Advertisement

ಖಾಸಗಿ ಆಸ್ಪತ್ರೆಗಳಿಗೆ ಅಗತ್ಯ ನೆರವು: ಜಿಲ್ಲಾಧಿಕಾರಿ

10:57 AM Jul 20, 2020 | Suhan S |

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಿಮ್ಸ್ ಸೇರಿದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರದ ನಿರ್ದೇಶನದಂತೆ ಶೇ.50 ಹಾಸಿಗೆಗಳನ್ನು ಕೋವಿಡ್‌ ರೋಗಿಗಳಿಗೆ ಮೀಸಲಿಟ್ಟು ಚಿಕಿತ್ಸೆ ನೀಡಲು ಮುಂದೆ ಬರುವ ಖಾಸಗಿ ಆಸ್ಪತ್ರೆಗಳಿಗೆ ಜಿಲ್ಲಾಡಳಿತದಿಂದ ಅಗತ್ಯ ಸಹಾಯ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

Advertisement

ಬೈಲಪ್ಪನವರನಗರದ ಐಎಂಎ ಸಭಾಂಗಣದಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ರವಿವಾರ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಲಕ್ಷಣಗಳು ಇಲ್ಲದ ಎಲ್ಲಾ ರೋಗಿಗಳಿಗೆ ಜಿಲ್ಲಾಡಳಿತದಿಂದಲೇ ಕೋವಿಡ್‌-19 ಕೇರ್‌ ಕೇಂದ್ರಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತದೆ. ಗಂಭೀರ ಲಕ್ಷಣವುಳ್ಳವರನ್ನು ಕೋವಿಡ್‌ ಆಸ್ಪತ್ರೆಗಳಲ್ಲಿ ದಾಖಲಿಸಲಾಗುವುದು. ಕಿಮ್ಸ್, ಡಿಮಾನ್ಸ್‌ ಹಾಗೂ ಎನ್‌ಎಂಆರ್‌ ಲ್ಯಾಬ್‌ಗಳಲ್ಲಿ ಆರ್‌ಟಿಪಿಸಿಆರ್‌ ತಂತ್ರಜ್ಞಾನ ಬಳಸಿ ಕೋವಿಡ್‌ ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ ಎಂದು ಹೇಳಿದರು.

ಈಗಾಗಲೇ ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಕೊವೀಡ್‌-19 ರೋಗಿಗಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಆ್ಯಂಟಿಜನ್‌ ಟೆಸ್ಟ್‌ ಕಿಟ್‌ಗಳನ್ನು ನೀಡಲಾಗಿದೆ. ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಮುಂದೆ ಬರುವ ಖಾಸಗಿ ಆಸ್ಪತ್ರೆಗಳಿಗೆ ಗುಣಮುಖರಾಗಿರುವ ಕೋವಿಡ್‌ ರೋಗಿಗಳ ಮಾಹಿತಿ ನೀಡಲಾಗುವುದು. ಯಾವುದೇ ಖಾಸಗಿ ಆಸ್ಪತ್ರೆಗಳು ಗರ್ಭಿಣಿಯರ ಕೋವಿಡ್‌ ತಪಾಸಣೆ ನಡೆಸಲು ಹಣ ತೆಗೆದುಕೊಳ್ಳಬಾರದು. ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಿಗೆ ಜಿಲ್ಲಾಡಳಿತದಿಂದ ಊಟ ಸರಬರಾಜು ಮಾಡಲಾಗುವುದು. ಸ್ವತ್ಛತಾ ಸಿಬ್ಬಂದಿ ಸೇರಿದಂತೆ ನಿರ್ವಹಣೆಗಾಗಿ ಇತರೆ ಅಗತ್ಯ ಸಿಬ್ಬಂದಿ ಜಿಲ್ಲಾಡಳಿತದ ವತಿಯಿಂದ ನೇಮಿಸಲಾಗುವುದು ಎಂದು ಹೇಳಿದರು.

ಖಾಸಗಿ ಕ್ಯಾನ್ಸರ್‌ ಹಾಗೂ ಹೆರಿಗೆ ಆಸ್ಪತ್ರೆಗಳಿಗೆ ಕೋವಿಡ್‌-19 ಚಿಕಿತ್ಸೆ ನೀಡುವುದರಿಂದ ವಿನಾಯಿತಿ ನೀಡಬೇಕು ಎಂದು ಖಾಸಗಿ ವೈದ್ಯರು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next