Advertisement

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

11:47 PM Apr 27, 2024 | Team Udayavani |

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಹತ್ತು ವರ್ಷದಲ್ಲಿ ಮಾರುಕಟ್ಟೆಯಲ್ಲಿ ಸುಳ್ಳು ಮಾರಿಕೊಂಡು ಹೊರಟಿದ್ದಾರೆ. ಅವರನ್ನು ನಂಬಿ ಜನ ಮತ ಹಾಕಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

Advertisement

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಹಿಂದುಳಿದವರ ಮೀಸಲಾತಿ ಕಿತ್ತುಕೊಂಡು ಮುಸ್ಲಿಮರಿಗೆ ಕೊಡುತ್ತಾರೆ ಎನ್ನುವ ಮೋದಿ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ. ಮಹಿಳೆಯರ ಮಾಂಗಲ್ಯದ ಬಗ್ಗೆಯೂ ನೀಡಿದ ಅವರ ಹೇಳಿಕೆ ಹತಾಶೆಯಿಂದ ಕೂಡಿದೆ. ಅವರ ಹೇಳಿಕೆಗಳ ವಿರುದ್ಧ ಕಾಂಗ್ರೆಸ್‌ ವತಿಯಿಂದ ಚುನಾವಣೆ ಆಯೋಗಕ್ಕೆ ದೂರು ದಾಖಲಿಸಲಾಗುವುದು ಎಂದು ಹೇಳಿದರು.

ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿಗೆ ನೀಡುವ ಮೀಸಲಾತಿಯನ್ನು ಯಾವ ಕಾರಣಕ್ಕೆ ಬಿಜೆಪಿ ಬೆಂಬಲಿಸಿಲ್ಲ. ಅಡ್ವಾಣಿ ಮೀಸಲಾತಿ ವಿರುದ್ಧ ರಥಯಾತ್ರೆ ಕೈಗೊಂಡಿದ್ದರು. ಬಿಜೆಪಿ ಸಂಸದ ರಾಮಾಜೋಯಿಸ್‌ ಮಹಿಳೆಯರಿಗೆ ಹಾಗೂ ಹಿಂದುಳಿದ ವರ್ಗಗಳಿಗೆ ನೀಡುವ ಮೀಸಲಾತಿ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಮೀಸಲಾತಿ ನೀಡಿದ್ದನ್ನು ಸುಪ್ರಿಂಕೋರ್ಟ್‌ ಎತ್ತಿ ಹಿಡಿದಿತ್ತು ಎಂದು ನೆನಪಿಸಿಕೊಂಡರು. ಸಂವಿಧಾನದ ಆರ್ಟಿಕಲ್‌ 15 ಹಾಗೂ 16ಎ ಪ್ರಕಾರ ಎಲ್ಲರೂ ಸಮಾನರು. ಆದರೆ ಆರ್ಟಿಕಲ್‌ 14ರ ಪ್ರಕಾರ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬಹುದು.

ಮಂಡಲ್‌ ಆಯೋಗದ ವರದಿಯಲ್ಲಿ ಇದನ್ನೇ ಹೇಳಲಾಗಿದೆ. ಹಿಂದುಳಿದ ವರ್ಗಗಳ ಆಯೋಗ ಇರಬೇಕು ಎಂದು ಹೇಳಿದೆ. ಆದರೆ ವರದಿ ವಿರುದ್ಧ ಬಿಜೆಪಿ ವಿದ್ಯಾರ್ಥಿಗಳನ್ನು ಪ್ರಚೋದಿಸಿತ್ತು. ಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಕೂಡಾ ಒಪ್ಪಿಕೊಂಡಿದ್ದು ಅದು ಶೇ. 50 ಮೀರಬಾರದು ಎಂದು ನಿಗದಿಪಡಿಸಿದೆ. ಆದರೆ, ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ. 10 ಮೀಸಲಾತಿ ಕೊಟ್ಟಿದೆ. ಜೊತೆಗೆ ಬೊಮ್ಮಾಯಿ ಸರಕಾರ ಅಧಿ ಕಾರದಲ್ಲಿದ್ದಾಗ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲಾಗಿದೆ ಎನ್ನುವ ಕಾರಣ ನೀಡಿ, ಮುಸಲ್ಮಾನರಿಗೆ ಕೊಟ್ಟಿದ್ದ ಮೀಸಲಾತಿಯನ್ನು ರದ್ದುಗೊಳಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ ಎಂದು ಹೇಳಿದರು.

1974-75ರಲ್ಲಿ ನಡೆದ ಸಂವಿಧಾನದ ತಿದ್ದುಪಡಿ ಮೂಲಕ ಜಿಪಂ ಹಾಗೂ ತಾಪಂಗಳಲ್ಲಿ ಮಹಿಳೆಯರು ಹಾಗೂ ಹಿಂದುಳಿದವರಿಗೆ ಮೀಸಲಾತಿ ನೀಡಲಾಗಿತ್ತು. ನರಸಿಂಹ ರಾವ್‌ ಪ್ರಧಾನಿ ಆಗಿದ್ದಾಗ ರಾಜ್ಯದಲ್ಲಿ ಬಿಸಿ(ಎ) ಹಾಗೂ ಬಿಸಿ(ಬಿ) ಮೀಸಲಾತಿ ತರಲಾಯಿತು. ಹಾಗೆ ಮಹಿಳೆಯರಿಗೆ ಶೇ.33 ಮೀಸಲಾತಿ ತರಲಾಯಿತು. ಹಿಂದುಳಿದವರಿಗೆ ಶೇ.33 ಮೀಸಲಾತಿ, ಬಿಸಿ (ಎ)ಗೆ ಶೇ. 26.4 ಹಾಗೂ ಬಿಸಿ (ಬಿ)ಗೆ ಶೇ. 6.6 ಮೀಸಲಾತಿ ನೀಡಲಾಗಿತ್ತು. ಆಗಿನಿಂದ ಈಗಿನವರೆಗೂ ಮುಸಲ್ಮಾನರು ಬಿಸಿ(ಎ)ನಲ್ಲಿ ಇದ್ದಾರೆ ಎಂದು ವಿವರಿಸಿದರು.

Advertisement

1994ರಲ್ಲಿ ಸಲ್ಲಿಕೆಯಾದ ಚಿನ್ನಪ್ಪರೆಡ್ಡಿ ವರದಿಯಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವಂತೆ ಶಿಫಾರಸು ಮಾಡಲಾಗಿತ್ತು. ಆಗ ವೀರಪ್ಪ ಮೊಯ್ಲಿ ಸಿಎಂ ಆಗಿದ್ದರು. ಆದರೆ ಅದು ದೇವೇಗೌಡರು ಸಿಎಂ ಆಗಿದ್ದಾಗ ಜಾರಿಯಾಗಿದೆ ಎಂದು ಹೇಳಿದರು.

ಡಿಕೆಶಿ ಜತೆ ಭಿನ್ನಮತವಿಲ್ಲ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಸಿಎಂ ಮಧ್ಯೆ ಶೀತಲ ಸಮರ ನಡೆದಿದೆ ಎನ್ನುವ ಅಸ್ಸಾಂ ಸಿಎಂ ಹಿಮಂತ್‌ ಬಿಸ್ವಾ ಶರ್ಮ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅಸ್ಸಾಂ ಸಿಎಂಗೆ ಇಲ್ಲಿನ ವಿಚಾರ ಗೊತ್ತಿಲ್ಲ. ತಮ್ಮ ಹಾಗೂ ಡಿ.ಕೆ. ಶಿವಕುಮಾರ ಮಧ್ಯೆ ಯಾವುದೇ ಶೀತಲ ಸಮರವಿಲ್ಲ ಎಂದು ಸ್ಪಷ್ಟಪಡಿಸಿದರು. ನಾವೆಲ್ಲ ಒಗ್ಗಟ್ಟಾಗಿದ್ದೇವೆ. ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿವೆ. ಅವರು ಬುದ್ಧಿವಂತರಿದ್ದು, ನಮಗೆ ಆಶೀರ್ವಾದ ಮಾಡಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next