ಬೆಂಗಳೂರು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಪಠ್ಯದಲ್ಲಿ ಅಳವಡಿಸುವ ಕುರಿತು ಶಿಕ್ಷಣ ಇಲಾಖೆ ಜತೆ ಚರ್ಚಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸೋಮವಾರ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ “ವಿಶ್ವ ಮಾದಕ ವಸ್ತು ವಿರೋಧಿ ಸಪ್ತಾಹ’ ಸಮಾರಂಭದಲ್ಲಿ ಮಾತನಾಡಿದ ಅವರು, ಆ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಪಠ್ಯದಲ್ಲಿ ಈ ಮಾದಕ ವಸ್ತುಗಳ ಜಾಗೃತಿ ಕುರಿತ ವಿಷಯ ಅಳವಡಿಕೆ ಮಾಡುವುದು ಅಗತ್ಯವಾಗಿದೆ ಎಂದು ಹೇಳಿದರು.
ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಕುರಿತು ಮಕ್ಕಳಿಗೆ ಶಾಲಾ ದಿನಗಳಿಂದಲೇ ಜಾಗೃತಿ ಮೂಡಿಸಬೇಕಿದೆ. ಆ ಮೂಲಕ ಮಕ್ಕಳು ಮಾದಕ ವಸ್ತುಗಳಿಂದ ದೂರ ಇರುವಂತೆ ನೋಡಿಕೊಳ್ಳಬೇಕಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಮಾದಕ ವಸ್ತುಗಳ ಸೇವನೆಯೇ ಫ್ಯಾಷನ್ ಎಂದು ತಿಳಿಸಿದ್ದು, ಹೆಚ್ಚಿನ ಸಂಖ್ಯೆಯ ಯುವಕರು ಮಾದಕ ವಸ್ತುಗಳಿಗೆ ಮಾರು ಹೋಗುತ್ತಿದ್ದಾರೆ. ಅದರಿಂದ ಆಗುವ ದುಷ್ಪರಿಣಾಮಗಳನ್ನು ಅವರಿಗೆ ಮನವರಿಕೆ ಮಾಡುವ ಮೂಲಕ ಅವರನ್ನು ಜಾಗೃತಿಗೊಳಿಸಬೇಕಿದೆ. ಜಾಗೃತಿ ಮೂಡಿಸುವಲ್ಲಿ ಶಿಕ್ಷಣದ ಪಾತ್ರ ಪ್ರಮುಖವಾಗಿರುವುದರಿಂದ ಪಠ್ಯದಲ್ಲಿ ಈ ಕುರಿತ ವಿಷಯಗಳ ಅಳವಡಿಕೆ ಕುರಿತು ಶಿಕ್ಷಣ ಇಲಾಖೆ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜ್, ಮಹತ್ಮಾ ಗಾಂಧಿಯವರು ದೇಶಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದವರು. ಮದ್ಯಪಾನದಿಂದ ಮನುಷ್ಯ ತನ್ನನ್ನು ತಾನು ಹಾಳು ಮಾಡಿಕೊಳ್ಳುತ್ತಾನೇ ಎಂದು ಹೇಳಿದ್ದ ಅವರು, ನುಡಿದಂತೆ ನಡೆಯುವ ಮೂಲಕ ನಮಗೆ ಮಾದರಿಯಾಗಿದ್ದು, ಪ್ರತಿಯೊಬ್ಬರೂ ಅವರನ್ನು ಪಾಲನೆ ಮಾಡುವ ಮೂಲಕ ಸಮಾಜವನ್ನು ಮದ್ಯಮುಕ್ತಗೊಳಿಸಬೇಕಿದೆ ಎಂದು ತಿಳಿಸಿದರು.
ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಎಚ್.ಸಿ.ರುದ್ರಪ್ಪ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೊಡೇ ಪಿ.ಕೃಷ್ಣ, ಮನೋ ವೈದ್ಯೆ ಡಾ.ಪ್ರತಿಮಾ ಮೂರ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ದರಾಜು ಉಪಸ್ಥಿತರಿದ್ದರು.