸ್ಮಶಾನಕ್ಕೆ ಸ್ವಾಧೀನ ಪಡಿಸಿಕೊಂಡಿದ್ದ ಜಮೀನಿಗೆ ಪರ್ಯಾಯ ಭೂಮಿ ನೀಡುವ ವಿಚಾರ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಸೇರಿ ಇನ್ನಿತರೆ ಅಧಿಕಾರಿಗಳ ವಿರುದ್ಧ ಎಸ್‌.ವಿ.ಯೋಗೇಶ್ವರ್‌ ಎಂಬುವವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾ.ರಾಘವೇಂದ್ರ ಚೌಹಾಣ್‌ ಹಾಗೂ ನ್ಯಾ.ಎಚ್‌.ಟಿ.ನರೇಂದ್ರಪ್ರಸಾದ್‌ ಅವರಿದ್ದ ವಿಭಾಗೀಯ ಪೀಠ ಈ ಪ್ರಶ್ನೆ ಕೇಳಿದೆ.

ಅರ್ಜಿದಾರನಿಗೆ ಪರ್ಯಾಯ ಭೂಮಿ ನೀಡುವಂತೆ ನೀಡಿದ್ದ ಆದೇಶವನ್ನು ಪಾಲಿಸದ ಅಧಿಕಾರಿಗಳನ್ನು ನ್ಯಾಯಪೀಠ ವಿಚಾರಣೆ ವೇಳೆ ತೀವ್ರ ತರಾಟೆಗೆ ತೆಗೆದುಕೊಂಡಿತು. ಕೋರ್ಟ್‌ ಆದೇಶಗಳನ್ನು ಅಧಿಕಾರಿ ವರ್ಗ ಪಾಲಿಸುವಲ್ಲಿ ಪದೇ ಪದೇ ವಿಫ‌ಲರಾಗುತ್ತಾರೆ ಎಂದು ಅಸಮಾಧಾನವ್ಯಕ್ತಪಡಿಸಿತಲ್ಲದೆ, ಸರ್ಕಾರಿ ಅಧಿಕಾರಿಗಳು ದುಡ್ಡುಕೊಟ್ಟರೆ ಮಾತ್ರ ಕೆಲಸ ಮಾಡುತ್ತಾರೆಯೇ? ಇಲ್ಲದಿದ್ದರೆ ವಿನಾಕಾರಣ ವಿಳಂಬ ಮಾಡುತ್ತಾರೆ.

ಈ ಧೋರಣೆ ಸಹಿಸುವುದಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿತು. ಅಲ್ಲದೆ, ಅರ್ಜಿದಾರನಿಗೆ ಕೂಡಲೇ ಪರ್ಯಾಯ ಭೂಮಿ ನೀಡಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ನ್ಯಾಯಪೀಠ, ಈ ಕುರಿತು ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆಯನ್ನು ಜುಲೈ 10ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next