Advertisement

ಚುನಾವಣ ಅಕ್ರಮ ಆರೋಪ: ಪ್ರಿಯಾಂಕ್‌ ಖರ್ಗೆಗೆ ಹೈಕೋರ್ಟ್‌ ಸಮನ್ಸ್‌

09:16 PM Aug 02, 2023 | Team Udayavani |

ಬೆಂಗಳೂರು: ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಚುನಾವಣ ಆಯೋಗಕ್ಕೆ ಸಲ್ಲಿಸಿದ್ದಲ್ಲದೆ, ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವ ಆರೋಪದ ಹಿನ್ನೆಲೆಯಲ್ಲಿ ಚಿತ್ತಾಪೂರ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಅವರಿಗೆ ಹೈಕೋರ್ಟ್‌ ಸಮನ್ಸ್‌ ಜಾರಿಗೊಳಿಸಿದೆ.

Advertisement

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕು ನಿವಾಸಿ ಅಶ್ವತ್ಥರಾಮ ರಾಠೊಡ್‌ ಸಲ್ಲಿಸಿರುವ ಚುನಾವಣ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಎಂ.ಜಿ. ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿ ಸಂಬಂಧ ಸೆ.5ಕ್ಕೆ ವಿಚಾರಣೆಗೆ ಹಾಜರಾಗುವಂತೆ ಖರ್ಗೆಗೆ ಸಮನ್ಸ್‌ ಜಾರಿಗೊಳಿಸಿತು. ಅರ್ಜಿದಾರರ ಪರವಾಗಿ ಪ್ರಮೀಳಾ ನೇಸರ್ಗಿ ವಾದ ಮಂಡಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿತ್ತಾಪೂರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಿಯಾಂಕ್‌ ಖರ್ಗೆ ಚುನಾವಣ ಆಯೋಗಕ್ಕೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಎಸ್ಸಿ ಜಾತಿ ಪ್ರಮಾಣಪತ್ರದ ಬದಲು ಗ್ರಾಮ ಪಂಚಾಯತ್‌ ಚುನಾವಣೆಗೆ ಸಲ್ಲಿಸಲಾಗುವ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ. ಅದೂ 2021ರ ಪ್ರಮಾಣಪತ್ರವಾಗಿದೆ. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿಯೂ ಅಸಮರ್ಪಕ ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಅದೇ ರೀತಿ ಕಾಂಗ್ರೆಸ್‌ನಿಂದ ಗ್ಯಾರಂಟಿ ಕಾರ್ಡ್‌ ಯೋಜನೆಗಳ ಮೂಲಕ ಪ್ರಿಯಾಂಕ್‌ ಖರ್ಗೆ ಮತದಾರರಿಗೆ ಆಮಿಷ ಒಡ್ಡಿದ್ದು, ಇದು ಲಂಚ ಹಾಗೂ ಭ್ರಷ್ಟಾಚಾರಕ್ಕೆ ಸಮವಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್‌ 123 (1) ಪ್ರಕಾರ ಮತ್ತು ಸೆಕ್ಷನ್‌ 123 (2) ಪ್ರಕಾರ ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್‌ 123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ಮಾಡುವುದೂ ಅಪರಾಧವಾಗಿದೆ. ಗ್ಯಾರಂಟಿ ಯೋಜನೆಗಳು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗೆ ಮತಹಾಕಲು ಮತದಾರರನ್ನು ಪ್ರೇರೇಪಿಸಿದೆ. ಮತದಾರರಿಗೆ ಆಮಿಷವೊಡ್ಡುವುದು ಪ್ರಜಾಪ್ರತಿನಿಧಿ ಕಾಯ್ದೆಯ ಅನ್ವಯ ಅಪರಾಧ ಹಾಗೂ ಚುನಾವಣಾ ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next