Advertisement

ವಾಲಿಬಾಲ್‌ ಕ್ರೀಡಾಕೂಟಕ್ಕೆ ಚಾಲನೆ

01:01 PM Jan 09, 2018 | |

ವಿಜಯಪುರ: ಕ್ರೀಡಾಕ್ಷೇತ್ರದ ಬಲವರ್ಧನೆಗಾಗಿ ಆಯಾ ರಾಜ್ಯ ಸರ್ಕಾರಗಳು ತಮ್ಮ ಬಜೆಟ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಕಾಯ್ದಿರಿಸುವುದು ಅವಶ್ಯವಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಡಾ| ಎಂ.ಬಿ. ಪಾಟೀಲ ಹೇಳಿದರು.

Advertisement

ನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ 63ನೇ ರಾಷ್ಟ್ರಮಟ್ಟದ ವಾಲಿಬಾಲ್‌ ಪಂದ್ಯಾವಳಿಗೆ ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿದ ಅವರು, 125 ಕೋಟಿ ಜನಸಂಖ್ಯೆ ಹೊಂದಿದ್ದರೂ ಸಹ ಕ್ರೀಡಾಕ್ಷೇತ್ರದಲ್ಲಿ ಭಾರತದ ಸಾಧನೆ ತೃಪ್ತಿಕರವಾಗಿಲ್ಲ. ಈ
ನಿಟ್ಟಿನಲ್ಲಿ ಕ್ರೀಡಾಪಟುಗಳಿಗೆ, ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದು ಅವಶ್ಯವಾಗಿದೆ ಎಂದರು.

ವಿಜಯಪುರದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಜಲ ಸಂಪನ್ಮೂಲ ಇಲಾಖೆ ವತಿಯಿಂದಲೂ ಪ್ರೋತ್ಸಾಹ ನೀಡಲಾಗುತ್ತಿದೆ. ಈ ಕಾರಣಕ್ಕಾಗಿ ಸಿಂಥೆಟಿಕ್‌ ಟ್ರಾಫಿಕ್‌ ನಿರ್ಮಾಣ, ಮಿನಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಸೇರಿದಂತೆ ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿದಂತಹ ವಿವಿಧ ಕಾಮಗಾರಿಗಳಿಗೆ 10 ಕೋಟಿ ರೂ. ಅನುದಾನ ಒದಗಿಸುವುದಾಗಿ ಘೋಷಿಸಿದರು. ನಗರಾಭಿವೃದ್ಧಿ ಖಾತೆ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ಡಾ| ಮಕ್ಬೂಲ್‌ ಬಾಗವಾನ, ಜಿಪಂ ಅಧ್ಯಕ್ಷೆ ನೀಲಮ್ಮ ಮೇಟಿ, ಮೇಯರ್‌ ಸಂಗೀತಾ ಪೋಳ, ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ.ಎಸ್‌. ಗುರಿಕಾರ ಇದ್ದರು.

ವರ್ಣರಂಜಿತ ಚಾಲನೆ: 63ನೇ ರಾಷ್ಟ್ರಮಟ್ಟದ ವಾಲಿಬಾಲ್‌ ಪಂದ್ಯಾವಳಿಗೆ ವರ್ಣರಂಜಿತ ಚಾಲನೆ ದೊರಕಿತು. ಜಮ್ಮುಕಾಶ್ಮೀರ, ಮಧ್ಯಪ್ರದೇಶ, ಓಡಿಸ್ಸಾ, ತೆಲಂಗಾಣ, ಗುಜರಾತ, ತಮಿಳುನಾಡು, ಜಾರ್ಖಂಡ್‌ ಸೇರಿದಂತೆ ಹಲವಾರು ರಾಜ್ಯಗಳಿಂದ ಆಗಮಿಸಿದ ಕ್ರೀಡಾಪಟುಗಳು ಕ್ರೀಡಾ ಜಾಗೃತಿ ಜಾಥಾ ನಡೆಸಿದರು. ವಿದ್ಯಾರ್ಥಿನಿಯರು ಬಂಜಾರಾ ನೃತ್ಯ ಪ್ರದರ್ಶಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next