Advertisement

ದಿಲ್ಲಿ ಚಲೋ ಪ್ರತಿಭಟನೆ ಮತ್ತಷ್ಟು ತೀವ್ರ; ಸಿಂಘು ಗಡಿಗೆ ಸಿಎಂ ಕೇಜ್ರಿವಾಲ್ ಭೇಟಿ

12:16 PM Dec 07, 2020 | Nagendra Trasi |

ನವದೆಹಲಿ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರ ಜತೆ ಕೇಂದ್ರ ಸರ್ಕಾರ ನಡೆಸಿದ ನಾಲ್ಕು ಸುತ್ತುಗಳ ಮಾತುಕತೆ ವಿಫಲಗೊಂಡಿದ್ದು, ಇದೀಗ ವಿವಿಧ ಗಡಿಭಾಗದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಏತನ್ಮಧ್ಯೆ ಸೋಮವಾರ(ಡಿಸೆಂಬರ್ 07, 2020) ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಿಂಘು ಗಡಿಭಾಗಕ್ಕೆ ಭೇಟಿ ನೀಡುವ ಮೂಲಕ ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.

Advertisement

ಕೇಂದ್ರ ಜಾರಿಗೆ ತಂದಿರುವ ನೂತನ ಕಾಯ್ದೆಯಲ್ಲಿ ಬದಲಾವಣೆ ತರಲು ಕೇಂದ್ರ ಸರ್ಕಾರ ಸಿದ್ದವಿದೆ, ಆದರೆ ಕಾಯ್ದೆ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರೈತರ ನಡುವಿನ ಬಿಕ್ಕಟ್ಟು ಮುಂದುವರಿದಂತಾಗಿದೆ.

ಅಲ್ಲದೇ ಕೇಂದ್ರದ ಮೂರು ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಡಿಸೆಂಬರ್ 8ರಂದು (2020) ಭಾರತ್ ಬಂದ್ ಗೆ ಕರೆ ನೀಡಿದ್ದು, ವಿಪಕ್ಷಗಳು ಸೇರಿದಂತೆ ಬಹುತೇಕ ರೈತ ಸಂಘಟನೆ, ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಕೇಂದ್ರ ಸರ್ಕಾರ ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ರೈತರು ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಪ್ರತಿಭಟನಾ ಸ್ಥಳದಲ್ಲಿರುವ ಹಿರಿಯ ರೈತರು, ಮಹಿಳೆಯರು ಮತ್ತು ಮಕ್ಕಳನ್ನು ವಾಪಸ್ ಕಳುಹಿಸುವಂತೆ ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದ್ದು, ಡಿಸೆಂಬರ್ 9ರಂದು ಮತ್ತೊಂದು ಸುತ್ತಿನ ಮಾತುಕತೆಗೆ ಆಹ್ವಾನಿಸಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next