Advertisement

ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಇ-ಪೇಮೆಂಟ್‌ ವ್ಯವಸ್ಥೆ

10:15 PM Oct 11, 2019 | Lakshmi GovindaRaju |

ಶಿಡ್ಲಘಟ್ಟ: ಜಿಲ್ಲೆಯಲ್ಲಿ ಅತ್ಯಧಿಕ ವ್ಯಾಪಾರ ಮತ್ತು ವಹಿವಾಟಿನ ಕೇಂದ್ರ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಇ-ಪೇಮೆಂಟ್‌ ಮತ್ತು ರೀಲರ್ಗಳಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರುನ್ನುಮ್‌ ತಿಳಿಸಿದರು. ನಗರದ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಗೆ ಭೇಟಿ ನೀಡಿ ರೈತರು ಮತ್ತು ರೇಷ್ಮೆ ಬಿಚ್ಚಾಣಿಕೆದಾರರ ಸಮಸ್ಯೆಗಳನ್ನು ಆಲಿಸಿ ಅವರು ಮಾತನಾಡಿದರು.

Advertisement

ತಿಂಗಳ ಅವಧಿಯೊಳಗೆ ಅನುಷ್ಠಾನಗೊಳಿಸಿ: ಜಿಲ್ಲೆಯಲ್ಲಿ ವಿವಿಧ ತಾಲೂಕುಗಳು ಮತ್ತು ಹೊರ ಜಿಲ್ಲೆ, ರಾಜ್ಯಗಳಿಂದ ರೇಷ್ಮೆ ಬೆಳೆಗಾರರಿಗೆ ಅನುಕೂಲ ಕಲ್ಪಿಸಲು ಇ-ಪೇಮೆಂಟ್‌ ವ್ಯವಸ್ಥೆ ಜಾರಿಗೊಳಿಸುವ ಜೊತೆಗೆ ರೇಷ್ಮೆ ನೂಲು ಬಿಚ್ಚಾಣಿಕೆದಾರರು ಹೊರತುಪಡಿಸಿ ಯಾರು ಒಳಗೆ ಪ್ರವೇಶ ಮಾಡದಂತೆ ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ಈ ತಿಂಗಳ ಅವಧಿಯೊಳಗೆ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಖಾತೆಗೆ ಜಮಾ: ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ರೀಲರ್ ಹೊರತುಪಡಿಸಿ ಮಧ್ಯವರ್ತಿಗಳ ಹಾವಳಿ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು. ರೇಷ್ಮೆ ಬೆಳೆಗಾರರು ರೇಷ್ಮೆಗೂಡು ಮಾರಾಟ ಮಾಡಿ ಅದರಿಂದ ಬರುವ ಹಣವನ್ನು ನಗದು ರೂಪದಲ್ಲಿ ನೀಡುವ ಬದಲಿಗೆ ಇ-ಪೇಮೆಂಟ್‌ ಮೂಲಕ ಅವರ ಖಾತೆಗಳಿಗೆ ಜಮಾ ಮಾಡಲಾಗುವುದು. ಮಾರುಕಟ್ಟೆಯಲ್ಲಿ ಕಳ್ಳತನ ನಿಯಂತ್ರಣಕ್ಕೆ ಸಿಸಿ ಕ್ಯಾಮೆರಾಗಳನ್ನು ಎಲ್ಲಾ ವಿಭಾಗಗಳಲ್ಲಿ ಅಳವಡಿಸಲಾಗುವುದು ಎಂದು ತಿಳಿಸಿದರು.

ಶಿಡ್ಲಘಟ್ಟ ರೇಷ್ಮೆಗೆ ಬ್ರ್ಯಾಂಡ್‌: ಶಿಡ್ಲಘಟ್ಟದಲ್ಲಿ ಉತ್ಪಾದನೆಯಾಗುವ ರೇಷ್ಮೆ ವಿಶ್ವವಿಖ್ಯಾತ ಹೊಂದಿದೆ. ಜರಿ ಮಾಡಲು ರೇಷ್ಮೆ ನೂಲು ಬಳಕೆ ಮಾಡಲಾಗುತ್ತದೆ. ರೇಷ್ಮೆಗೆ ಬ್ರ್ಯಾಂಡ್‌ ವ್ಯವಸ್ಥೆ ಮಾಡಲು ಜಯೋಗ್ರಾಫಿಕಲ್‌ ಇಂಡಿಕೇಟರ್‌ ಮಾಡಿಸಲು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮೈಸೂರು ಸ್ಯಾಂಡಲ್‌ ಸೋಪ್‌ ಮಾದರಿಯಲ್ಲಿ ಶಿಡ್ಲಘಟ್ಟ ರೇಷ್ಮೆಗೂ ಸಹ ಶೀಘ್ರದಲ್ಲಿ ಒಂದು ಬ್ರಾಂಡ್‌ ಸಿಗಲಿದೆ ಎಂದು ಜಿಪಂ ಸಿಇಒ ವಿಶ್ವಾಸ ವ್ಯಕ್ತಪಡಿಸಿದರು.

ನೀರು ಶುದ್ಧೀಕರಣ ಘಟಕ ಆರಂಭಿಸಲು ಸೂಚನೆ: ರೇಷ್ಮೆಗೂಡಿನ ಮಾರುಕಟ್ಟೆಗೆ ಬರುವ ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಬೇಕು. ಎಲ್ಲಾ ವಿಭಾಗಗಳಲ್ಲಿ ಒಂದು ನೀರು ಶುದ್ಧೀಕರಣ ಘಟಕ ಸ್ಥಾಪಿಸಿ ಶುದ್ಧ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

Advertisement

ಸಿಸಿ ಕ್ಯಾಮೆರಾ: ಮಾರುಕಟ್ಟೆಯಲ್ಲಿ ಆಧುನಿಕ ವ್ಯವಸ್ಥೆಯುಳ್ಳ ಸಿಸಿಕ್ಯಾಮೆರಾ ಅಳವಡಿಸಲು ಮತ್ತು ಬೀದಿದೀಪದ ವ್ಯವಸ್ಥೆ, ಸೋಲಾರ್‌ ಅಳವಡಿಸಲು ಇಲಾಖೆಯ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿ ರೇಷ್ಮೆ ಅಭಿವೃದ್ಧಿ ಆಯುಕ್ತರೊಂದಿಗೆ ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಮಾಲೋಚನೆ ನಡೆಸಿ ಮಾರುಕಟ್ಟೆಗೆ ಅಗತ್ಯ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಗಿ ಜಿಪಂ ಸಿಇಒ ಭರವಸೆ ನೀಡಿದರು.

ಮಳೆ ನೀರು ಕೊಯ್ಲು ಅಳವಡಿಸಿ: ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಕೋಟ್ಯಂತರ ರೂ. ವ್ಯಾಪಾರ-ವಹಿವಾಟು ನಡೆಯುತ್ತಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಸೌಲಭ್ಯಗಳಿಲ್ಲ ಎಂಬ ದೂರು ಕೇಳಿಬಂದಿದೆ. ಮಾರುಕಟ್ಟೆಗೆ ಅಗತ್ಯ ಸೌಲಭ್ಯಗಳ ಕುರಿತು ಸಮಗ್ರ ಮಾಹಿತಿಯನ್ನು ಸೋಮವಾರ ನಡೆಯುವ ಸಭೆಯಲ್ಲಿ ಮಂಡಿಸಬೇಕೆಂದು ಉಪನಿರ್ದೇಶಕರಿಗೆ ಸೂಚಿಸಿದರು. ರೇಷ್ಮೆ ಬೆಳೆಗಾರರು ಮತ್ತು ರೇಷ್ಮೆ ನೂಲು ಬಿಚ್ಚಾಣಿಕೆದಾರರ ಪದಾಧಿಕಾರಿಗಳು ತಮ್ಮ ತಮ್ಮ ಬೇಡಿಕೆಗಳು ಮತ್ತು ಸಮಸ್ಯೆಗಳ ಕುರಿತು ಲಿಖೀತವಾಗಿ ಮಾಹಿತಿ ನೀಡಬೇಕೆಂದು ಸೂಚಿಸಿದರು.

ಸೌದೆಗೆ ಪರ್ಯಾಯ ಕಲ್ಪಿಸಿ: ಜೆ.ರೆಹಮಾನ್‌ ಮಾತನಾಡಿ, ಒಂದು ಕಡೆ ಪರಿಸರವನ್ನು ಸಂರಕ್ಷಣೆ ಮಾಡಲು ಗಿಡಗಳನ್ನು ನಾಟಿ ಮಾಡುತ್ತಿದ್ದಾರೆ. ಮತ್ತೂಂದೆಡೆ ಶಿಡ್ಲಘಟ್ಟದಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆಗೆ ಸೌದೆಯನ್ನು ಬಳಕೆ ಮಾಡುತ್ತಿದ್ದೇವೆ. ರೇಷ್ಮೆ ಇಲಾಖೆಯ ವಿಜ್ಞಾನಿಗಳು ರೀಲರ್ಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಲು ಯಾವುದೇ ಉಪಕರಣದ ವ್ಯವಸ್ಥೆ ಕಂಡುಹಿಡಿದಿಲ್ಲ. ಸೌದೆಗೆ ಪರ್ಯಾಯ ವ್ಯವಸ್ಥೆ ಮಾಡಿ ಪರಿಸರವನ್ನು ಉಳಿಸಬೇಕೆಂದು ಮನವಿ ಮಾಡಿದರು. ಶಿಡ್ಲಘಟ್ಟದ ರೇಷ್ಮೆಯ ಮಾಹಿತಿಯನ್ನು ಮೈಸೂರಿನ ದಸರಾದಲ್ಲಿ ಸ್ತಬ್ಧಚಿತ್ರಗಳ ಪ್ರದರ್ಶನ ಮಾಡಿ ರೇಷ್ಮೆ ಉದ್ಯಮ ಅಭಿವೃದ್ಧಿಗೊಳಿಸಲು ಆಸಕ್ತಿ ವಹಿಸಿದಿ ಜಿಪಂ ಸಿಇಒ ಅವರಿಗೆ ಮೈಸೂರು ಪೇಟ ತೊಡಿಸಿ ಸನ್ಮಾನಿಸಲಾಯಿತು.

ತಾಲೂಕು ರೀಲರ್ ಸಂಘದ ಅಧ್ಯಕ್ಷ ಅನ್ಸರ್‌ಖಾನ್‌, ಜಿಲ್ಲಾ ಪಂಚಾಯಿತಿ ರೇಷ್ಮೆ ಉಪ ನಿರ್ದೇಶಕ ಬೈರಪ್ಪ, ರಾಮಕೃಷ್ಣಪ್ಪ, ಅಜೀಝ್, ಎಂ.ಎ.ಅಬ್ದುಲ್‌ ವಹಾಬ್‌, ನಾಗನರಸಿಂಹ, ನಗರಸಭೆಯ ಸದಸ್ಯ ಕೃಷ್ಣಮೂರ್ತಿ, ನರಸಿಂಹ(ಎನ್‌.ಟಿ.ಆರ್‌), ರಹಮತ್ತುಲ್ಲಾ, ಅಕ್ರಮ್‌ ಪಾಷ, ನವಾಜ್‌ ಪಾಷ (ಬಾಂಬೆ), ನಯಾಜ್‌, ಮುರ್ತೂಝ್, ಮಾರುಕಟ್ಟೆಯ ಉಪನಿರ್ದೇಶಕ ಸುಭಾಷ್‌, ಸಹಾಯಕ ನಿರ್ದೇಶಕ ಅಕ್ಮಲ್‌ ಪಾಷ ಉಪಸ್ಥಿತರಿದ್ದರು.

ಉಪನಿರ್ದೇಶಕರ ವಿರುದ್ಧ ದೂರು: ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಅನೇಕ ರೀತಿಯ ಸಮಸ್ಯೆಗಳಿವೆ. ಈ ಸಂಬಂಧ ಮಾರುಕಟ್ಟೆಯ ಉಪನಿರ್ದೇಶಕ ಸುಭಾಷ್‌ ಅವರ ಗಮನ ಸೆಳೆದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಮಾರುಕಟ್ಟೆಯಲ್ಲಿ ಉಪನಿರ್ದೇಶಕರು ಮತ್ತು ಅವರ ಅಧೀನದಲ್ಲಿರುವ ಅಧಿಕಾರಿಗಳು ಮತ್ತು ಸಿಬ½ಂದಿ ಮಧ್ಯೆ ಹೊಂದಾಣಿಕೆ ಇಲ್ಲ.

ಮಾರುಕಟ್ಟೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನಿಯೋಜನೆಗೊಂಡಿರುವ ಸಿಬ್ಬಂದಿ ಮಾರುಕಟ್ಟೆಯಲ್ಲಿ ಬ್ರೋಕರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ಕುಡಿಯುವ ನೀರು ಶುದ್ಧೀಕರಣ ಘಟಕಗಳು ನಿಷ್ಕ್ರಿಯವಾಗಿದೆ. ಮಾರುಕಟ್ಟೆಯಲ್ಲಿ ಕಳ್ಳತನ ಪ್ರಕರಣಗಳನ್ನು ನಿಯಂತ್ರಿಸಲು ಅಧಿಕಾರಿಗಳು ವಿಫ‌ಲರಾಗಿದ್ದಾರೆ. ಈ ಕುರಿತು ಸಮಗ್ರವಾಗಿ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕೆಂದು ರೀಲರ್ ಮುಖಂಡರು ಆಗ್ರಹಿಸಿದರು.

ಹಿಂದಿನ ಸರ್ಕಾರ ರೇಷ್ಮೆ ಉದ್ಯಮ ಅಭಿವೃದ್ಧಿಗಾಗಿ ಬಸವರಾಜು ಅವರ ವರದಿಯನ್ನು ಸಿದ್ಧಪಡಿಸಿದೆ. ಅದರ ಶಿಫಾರಸುಗಳನ್ನು ಜಾರಿಗೊಳಿದರೇ ರೇಷ್ಮೆ ಬೆಳೆಗಾರರು ಮತ್ತು ನೂಲು ಬಿಚ್ಚಾಣಿಕೆದಾರರಿಗೆ ಅನುಕೂಲವಾಗುತ್ತದೆ. ಶಿಡ್ಲಘಟ್ಟ ಮಾತ್ರವಲ್ಲದೇ ರಾಜ್ಯದಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆದಾರರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ಸರ್ಕಾರ ಮತ್ತು ಇಲಾಖೆಯ ಅಧಿಕಾರಿಗಳು ರೀಲರ್ಗಳ ನೆರವಿಗೆ ಧಾವಿಸಬೇಕು.
-ಅನ್ವರ್‌, ರೀಲರ್ ಮುಖಂಡ

Advertisement

Udayavani is now on Telegram. Click here to join our channel and stay updated with the latest news.

Next