Advertisement

ಕಾರ್ಯಕಾರಿಣಿಗೆ ಪರ್ಸೆಂಟೇಜ್‌ ಬಿಸಿ; ಈಶ್ವರಪ್ಪ ಪ್ರಕರಣ, ಪಕ್ಷ ಸಂಘಟನೆ ಚರ್ಚೆ ಸಾಧ್ಯತೆ

12:18 AM Apr 16, 2022 | Team Udayavani |

ಬೆಂಗಳೂರು: ನೂತನ ಜಿಲ್ಲೆ ವಿಜಯನಗರದ ಹೊಸಪೇಟೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಬಿಜೆಪಿ ಕಾರ್ಯಕಾರಿಣಿ ನಡೆಯಲಿದೆ. ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದ್ದು, ಸಂಪುಟ ಪುನಾರಚನೆ, ಅಲ್ಲದೇ 40 ಪರ್ಸೆಂಟ್‌ ಆರೋಪಕ್ಕೆ ಕೆ.ಎಸ್‌.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಕಾರ್ಯಕಾರಿಣಿ ನಡೆಯುತ್ತಿರುವುದರಿಂದ ಎಲ್ಲರ ಗಮನ ಸೆಳೆದಿದೆ.

Advertisement

ಎರಡು ದಿನಗಳ ರಾಜ್ಯ ಕಾರ್ಯಕಾರಿಣಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯದ ಕೇಂದ್ರ ಸಚಿವರು, ರಾಜ್ಯ ಸರ್ಕಾರದ ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದು, ಮುಂಬರುವ 2023 ರ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಹೇಗೆ ತಳ ಮಟ್ಟದಿಂದ ಸಂಘಟಿಸಬೇಕು ಎನ್ನುವ ಕುರಿತಂತೆ ಪ್ರಮುಖವಾಗಿ ಚರ್ಚೆ ನಡೆಯಲಿದೆ.

ಈಗಾಗಲೇ ರಾಜ್ಯ ನಾಯಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಯೋಜನೆಗಳು ಹಾಗೂ ಎರಡೂ ಸರ್ಕಾರಗಳು ನೀಡುತ್ತಿರುವ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಮೂರು ತಂಡಗಳಾಗಿ ಪ್ರವಾಸ ಆರಂಭಿಸಿದ್ದು, ರಾಜ್ಯ ಕಾರ್ಯಕಾರಿಣಿ ಮುಗಿದ ನಂತರ ಮೂರು ತಂಡಗಳ ರಾಜ್ಯ ಪ್ರವಾಸ ಮತ್ತೆ ಮುಂದುವರೆಯಲಿದೆ.

ಇದರ ಹೊರತಾಗಿ ಚುನಾವಣೆಯನ್ನು ಎದುರಿಸಲು ಬೂತ್‌ ಮಟ್ಟದ ಕಾರ್ಯಕರ್ತರಿಂದ ಹಿಡಿದು ರಾಜ್ಯ ನಾಯಕರವರೆಗೂ ಏನೇಲ್ಲ ಕೆಲಸಗಳನ್ನು ಮಾಡಬೇಕು ಎನ್ನುವ ಕುರಿತಂತೆ ಪ್ರಮುಖವಾಗಿ ಚರ್ಚೆ ನಡೆಯುವ ಸಾಧ್ಯತೆ ಇದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ ಜೆ.ಪಿ. ನಡ್ಡಾ ಅವರು ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.

40 ಪರ್ಸೆಂಟ್‌ ಆರೋಪ: ಗುತ್ತಿಗೆದಾರ ಸಂತೋಷ್‌ ಸಾಯುವ ಮುನ್ನ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ 40 ಪಸೆಂìಟ್‌ ಲಂಚದ ಆರೋಪ ಮಾಡಿದ್ದು ಅದೇ ಕಾರಣಕ್ಕೆ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತಾಗಿದೆ. ಪ್ರತಿಪಕ್ಷ ಕಾಂಗ್ರೆಸ್‌ ಇದೇ ವಿಷಯವನ್ನು ಮುಂದಿಟ್ಟುಕೊಂಡು ಇಡೀ ಬಿಜೆಪಿ ಸರ್ಕಾರದ ವಿರುದ್ಧವೇ ಹೋರಾಟ ರೂಪಿಸಲು ಮುಂದಾಗಿದ್ದು, ಈ ಬೆಳವಣಿಗೆ ರಾಜ್ಯ ಬಿಜೆಪಿಗೆ ದೊಡ್ಡ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾರ್ಯಕಾರಿಣಿಯಲ್ಲಿ ಗಂಭೀರ ಚರ್ಚೆ ನಡೆಯುವ ಸಾಧ್ಯತೆ ಇದೆ.

Advertisement

ಈಶ್ವರಪ್ಪ ಅವರು ಕೇವಲ ರಾಜೀನಾಮೆ ಸಲ್ಲಿಸಿದರೆ ಮುಗಿಯುವುದಿಲ್ಲ. ಅವರನ್ನು ಬಂಧಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿರುವುದರಿಂದ ಕಾಂಗ್ರೆಸ್‌ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ಕುರಿತಂತೆಯೂ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಅಲ್ಲದೇ ಕಾಂಗ್ರೆಸ್‌ ವಿರುದ್ಧ ಹೋರಾಟ ರೂಪಿಸುವ ಕುರಿತಂತೆಯೂ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.

ಸಂಪುಟ ಪುನಾರಚನೆ ಗ್ರೀನ್‌ಸಿಗ್ನಲ್‌ ನಿರೀಕ್ಷೆ ?:
ಪಕ್ಷದಲ್ಲಿ ಬಹುದಿನಗಳಿಂದ ಚರ್ಚೆಯಾಗುತ್ತಿರುವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಏನಾದರೂ ಸೂಚನೆ ನೀಡಬಹುದು ಎಂಬ ನಿರೀಕ್ಷೆ ಸಚಿವಾಕಾಂಕ್ಷಿಗಳಲ್ಲಿದೆ. ಕಳೆದ ವಾರ ಸಿಎಂ ದೆಹಲಿಗೆ ಹೋದ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿಯ ವೇಳೆ ಈ ಕುರಿತು ಚರ್ಚಿಸಿ ತೀರ್ಮಾನ ಮಾಡುವುದಾಗಿ ಸ್ವತಃ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಹೇಳಿದ್ದರು ಎಂದು ಹೇಳಲಾಗಿತ್ತು. ಹೀಗಾಗಿ ಈಗ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯ ಕುರಿತು ಏನಾದರೂ ಒಂದು ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನದ ಜೊತೆಗೆ ಈಗ ಕೆ.ಎಸ್‌. ಈಶ್ವರಪ್ಪ ಅವರ ರಾಜೀನಾಮೆಯಿಂದ ಮತ್ತೂಂದು ಸ್ಥಾನ ತೆರವಾಗಿದ್ದು, ಖಾಲಿ ಇರುವ ಸ್ಥಾನಗಳನ್ನಾದರೂ ಭರ್ತಿ ಮಾಡಬೇಕೆಂಬ ಒತ್ತಡ ಸಚಿವಾಕಾಂಕ್ಷಿಗಳಿಂದ ಕೇಳಿ ಬರುತ್ತಿದೆ. ಜೆ.ಪಿ. ನಡ್ಡಾ ಅವರು ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಅನುಮತಿ ನೀಡಿದರೆ, ಈ ತಿಂಗಳಾಂತ್ಯದಲ್ಲಿ ಸಂಪುಟಕ್ಕೆ ಹೊಸಬರ ಸೇರ್ಪಡೆಯಾಗಲಿದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next