Advertisement

ಬಂಡಾಯದಿಂದ ಹಿಂದೆ ಸರಿಯದಿದ್ರೆ ಉಚ್ಚಾಟನೆ

05:34 PM Aug 26, 2018 | |

ಚಿತ್ರದುರ್ಗ: ಕಾಂಗ್ರೆಸ್‌ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿರುವವರು ಎರಡು ದಿನಗಳ ಒಳಗೆ ಕಣದಿಂದ ಹಿಂದಕ್ಕೆ ಸರಿದು ಪಕ್ಷದ ಅಧಿಕೃತ ಅಭ್ಯರ್ಥಿಗೆ ಬೆಂಬಲ ಸೂಚಿಸಬೇಕು. ಇಲ್ಲವಾದಲ್ಲಿ ಪಕ್ಷದಿಂದ ಉಚ್ಚಾಟಿಸಲಾಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಫಾತ್ಯರಾಜನ್‌ ಎಚ್ಚರಿಸಿದರು.

Advertisement

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಹನುಮಲಿ ಷಣ್ಮುಖಪ್ಪ ನಿವಾಸದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆ ಚುನಾವಣೆಯಲ್ಲಿ 35 ವಾರ್ಡ್‌ಗಳಿಂದ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಪಕ್ಷದ ಬಿ ಫಾರಂ ಪಡೆದು ಸ್ಪರ್ಧಿಸಿರುವವರ ವಿರುದ್ಧ ಪಕ್ಷದ ಕೆಲವು ಪದಾಧಿಕಾರಿಗಳು, ಕಾರ್ಯಕರ್ತರು ಸ್ಪರ್ಧಿಸಿದ್ದಾರೆ. ಜಯಂತಿ ಮಂಜುನಾಥ ಗೊಪ್ಪೆ, ನಳಿನ ಮರುಳಾರಾಧ್ಯ ಅವರಿಗೆ ಪಕ್ಷದಿಂದ ಬಿ ಫಾರಂ ನೀಡುವ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರೊಂದಿಗೆ ಚರ್ಚಿಸಲಾಗಿತ್ತು. ಅದರ ಪ್ರಕಾರ ಜಯಂತಿ ಅವರಿಗೆ 14ನೇ ವಾರ್ಡ್‌ನಿಂದ ಸ್ಪರ್ಧಿಸಲು ಕಾಂಗ್ರೆಸ್‌ ಪಕ್ಷದಿಂದ ಬಿ ಫಾರಂ ನೀಡಲಾಗಿತ್ತು.

ಆದರೆ ನಾಮಪತ್ರ ಹಿಂಪಡೆಯುವ ಕೊನೆಯ ದಿನ ಎಚ್‌.ಎನ್‌. ಮಂಜುನಾಥ ಗೊಪ್ಪೆ ತಮ್ಮ ಪತ್ನಿಯ ನಾಮಪತ್ರವನ್ನು ಹಿಂದಕ್ಕೆ ತೆಗೆಸಿ ಅದೇ ವಾರ್ಡ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಮಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದರಿಂದ ಅವರಿಬ್ಬರಿಗೆ ಸಮಜಾಯಿಷಿ ಕೇಳಿ ನೋಟಿಸ್‌ ನೀಡಲಾಗಿದೆ. ಜಯಂತಿಯವರು ನಾಮಪತ್ರ ಹಿಂದಕ್ಕೆ ಪಡೆದಿರುವುದರಿಂದ 14ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇಲ್ಲದಂತಾಗುವುದು ಬೇಡ ಎಂದು ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಎಸ್‌.ಆರ್‌. ಅರುಣ್‌ಕುಮಾರ್‌ ಅವರನ್ನು ಗೆಲ್ಲಿಸಿಕೊಳ್ಳಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಹೇಳಿದರು.

ಹನುಮಲಿ ಷಣ್ಮುಖಪ್ಪ ಮಾತನಾಡಿ, 14ನೇ ವಾರ್ಡ್‌ನಿಂದ ಕಾಂಗ್ರೆಸ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಯಂತಿಯವರ ನಾಮಪತ್ರವನ್ನು ಅವರ ಪತಿ ಎಚ್‌.ಎನ್‌. ಮಂಜುನಾಥ ಗೊಪ್ಪೆ ಹಿಂದಕ್ಕೆ ಪಡೆಯುವಂತೆ ಮಾಡಿದ್ದಾರೆ. ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿರುವುದೇ ಅಲ್ಲದೆ 14ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯೇ ಇಲ್ಲದಂತೆ ಮಾಡಿರುವುದರಿಂದ ಪಕ್ಷದ ಮರ್ಯಾದೆ ಉಳಿಸಿಕೊಳ್ಳುವುದಕ್ಕಾಗಿ ಎಸ್‌.ಆರ್‌. ಅರುಣ್‌ ಕುಮಾರ್‌ ಅವರಿಗೆ ಕಾಂಗ್ರೆಸ್‌ನಿಂದ ಬೆಂಬಲ ನೀಡುತ್ತಿದ್ದೇವೆ ಎಂದರು.

ಡಿ.ಎನ್‌. ಮೈಲಾರಪ್ಪ, ಸೈಯ್ಯದ್‌ ಅಲ್ಲಾಭಕ್‌, ಮಹಡಿ ಶಿವಮೂರ್ತಿ, ಎಪಿಎಂಸಿ ಮಾಜಿ ಅಧ್ಯಕ್ಷ ನಾಗರಾಜ ರೆಡ್ಡಿ, ಎ. ಕಬುಲಾ ಹುಸೇನ್‌, ಅಭ್ಯರ್ಥಿ ಶ್ರೀರಾಮ್‌ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next