Advertisement

ಟನ್‌ ಕಬ್ಬಿಗೆ 150 ರೂ. ಹೆಚ್ಚುವರಿ ನೀಡಲು ಆಗ್ರಹ

02:53 PM Mar 01, 2023 | Team Udayavani |

ಮೈಸೂರು: ಕಬ್ಬು ಬೆಳೆಗಾರರಿಗೆ ಬನ್ನಾರಿ ಅಮ್ಮನ್‌ ಸಕ್ಕಾರೆ ಕಾರ್ಖಾನೆಯಿಂದ ಟನ್‌ಗೆ ಹೆಚ್ಚುವರಿ 150 ರೂ. ಹಣ ಕೊಡಿಸಬೇಕು, ರೈತರ ವಿವಿಧ ಸಮಸ್ಯೆ ಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಯಿತು.

Advertisement

ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ರೈತ ಮುಖಂಡರು ನಗರದ ಗನ್‌ಹೌಸ್‌ ಬಳಿ ಇರುವ ಕುವೆಂಪು ಉದ್ಯಾನದ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕೈಯಲ್ಲಿ ಕಬ್ಬಿನ ಜಲ್ಲೆ ಹಿಡಿದು ಮೆರವಣಿಗೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ನಾವೇನು ಕಳ್ಳರಲ್ಲ ಜಿಲ್ಲಾಧಿಕಾರಿಗೆ ನಮ್ಮ ಮನವಿ ಸಲ್ಲಿಸಲು ಅವಕಾಶ ಕೊಡಿ ಎಂದು ಪೊಲೀಸರನ್ನು ಒತ್ತಾಯಿಸಿದರು.

ಆದರೆ, ಇದಕ್ಕೊಪ್ಪದ ಪೊಲೀಸರು ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿರುತ್ತಾರೆ. ಇಷ್ಟು ಜನ ಒಟ್ಟಿಗೆ ಹೋದರೆ ತೊಂದರೆಯಾಗುತ್ತದೆ. ಅಲ್ಲದೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಹೀಗಾಗಿ ಒಳಗೆ ಹೋಗಲು ಅವಕಾಶ ನೀಡುವುದಿಲ್ಲ. ಇಲ್ಲಿಗೇ ಸಂಬಂಧಪಟ್ಟ ಅಧಿಕಾರಗಳನ್ನು ಕರೆಸುತ್ತೇವೆ ಎಂದು ಮನವೊಲಿಸಲು ಯತ್ನಿಸಿದರು. ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಯಿತು. ಬಳಿಕ ರಸ್ತೆಯಲ್ಲೇ ಕುಳಿತ ಪ್ರತಿಭಟನಾಕಾರರು ಕಚೇರಿ ಒಳಗೆ ಬಿಡುವಂತೆ ಪಟ್ಟುಹಿಡಿದರು.

ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ಗೇಟಿನ ಮುಂಭಾಗಕ್ಕೆ ತೆರಳಲು ಪೊಲೀಸರು ಅವಕಾಶ ಕಲ್ಪಿಸಿದರು. ಗೇಟಿನ ಮುಂಭಾಗ ಜಮಾಯಿಸಿದ ಪ್ರತಿಭ ಟನಾಕಾರರು ಕೆಲಕಾಲ ಘೋಷಣೆಗಳನ್ನು ಕೂಗಿದರು.

ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಮಾತನಾಡಿ, ಕಬ್ಬು ಬೆಳೆಗಾರರ ಸಂಘದ ಸತತ 39 ದಿನಗಳ ಹೋರಾಟದ ಪರಿಣಾಮವಾಗಿ ಕಬ್ಬಿಗೆ ಹೆಚ್ಚುವರಿ 150 ರೂ. ನೀಡಲು ಆದೇಶ ಮಾಡಿದ್ದರು. ಆದರೆ, ಬಣ್ಣಾರಿ ಸಕ್ಕರೆ ಕಾರ್ಖಾನೆ ಹೆಚ್ಚುವರಿ ಹಣ ಪಾವತಿಸದೆ ಇರುವ ಬಗ್ಗೆ ದೂರು ಸಲ್ಲಿಸಿದರೂ ಯಾವುದೇ ಕ್ರಮ ಜಾರಿಯಾಗಿಲ್ಲ. ಅರಿಶಿಣ ಬೆಳೆಗೆ ಬೆಲೆ ಕುಸಿತವಾಗಿದ್ದು ಉತ್ಪಾದನಾ ವೆಚ್ಚವೂ ಸಿಗುತ್ತಿಲ್ಲ. ಹೀಗಾಗಿ ಕನಿಷ್ಠ ಬೆಂಬಲ ಬೆಲೆ ಕ್ವಿಂಟಲ್‌ಗೆ 17,500 ರೂ. ಬೆಂಬಲ ಬೆಲೆ ನಿಗದಿ ಮಾಡಬೇಕು. ಕಾವೇರಿ, ಕಬಿನಿ ಆಚ್ಚುಕಟ್ಟು ನಾಲೆಗಳ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಕಬ್ಬು, ಬಾಳೆ ಇನ್ನಿತರ ಬೆಳೆಗಳ ರಕ್ಷಣೆಗಾಗಿ ಬೇಸಿಗೆಯಲ್ಲಿ ದನ ಕರುಗಳ ಕುಡಿಯುವ ನೀರಿಗಾಗಿ ಕೆರೆ ಕಟ್ಟೆಗಳನ್ನು ತುಂಬಿಸಲು ಕೂಡಲೇ ನಾಲೆ ಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.

Advertisement

ಈ ವೇಳೆ ಡೀಸಿ ಕಚೇರಿಯಲ್ಲಿ ಇಲ್ಲದ ಕಾರಣ ಎಡಿಸಿ ಕವಿತಾ ರಾಜಾರಾಂ ಪ್ರತಿಭಟ ನಾಕಾರರ ಮನವಿ ಸ್ವೀಕರಿಸಿದರು. ಜಿಲ್ಲಾಧಿಕಾರಿಗಳು ಮೂರು ನಾಲ್ಕು ದಿನಗಳಲ್ಲಿ ಸಭೆ ನಡೆಸಿ ನಿಮ್ಮ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ಭರವಸೆ ನೀಡಿದ್ದರಿಂದ ಪ್ರತಿಭಟನೆ ಕೈಬಿಟ್ಟರು.

ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜು, ಬರಡನಪುರ ನಾಗರಾಜು, ಜಿಲ್ಲಾಧ್ಯಕ್ಷ ಸೋಮಶೇಖರ್‌, ತಾಲೂಕು ಅಧ್ಯಕ್ಷ ಕುರುಬೂರು ಸಿದ್ದೇಶ್‌, ಹಾಡ್ಯ ರವಿ, ಗಿರೀಶ್‌, ಕಿರಗಸೂರು ಶಂಕರ್‌, ರಾಜು, ಗೋವಿಂದರಾಜು, ಗೌರಿಶಂಕರ್‌, ರಾಣಿ, ಪುಟ್ಟಸುಬ್ಬಮ್ಮ, ಜಯಮ್ಮ ಇತರರು ಇದ್ದರು.

ಸಮರ್ಪಕ ವಿದ್ಯುತ್‌ ನೀಡಬೇಕು : ಕೃಷಿ ಪಂಪ್‌ ಸೆಟ್‌ಗಳಿಗೆ ಬೆಳಗ್ಗೆ 6ರಿಂದ ಸಂಜೆ 6ರವರಗೆ ಹಗಲು ವೇಳೆ ಸಮರ್ಪಕ ವಿದ್ಯುತ್‌ ನೀಡಬೇಕು. ಕಾಡುಪ್ರಾಣಿಗಳ ದಾಳಿಯಿಂದ ರೈತರು ಭಯ ಭೀತರಾಗಿದ್ದು, ಹಗಲು ವೇಳೆ ವಿದ್ಯುತ್‌ ನೀಡಬೇಕು. ಭತ್ತ, ರಾಗಿ ಇತರೆ ಉತ್ಪನ್ನಗಳ ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಿತಿ ವಿಧಿಸಿರುವುದನ್ನು ರದ್ದುಗೊಳಿಸಬೇಕು, ಬ್ಯಾಂಕ್‌ಗಳಲ್ಲಿ ಕೃಷಿ ಸಾಲಕ್ಕೆ ಸಿಬಿಲ್‌ ಸ್ಕೋರ್‌ ಮಾನದಂಡ ನೀತಿ ಕೈ ಬಿಡಬೇಕು. ಕೃಷಿ ಸಾಲ ನೀತಿ ಬದಲಾಗಬೇಕು, ರೈತನ ಭೂಮಿ ಮೌಲ್ಯಕ್ಕೆ ಅನುಗುಣವಾಗಿ ಶೇ.75 ರಷ್ಟು ಸಾಲ ನೀಡಬೇಕು, ಕೃಷಿ ಉತ್ಪಾದನೆಗೆ ಬಡ್ಡಿ ರಹಿತ ಸಾಲ ನೀಡಬೇಕು ಎಂದು ಕುರುಬೂರು ಶಾಂತಕುಮಾರ್‌ ಆಗ್ರಹಿಸಿದರು.

ರಸಗೊಬ್ಬರ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಕೆಲವು ಕಡೆ ಕಳಪೆ ರಸಗೊಬ್ಬರ ಕೀಟನಾಶಕ ಮಾರಾಟ ಮಾಡುವುದನ್ನು ತಡೆಗಟ್ಟಬೇಕು. ರಾಜ್ಯದಲ್ಲಿ ಜಾರಿಗೆ ಬಂದಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ರದ್ದುಗೊಳಿಸಬೇಕು. ಸಾವಿರಾರು ರೈತರು ಈ ಕಾಯ್ದೆ ಜಾರಿಯಾದ ಮೇಲೆ ಕೃಷಿ ಉತ್ಪನ್ನಗಳನ್ನು ರಹದಾರಿ ಇಲ್ಲದ ದಲ್ಲಾಳಿಗಳಿಗೆ ಮಾರಾಟ ಮಾಡಿ, ಕೋಟ್ಯಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ರೈತರಿಗೆ ನ್ಯಾಯಬದ್ಧವಾಗಿ ಸಾಗುವಳಿ ಪತ್ರ ನೀಡಬೇಕು ಎಂದು ಒತ್ತಾಯಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next