Advertisement

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

07:54 AM Oct 21, 2024 | Team Udayavani |

ಬಂಟ್ವಾಳ: ಬೆಂಗಳೂರಿಗೆ ಯಕ್ಷಗಾನ ಪ್ರದರ್ಶನಕ್ಕೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ (ಸೋಮವಾರ, ಅ.21ರಂದು) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

Advertisement

ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

1957ರಲ್ಲಿ ಜನಿಸಿದ್ದ ಜಯರಾಮ ಆಚಾರ್ಯರ ತಂದೆ ಬಂಟ್ವಾಳ ಗಣಪತಿ ಆಚಾರ್ಯ ಕೂಡ ಕಲಾವಿದರಾಗಿದ್ದು, ವಿವಿಧ ಮೇಳಗಳಲ್ಲಿ ಹಾಸ್ಯ ಕಲಾವಿದರಾಗಿಯೂ ಸೇವೆ ಸಲ್ಲಿಸಿದ್ದರು. ತಾಳಮದ್ದಳೆಗಳನ್ನು ನೋಡುತ್ತಾ ಬೆಳೆದಿದ್ದ ಜಯರಾಮ ಆಚಾರ್ಯರು ತಂದೆಯವರ ಜತೆ ಯಕ್ಷಗಾನ ಪ್ರದರ್ಶನಗಳಿಗೆ ಹೋಗಿ‌ ಆಸಕ್ತಿ ಬೆಳೆಸಿಕೊಂಡಿದ್ದರು. ನಾಟ್ಯಾಭ್ಯಾಸ ಮಾಡುವ ಮೊದಲೇ ಒಂದಷ್ಟು ಮೇಳಗಳಲ್ಲಿ ಸೇವೆ ಸಲ್ಲಿಸಿರುವುದು ಅವರ ಹೆಗ್ಗಳಿಕೆಯಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಲಲಿತಾ ಕಲಾಕೇಂದ್ರದಲ್ಲಿ ಪಡ್ರೆ ಚಂದು ಅವರಿಂದ ಯಕ್ಷಗಾನ ನಾಟ್ಯವನ್ನು ಕಲಿತಿದ್ದು, ಆ ಸಂದರ್ಭದಲ್ಲಿ ಈಗಿನ ಹಲವು ಪ್ರಸಿದ್ಧ ಕಲಾವಿದರು ಅವರ ಸಹಪಾಠಿಗಳಾಗಿದ್ದರು.

ಬಳಿಕ ಕಟೀಲು ಮೇಳ, ಪುತ್ತೂರು ಮೇಳ, ಸುಂಕದಕಟ್ಟೆ ಮೇಳ, ಕದ್ರಿ ಮೇಳ, ಕುಂಬ್ಳೆ ಮೇಳ, ಸುರತ್ಕಲ್ ಮೇಳ, ಎಡನೀರು ಮೇಳ, ಹೊಸನಗರ ಮೇಳ ಸೇವೆ ಸಲ್ಲಿಸಿ, ಕಳೆದ ವರ್ಷ ಹನುಮಗಿರಿ ಮೇಳದಲ್ಲಿದ್ದು, ಈ ವರ್ಷದಿಂದ ಹಿರಿಯಡ್ಕ ಮೇಳದಲ್ಲಿ ಹಾಸ್ಯ ಕಲಾವಿದರಾಗಿ ಸೇವೆ ಸಲ್ಲಿಸಬೇಕಿತ್ತು.

Advertisement

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ. ಅವರು ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಕಳೆದ 2 ದಿನಗಳ ಹಿಂದಷ್ಟೇ ಅವರಿಗೆ  ಕಡಬದ್ವಯರ ಸಂಸ್ಕರಣಾ ಪ್ರಶಸ್ತಿ ಘೋಷಣೆಯಾಗಿದ್ದು, ಅ. 27ರಂದು ಅವರು ಪ್ರಶಸ್ತಿ ಸ್ವೀಕರಿಸಬೇಕಿತ್ತು. ಯಕ್ಷಗಾನದ ಜತೆಗೆ ರಂಗಭೂಮಿ, ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next