Advertisement

ಬರ ಅಧ್ಯಯನ ವರದಿ ನಾಡಿದ್ದು ಮುಖ್ಯಮಂತ್ರಿಗೆ ಸಲ್ಲಿಕೆ

06:54 AM Feb 02, 2019 | Team Udayavani |

ಕಲಬುರಗಿ: ಬರ ಅಧ್ಯಯನ ಸಚಿವ ಉಪ ಸಂಪುಟ ಸಮಿತಿ ಕಳೆದೆರಡು ದಿನಗಳಿಂದ ಕಲಬುರಗಿ ವಿಭಾಗದಲ್ಲಿ ಅಧ್ಯಯನ ನಡೆಸುತ್ತಿದ್ದು, ಈ ಸಂಬಂಧ ಫೆ. 4ರಂದು ಸಿಎಂಗೆ ವರದಿ ಸಲ್ಲಿಸಲಿದೆ ಎಂದು ರಾಜ್ಯದ ಪ್ರವಾಹ ಪೀಡಿತ, ಬರಪೀಡಿತ ಪ್ರದೇಶಗಳ ಅಧ್ಯಯನ, ಪರಿಹಾರ, ನಿರ್ವಹಣೆಗಳ ಬಗ್ಗೆ ಕಲಬುರಗಿ ವಿಭಾಗಕ್ಕೆ ರಚಿಸಿರುವ ಸಚಿವ ಸಂಪುಟದ ಉಪ ಸಮಿತಿ ಅಧ್ಯಕ್ಷ ಹಾಗೂ ಸಹಕಾರ ಸಚಿವ ಬಂಡೆಪ್ಪ ಖಾಶೆಂಪುರ ತಿಳಿಸಿದರು.

Advertisement

ಜೇವರ್ಗಿ ತಾಲೂಕಿನ ಯಾಳವಾರ ಗ್ರಾಪಂ ವ್ಯಾಪ್ತಿಯ ಕುಡಚಿ ಗ್ರಾಮದಲ್ಲಿ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹಮ್ಮಿಕೊಂಡಿರುವ ಕುಡಚಿ ನಾಲಾ ಹೂಳೆತ್ತುವ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಲಬುರಗಿ ವಿಭಾಗದ ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಸಂಪೂರ್ಣ ಬೆಳೆಹಾನಿಯಾಗಿದೆ ಎಂದರು.

ಮಳೆ ಆಧಾರಿತ ಪ್ರದೇಶವಾಗಿರುವ ಹೈ.ಕ. ಭಾಗದಲ್ಲಿ ಮಳೆ ಕೊರತೆಯಿಂದ ಸಂಪೂರ್ಣ ಬೆಳೆ ಹಾನಿಯಾಗಿದೆ. ಮಳೆ ಕೊರತೆಯಿಂದಾಗಿ ಶೇ. 75 ರಷ್ಟು ಬಿತ್ತನೆ ಆಗಿಲ್ಲ. ಇದರಿಂದಾಗಿ ರೈತರು ಸಂಕಷ್ಟದಲ್ಲಿರುವುದು ಅಧ್ಯಯನದಿಂದ ತಿಳಿದು ಬಂದಿದೆ ಎಂದು ಹೇಳಿದರು.

ಬರಗಾಲದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ಹೆಚ್ಚಾಗಿ ಕೈಗೊಳ್ಳಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈಗಾಗಲೇ 150 ಮಾನವ ದಿನಗಳನ್ನು ಪೂರೈಸಿದವರಿಗೂ ಉದ್ಯೋಗ ಖಾತ್ರಿ ಅಡಿ ಹೆಚ್ಚುವರಿ ಕೂಲಿ ಕೆಲಸ ನೀಡಲು ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಪ್ರಸಕ್ತ ಸಾಲಿನ ಆರ್ಥಿಕ ವರ್ಷ ಮಾರ್ಚ್‌ನಲ್ಲಿ ಕೊನೆಗೊಳ್ಳಲಿದೆ. ಈಗಾಗಲೇ ಉದ್ಯೋಗ ಖಾತ್ರಿ ಯೋಜನೆಯಡಿ ಶೇ. 85ರಷ್ಟು ಗುರಿ ತಲುಪಲಾಗಿದೆ. ಬರಗಾಲ ಹಿನ್ನೆಲೆಯಲ್ಲಿ ಉದ್ಯೋಗ ಅರಸಿ ರಾಜ್ಯದ ಜನರು ಗುಳೆ ಹೋಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರದಿಂದಲೇ ಕಾಮಗಾರಿಗಳನ್ನು ನೀಡಲಾಗುವುದು.

Advertisement

ಈಗಾಗಲೇ ಕುಡಿಯುವ ನೀರಿನ ತೊಂದರೆ ನೀಗಿಸಲು ಜಿಲ್ಲಾ ಟಾಸ್ಕ್ಫೋರ್ಸ್‌ ಸಮಿತಿಗಳಿಗೆ ತಲಾ ಒಂದು ಕೋಟಿ ರೂ.ನಂತೆ ಅನುದಾನ ನೀಡಲಾಗಿದೆ. ಕುಡಿಯುವ ನೀರಿನ ಕಾಮಗಾರಿಗಳನ್ನು ಟಾಸ್ಕ್ಫೋರ್ಸ್‌ ಸಮಿತಿಯಿಂದ ಆದ್ಯತೆ ಮೇರೆಗೆ ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಕಂಡು ಬಂದಲ್ಲಿ ಅವಶ್ಯಕವಿದ್ದ ಕಡೆ ಮೇವು ಬ್ಯಾಂಕ್‌ ತೆರೆಯಲು ಸರ್ಕಾರ ಸಿದ್ಧವಿದೆ. ರೈತರು ಯಾವುದೇ ಕಾರಣಕ್ಕೂ ಬರಕ್ಕೆ ಎದೆಗುಂದಿ ತಮ್ಮ ಜಾನುವಾರುಗಳನ್ನು ಮಾರಿಕೊಳ್ಳಬಾರದು ಎಂದು ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿ, ರಾಜ್ಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಈಗಾಗಲೇ 77 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. ಕಳೆದ 15 ದಿನಗಳಿಂದ ಕಾಮಗಾರಿಗಳನ್ನು ಹೆಚ್ಚಾಗಿ ಪ್ರಾರಂಭಿಸಿದ್ದು, ಸುಮಾರು 23 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳಿಗಾಗಿ ಕಳೆದ ವರ್ಷದ 853 ಕೋಟಿ ರೂ. ಸೇರಿದಂತೆ ಒಟ್ಟು ಈ ವರೆಗೆ 1800 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಬೇಕಾಗಿದೆ ಎಂದರು.

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿರುವ 958 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಈ ವಾಹನಗಳ ಪರವಾನಗಿ ರದ್ದುಗೊಳಿಸಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಕ್ರಮ ಪಡಿತರ ಚೀಟಿ, ಅಕ್ರಮವಾಗಿ ವಸತಿ ನಿಲಯಗಳಲ್ಲಿ ವಾಸಿಸುವವರನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಉದ್ಯೋಗ ಖಾತ್ರಿ ಕೂಲಿಕಾರರೊಂದಿಗೆ ಚರ್ಚಿಸಿದ ಸಚಿವದ್ವಯರು 150 ಮಾನವ ದಿನಗಳನ್ನು ಪೂರೈಸುವವರಿಗೂ ಸಹ ಹೆಚ್ಚಿನ ದಿನಗಳಿಗೆ ಕೂಲಿ ನೀಡಲು ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ಕೂಲಿ ಹಣವನ್ನು ಆದಷ್ಟು ಬೇಗ ನಿಮ್ಮ ಬ್ಯಾಂಕ್‌ ಖಾತೆಗಳಿಗೆ ಜಮಾ ಮಾಡಿಸಲಾಗುವುದು. ಕಾರಣ ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ರೈತರಿಗೆ ಭರವಸೆ ನೀಡಿದರು.

ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಬಿ. ಪಾಟೀಲ, ಶಾಸಕರಾದ ಡಾ| ಅಜಯಸಿಂಗ್‌, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ, ಜಿಪಂ ಸಿಇಒ ಡಾ| ಪಿ. ರಾಜಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಿತೇಂದ್ರ ಸುಗೂರ ಈ ಸಂದರ್ಭದಲ್ಲಿದ್ದರು.

ನಂತರ ಸಮಿತಿಯು ಜೇವರ್ಗಿ ತಾಲೂಕಿನ ಔರಾದ, ಕಲಬುರಗಿ ತಾಲೂಕಿನ ಫಿರೋಜಾಬಾದ, ಸರಡಗಿ, ಹಾಗರಗುಂಡಗಿ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಅಭಾವದಿಂದ ಹಾನಿಗೊಳಗಾದ ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವ ಸಮುದಾಯ ಕಾಮಗಾರಿ ಕ್ಷೇತ್ರಗಳಿಗೆ ಭೇಟಿ ನೀಡಿತು.

ಖಾತ್ರಿ ಹಣ ಪಾವತಿಗೆ ಪರ್ಯಾಯ ವ್ಯವಸ್ಥೆ
ಕಲಬುರಗಿ:
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೇಂದ್ರ ಸರ್ಕಾರ ಎರಡು ತಿಂಗಳಿಂದ ಅನುದಾನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಪರ್ಯಾಯ ವ್ಯವಸ್ಥೆ ಮಾಡಲು ತೀರ್ಮಾನಿಸಲಾಗಿದೆ ಎಂದು ಬರ ಅಧ್ಯಯನ ಸಂಪುಟ ಉಪ ಸಮಿತಿ ಅಧ್ಯಕ್ಷ, ಸಹಕಾರ ಸಚಿವ ಬಂಡೆಪ್ಪ ಖಾಶೆಂಟuರ ತಿಳಿಸಿದರು.

ಉದ್ಯೋಗ ಖಾತ್ರಿ ಕೂಲಿ ಹಣ ಬಿಡುಗಡೆಗೆ ಒತ್ತಾಯಿಸಿ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಿರತ ಕೂಲಿ ಮಹಿಳಾ ಕಾರ್ಮಿಕರ ಸಮಸ್ಯೆ ಆಲಿಸಿ ಮಾತನಾಡಿದ ಅವರು, ಬರ ಅಧ್ಯಯನ ಸಂದರ್ಭದಲ್ಲಿ ಕೂಲಿ ಕಾರ್ಮಿಕರ ಸಂಕಟ ಕಂಡು ನಮಗೂ ಸಂಕಟವಾಗುತ್ತಿದೆ. ಬರದ ಭೀಕರತೆ ವಾಸ್ತವ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮನದಟ್ಟು ಮಾಡಿಕೊಳ್ಳಲಾಗಿದ್ದು, ಕೂಲಿ ಕಾರ್ಮಿಕರಿಗೆ ನೆರವಾಗಲು ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಅಭಯ ನೀಡಿದರು.

ಉದ್ಯೋಗ ಖಾತ್ರಿಯಡಿ ದುಡಿದ ಕಾರ್ಮಿಕರಿಗೆ ಕೂಲಿ ನೀಡಲು 500 ಕೋಟಿ ರೂ. ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧವಿದೆ. ರಾಜ್ಯ ಸರ್ಕಾರಗಳು ಉದ್ಯೋಗ ಖಾತ್ರಿಗೆ ನೇರವಾಗಿ ಅನುದಾನ ನೀಡಲು ಅವಕಾಶ ಇಲ್ಲದೇ ಇರುವ ಕಾರಣ ಯಾವ ವ್ಯವಸ್ಥೆಯಲ್ಲಿ ಪರಿಹಾರ ಒದಗಿಸಬೇಕೆಂಬ ಚಿಂತನೆ ನಡೆದಿದೆ. ರೈತರು, ಕೂಲಿ ಕಾರ್ಮಿಕರನ್ನು ಕೇಂದ್ರ ಸರ್ಕಾರ ಕೈ ಬಿಟ್ಟಿದ್ದರೂ ರಾಜ್ಯ ಸರ್ಕಾರ ಕೈಬಿಡಲ್ಲ. ಅನುದಾನ ಬಿಡುಗಡೆ ಮಾಡುವಂತೆ ಶೀಘ್ರವೇ ಪ್ರಧಾನಿ ಹಾಗೂ ಕೇಂದ್ರದ ಸಚಿವರ ಬಳಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ, ಸಿಎಂ, ಡಿಸಿಎಂ ಹಾಗೂ ಸಚಿವರ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next