Advertisement

Karsevak ಶ್ರೀಕಾಂತ ಪೂಜಾರಿಯನ್ನು ಶ್ರೀರಾಮಚಂದ್ರನೂ ಕ್ಷಮಿಸಲಾರ: ಸಿದ್ದರಾಮಯ್ಯ ಆಕ್ರೋಶ

07:26 PM Jan 03, 2024 | Team Udayavani |

ಬೆಂಗಳೂರು/ ಹುಬ್ಬಳ್ಳಿ:ರಾಮ ಮಂದಿರ ಲೋಕಾರ್ಪಣೆ ಹೊಸ್ತಿಲಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರ ತೀವ್ರ ಸಡ್ಡು ಮಾಡುತ್ತಿದ್ದು, ಬಿಜೆಪಿ ಬೀದಿಗಿಳಿದು ಹೋರಾಟ ಆರಂಭಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬಂಧನ ಮಾಡಿದ ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

Advertisement

ಬುಧವಾರ ಎಕ್ಸ್ ಪೋಸ್ಟ್ ಮೂಲಕ ಆಕ್ರೋಶ ಹೊರ ಹಾಕಿರುವ ಸಿಎಂ ಸಿದ್ದರಾಮಯ್ಯ ಅವರು ”ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ. ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ” ಎಂದಿದ್ದಾರೆ.

ಪೊಲೀಸರು ಶ್ರೀಕಾಂತ್ ಪೂಜಾರಿ ವಿರುದ್ಧ ದಾಖಲಿಸಿಕೊಂಡಿರುವ ವಿವಿಧ ಪ್ರಕರಣಗಳ ಸವಿವರಗಳ ಪ್ರತಿಗಳ ಸಮೇತ ಇನ್ನೊಂದು ಪೋಸ್ಟ್ ಮಾಡಿದ್ದು, ”ಕಳೆದ 2023ನೇ ಸಾಲಿನಲ್ಲಿ ಹುಬ್ಬಳ್ಳಿ – ಧಾರವಾಡ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್.ಪಿ.ಸಿ ( ಕಾನೂನು ವಿಚಾರಣಾ ಪ್ರಮಾಣಪತ್ರ ) ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೆಯ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ? ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ. ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ? ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಅಷ್ಟೆ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ” ಎಂದು ಬಂಧನವನ್ನು ಸಮರ್ಥಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next