Advertisement

ಸಾವಿನಲ್ಲೂ ಸಾರ್ಥಕತೆ ಮೆರೆದರು; ನಾಲ್ವರ ಪ್ರಾಣ ಉಳಿಸಿ, ಇಬ್ಬರು ಅಂಧರ ಬಾಳಿಗೆ ಬೆಳಕಾದರು

04:52 PM Mar 17, 2022 | Team Udayavani |

ಬೆಳಗಾವಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರೊಬರು ನಾಲ್ವರ ಪ್ರಾಣ ಉಳಿಸಿ, ಇಬ್ಬರು ಅಂಧರ ಬಾಳಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಜಿರೋ ಟ್ರಾಫಿಕ್‌ನಲ್ಲಿ ಗ್ರೀನ್‌ ಕಾರಿಡಾರ್‌ ಮೂಲಕ ಲೀವರ್‌ ಹಾಗೂ ಕಿಡ್ನಿಯನ್ನು ರವಾನಿಸಲಾಯಿತು.

Advertisement

ಮನೆಯಲ್ಲಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಆರೆಸ್ಸೆಸ್‌ ಕಾರ್ಯಕರ್ತ, ಬೆಳಗಾವಿಯ ಮಹಾಬಲೇಶ್ವರ(ಹನುಮಾನ) ನಗರದ ನಿವಾಸಿ ಉಮೇಶ ಬಸವಣ್ಣಿ ದಂಡಗಿ(51) ಅಂಗಾಂಗಳನ್ನು ದಾನ ಮಾಡಿದ್ದಾರೆ. ಚಿಕಿತ್ಸೆಗಾಗಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರಕ್ಕೆ ಉಮೇಶ ಅವರನ್ನು ದಾಖಲಿಸಲಾಗಿತ್ತು. ಮೆದುಳು ನಿಷ್ಕ್ರಿಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದಾಗ ಹೃದಯ, ಕಿಡ್ನಿ, ಲೀವರ್‌ ಹಾಗೂ ನೇತ್ರಗಳನ್ನು ದಾನ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ಆಂಬ್ಯುಲೆನ್ಸ್‌ನಲ್ಲಿ ಲೀವರ್‌ ಸ್ಥಳಾಂತರಿಸಲುಕೆಎಲ್‌ಇ ಆಸ್ಪತ್ರೆಯಿಂದ ವಿಮಾನ ನಿಲ್ದಾಣವರೆಗೆ, ಒಂದು ಕಿಡ್ನಿಯನ್ನು ಧಾರವಾಡದ ಎಸ್‌ಡಿಎಂ ಆಸ್ಪತ್ರೆ ಹಾಗೂ ಇನ್ನೊಂದು ಕಿಡ್ನಿಯನ್ನು ಹುಬ್ಬಳ್ಳಿಯ ತತ್ವದರ್ಶ ಆಸ್ಪತ್ರೆಗೆ ಸಾಗಿಸಲು ಜಿರೋ ಟ್ರಾಫಿಕ್‌ ಮಾಡಲಾಗಿತ್ತು. ಬೆಳಗಾವಿಯಿಂದ ಹುಬ್ಬಳ್ಳಿವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ರೀನ್‌ ಕಾರಿಡಾರ್‌ ವ್ಯವಸ್ಥೆ ಮಾಡಲಾಗಿತ್ತು.ಕೆಎಲ್‌ಇ ಆಸ್ಪತ್ರೆಯಲ್ಲಿಯೇ ಹೃದಯವನ್ನು ಮತ್ತೂಬ್ಬರಿಗೆ ಜೋಡಿಸಲಾಯಿತು. ಜತೆಗೆ ಇಬ್ಬರು ಅಂಧರಿಗೆ ಕಣ್ಣುಗಳನ್ನು ಕಸಿ ಮಾಡುವ ಮೂಲಕ ವೈದ್ಯರು ಯಶಸ್ವಿ ಚಿಕಿತ್ಸೆ ನಡೆಸಿದರು.

ಬೆಳಗಾವಿ ಹಾಗೂ ಹುಬ್ಬಳ್ಳಿ ಪೊಲೀಸರ ಕಾರ್ಯ ಅತ್ಯಂತ ಶ್ಲಾಘನೀಯವಾದದ್ದು. ಜನಸಂದಣಿ ಹಾಗೂ ಸಂಚಾರ ದಟ್ಟಣೆಯಿಂದ ಕೂಡಿದ ರಸ್ತೆಯಲ್ಲಿ ಗ್ರೀನ್‌ ಕಾರಿಡಾರ ನಿರ್ಮಿಸಿ ಅಂಗಾಂಗಳನ್ನು ಶೀಘ್ರವಾಗಿ ನಿಗದಿತ ವೇಳೆಗೆ ಸ್ಥಳಾಂತರಿಸಲು ಅವಕಾಶ ಮಾಡಿಕೊಟ್ಟರು.

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಸಹೋದರರು, ಪತ್ನಿ ಹಾಗೂ ಕುಟುಂಬ ಸದಸ್ಯರಿಗೆ ಆಪ್ತಸಮಾಲೋಚನೆ ಮಾಡಿ ನಿಮ್ಮ ವ್ಯಕ್ತಿ ನೀಡುವ ಅಂಗಾಂಗಳಿಂದ ಇನ್ನೊಬ್ಬರ ಜೀವ ಉಳಿಯುತ್ತದೆ ಎಂದು ಹೇಳಿದಾಗ, ಸ್ವಇಚ್ಛೆಯಿಂದ ಅಂಗಾಂಗಗಳನ್ನು ದಾನ ಮಾಡಲು ಕುಟುಂಬಸ್ಥರು ಒಪ್ಪಿಕೊಂಡರು. ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡಿದ್ದ ಕುಟುಂಬವು ಸದಾ ಜನರ ಕಷ್ಟಕ್ಕೆ ಸ್ಪಂದಿಸಿದ್ದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

Advertisement

ಅಂಗಾಂಗಗಳನ್ನು ದಾನ ಮಾಡಿದ ವ್ಯಕ್ತಿ ಹಾಗೂ ಆತನ ಕುಟುಂಬಸ್ಥರ ಕಾರ್ಯವನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ. ಜಾಲಿ ಹಾಗೂ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.

ಮೊದಲಿನಿಂದಲೂ ಉಮೇಶಗೆ ಸಮಾಜಸೇವೆಯ ಗೀಳು: ಮೊದಲಿನಿಂದಲೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಉಮೇಶ ದಂಡಗಿ ಅವರು ಹನುಮಾನ ನಗರ ಶಾಖೆಯ ಆರೆಸ್ಸೆಸ್‌ನ ಕಟ್ಟಾ ಕಾರ್ಯಕರ್ತರು. ಅನೇಕ ಸಲ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಬೆಳಗಾವಿಯಲ್ಲಿ ಹಮ್ಮಿಕೊಂಡ ಅನೇಕ ಕಾರ್ಯಕ್ರಮಗಳಲ್ಲಿ ಉಮೇಶ ಪಾಲ್ಗೊಳ್ಳುತ್ತಿದ್ದರು. ಮೊನ್ನೆಯಷ್ಟೇ ನಗರದಲ್ಲಿ ನಡೆದ ಪಥಸಂಚಲನಕ್ಕೆ ಪಾಲ್ಗೊಳ್ಳಲು ತಯಾರಿ ಮಾಡಿಕೊಂಡಿದ್ದರು. ಆದರೆ ದುರದೃಷ್ಟವಶಾತ್‌ ಹಿಂದಿನ ದಿನ ರಾತ್ರಿ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಈಗ ಅಂಗಾಂಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next