Advertisement

ಕ್ಷಯರೋಗ ಪತ್ತೆ ಆಂದೋಲನಕ್ಕೆ ಚಾಲನೆ

12:40 PM Jul 18, 2017 | Team Udayavani |

ಕಲಬುರಗಿ: ಸಾಂಕ್ರಾಮಿಕ ರೋಗವಾಗಿರುವ ಕ್ಷಯರೋಗದ ನಿರ್ಮೂಲನೆಗೆ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನದ ಅಂಗವಾಗಿ ಆರೋಗ್ಯ ಕಾರ್ಯಕರ್ತರು ಮನೆಗೆ ಭೇಟಿ ನೀಡಿದಾಗ ಅಗತ್ಯ ಮಾಹಿತಿ ನೀಡುವುದರ ಮೂಲಕ ಆಂದೋಲನ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.

Advertisement

ಅಶೋಕ ನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಆಯೋಜಿಸಿದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಇಂದಿನಿಂದ 15 ದಿನಗಳ ಕಾಲ ಗ್ರಾಮೀಣ, ನಗರ, ಕೊಳಚೆ, ಗಣಿ ಪ್ರದೇಶಗಳು ಹಾಗೂ ಕ್ಷಯರೋಗಿಗಳು ಹೆಚ್ಚಿಗೆ ಇರುವ ಪ್ರದೇಶಗಳನ್ನು ಆಯ್ಕೆ ಮಾಡಿ ಸಮೀಕ್ಷೆ
ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಪತ್ತೆಯಾದ ರೋಗಿಗಳಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿ ಎಂದು ಆರೋಗ್ಯ ಕಾರ್ಯಕರ್ತರಿಗೆ
ಸೂಚಿಸಿದರು. 

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶಿವರಾಜ ಸಜ್ಜನಶೆಟ್ಟಿ ಮಾತನಾಡಿ, ಕ್ಷಯರೋಗವನ್ನು ಪ್ರಾರಂಭದ ಹಂತದಲ್ಲಿ ಪತ್ತೆ ಹಚ್ಚಿ ಕೂಡಲೇ ಚಿಕಿತ್ಸೆ ಪ್ರಾರಂಭಿಸಿ ಸತತವಾಗಿ 6 ತಿಂಗಳ ಔಷಧಿ ಸೇವಿಸಿದರೆ ಸಂಪೂರ್ಣ ಗುಣಮುಖ ಮಾಡಬಹುದು. ಆದರೆ ರೋಗಿಗಳು ಎರಡೂರು ತಿಂಗಳ ಕಾಲ ಔಷಧಿ  ಸೇವಿಸಿ ಮುಂದಿನ ಔಷಧಿ ಸೇವಿಸದೇ ಬಿಟ್ಟರೆ ಡ್ರಗ್‌ ರೆಸಿಸ್ಟೆನ್ಸಿ (ಕ್ಷಯ) ಉಂಟಾಗಿ ರೋಗ ಗುಣಮುಖವಾಗಲು ಕಷ್ಟಕರವಾಗುತ್ತದೆ ಎಂದರು. ಆರ್‌.ಸಿ.ಎಚ್‌. ಅ ಧಿಕಾರಿ ಡಾ| ರುದ್ರವಾಡಿ, ಕ್ಷಯರೋಗ ಅಧಿ ಕಾರಿ ಡಾ| ಶರಣಬಸಪ್ಪ ಗಣಜಲಖೇಡ, ಕುಟುಂಬ ಕಲ್ಯಾಣ ಅಧಿಕಾರಿ ಡಾ| ನಾಗಲೀಕರ್‌, ತಾಲೂಕು ವೈದ್ಯಾಧಿಕಾರಿ ಡಾ| ರಾಜಕುಮಾರ, ಅಶೋಕ ನಗರದ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಬಾಬುರಾವ್‌ ಚವ್ಹಾಣ, ಮಹಾನಗರ ಪಾಲಿಕೆ ಸದಸ್ಯ ಪರಶುರಾಮ ಹೋಳಕರ್‌, ವಿಠಲ ನಗರ ಶಾಂತಿ ಸಮಿತಿ ಸದಸ್ಯವಿ.ಆರ್‌. ಚಾಂಬಾಳ್‌, ಸುರೇಶ ಎಸ್‌. ದೊಡಮನಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗಣ್ಯರು ಪಾಲ್ಗೊಂಡಿದ್ದರು.

ದೇಶದ 50 ಜಿಲ್ಲೆಗಳಲ್ಲಿ ಕಾರ್ಯಕ್ರಮ 
ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು ಮತ್ತು ಮೇಲ್ವಿಚಾರಕರು,
ವೈದ್ಯಾಧಿಕಾರಿಗಳು ಸೇರಿದಂತೆ ಒಟ್ಟು 1607 ತಂಡಗಳನ್ನು ರಚಿಸಲಾಗಿದೆ. ಪ್ರತಿಯೊಂದು ತಂಡಕ್ಕೆ ಇಬ್ಬರಂತೆ ಒಟ್ಟು 3214 ಸಿಬ್ಬಂದಿಗಳು ಮತ್ತು 322 ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ. ಕಲಬುರಗಿ ಜಿಲ್ಲೆ ಸೇರಿದಂತೆ ಭಾರತ ದೇಶದ ಒಟ್ಟು ಐವತ್ತು ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕ್ಷಯರೋಗದ ಲಕ್ಷಣ
ಎರಡು ವಾರ ಅಥವಾ ಅದಕ್ಕಿಂತ ಮೇಲ್ಪಟ್ಟು ಸತತವಾದ ಕೆಮ್ಮು, ಜ್ವರ, ಅದರಲ್ಲೂ ಸಂಜೆ ವೇಳೆ ಹೆಚ್ಚಾಗುವುದು ಮತ್ತು ಎದೆಯಲ್ಲಿ ನೋವು, ತೂಕ ಕಡಿಮೆಯಾಗುವುದು, ಹಸಿವಾಗದಿರುವುದು, ಕಫದಲ್ಲಿ ರಕ್ತ ಬೀಳುವಂತಹ ಕ್ಷಯರೋಗದ ಲಕ್ಷಣಗಳು ಕಂಡು
ಬಂದರೆ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳಿ. ಕ್ಷಯರೋಗ ಖಚಿತಪಟ್ಟರೆ ಸರ್ಕಾರಿ ಆಸ್ಪತ್ರೆಯಲ್ಲಿ ಸಂಪೂರ್ಣ ಉಚಿತವಾಗಿ ಡಾಟ್ಸ್‌ ಚಿಕಿತ್ಸೆ ಮತ್ತು ಔಷಧಿ ನೀಡಲಾಗುವುದು.
ಡಾ| ಶಿವರಾಜ ಸಜ್ಜನಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

Advertisement
Advertisement

Udayavani is now on Telegram. Click here to join our channel and stay updated with the latest news.

Next