Advertisement

ಸಮೀಕ್ಷೆಯಲ್ಲಿ ರೈತರ ಹಿತಾಶಕ್ತಿ ಕಾಪಾಡಿ

04:03 PM Sep 18, 2022 | Team Udayavani |

ಬೆಳಗಾವಿ: ಬೆಳೆಹಾನಿಯ ಬಗ್ಗೆ ಸಮೀಕ್ಷೆ ನಡೆಸುವಾಗ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕು. ಕೆಲವು ಕಡೆಗಳಲ್ಲಿ ಜಂಟಿ ಸಮೀಕ್ಷೆ ಬಳಿಕವೂ ಬೆಳೆಹಾನಿ ಬಗ್ಗೆ ವರದಿ ಆಗಿರುವುದರಿಂದ ಸಮೀಕ್ಷೆಯ ವರದಿಯಲ್ಲಿ ಇವುಗಳನ್ನು ಸಹ ಸೇರ್ಪಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು.

Advertisement

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಅತಿವೃಷ್ಟಿಯಿಂದ ಜಮೀನುಗಳಲ್ಲಿ ಹೆಚ್ಚು ದಿನಗಳ ಕಾಲ ನೀರು ನಿಂತ ಪರಿಣಾಮ ತೋಟಗಾರಿಕೆ ಹಾಗೂ ತರಕಾರಿ ಬೆಳೆಗಳು ಸಂಪೂರ್ಣ ನಾಶಗೊಂಡಿವೆ. ಆದ್ದರಿಂದ ಸಮೀಕ್ಷೆ ನಡೆಸುವಾಗ ಈ ಅಂಶಗಳನ್ನು ಪರಿಗಣಿಸಬೇಕು ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಇತ್ತೀಚಿನ ಅತಿವೃಷ್ಟಿಯಿಂದ ಒಟ್ಟಾರೆ 400 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಸದ್ಯಕ್ಕೆ ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ 105 ಕೋಟಿ ರೂ. ಹಾನಿಯ ಕುರಿತು ವರದಿ ಸಲ್ಲಿಕೆಯಾಗಿದೆ ಎಂದು ಸಚಿವರು ವಿವರಿಸಿದರು.

ಬೆಳೆಹಾನಿ ಹಾಗೂ ಮನೆಹಾನಿಯ ಸಮೀಕ್ಷೆ ಮಾಡುವಾಗ ಯಾವುದೇ ಕಾರಣಕ್ಕೂ ಖೊಟ್ಟಿ ಪ್ರಕರಣಗಳು ಸೇರ್ಪಡೆ ಆಗದಂತೆ ಎಚ್ಚರಿಕೆ ವಹಿಸಬೇಕು. ಸಮೀಕ್ಷೆ ನಡೆಸುವಾಗ ಸಾಧ್ಯವಾದಷ್ಟು ರೈತರು ಮತ್ತು ಕುಟುಂಬದ ಜನರ ಸಮ್ಮುಖದಲ್ಲಿ ಮಾಡಬೇಕು ಎಂದು ಸಲಹೆ ನೀಡಿದರು.

ಸಮೀಕ್ಷೆ- ಪರಿಹಾರಕ್ಕೆ ಮೆಚ್ಚುಗೆ: ಈ ಬಾರಿ ಮನೆಹಾನಿಯ ಸಮೀಕ್ಷೆಯನ್ನು ಅತ್ಯಂತ ತ್ವರಿತವಾಗಿ ಹಾಗೂ ಪಾರದರ್ಶಕವಾಗಿ ಕೈಗೊಂಡು ಪರಿಹಾರ ಹಣ ಅರ್ಹರ ಖಾತೆಗೆ ಜಮಾ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಇದಕ್ಕಾಗಿ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕೊರತೆಯ ಮಧ್ಯೆಯೂ ಅತ್ಯುತ್ತಮ ಕೆಲಸ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

Advertisement

ಗಡಿಭಾಗದ ಜನರು ಆರೋಗ್ಯ ಸೌಲಭ್ಯಕ್ಕಾಗಿ ನೆರೆಯ ರಾಜ್ಯಗಳಿಗೆ ತೆರಳುತ್ತಿದ್ದಾರೆ. ಆದ್ದರಿಂದ ಅಂತಹ ಜನರಿಗೆ ನಮ್ಮ ಜಿಲ್ಲೆಯಲ್ಲಿ ಅತ್ಯುತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗುವಂತೆ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ವಿಮಾನ ನಿಲ್ದಾಣ ರಸ್ತೆ: ಬೆಳಗಾವಿ ವಿಮಾನ ನಿಲ್ದಾಣ ರಸ್ತೆಯನ್ನು ಚತುಷ್ಪಥವನ್ನಾಗಿ ಪರಿವರ್ತಿಸಲು ಸಮಗ್ರ ಯೋಜನಾ ವರದಿ ಸಿದ್ಧವಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಸಚಿವರು ಹೇಳಿದರು.

ಇದಲ್ಲದೆ ಬೆಳಗಾವಿ-ಧಾರವಾಡ ರೈಲು ಮಾರ್ಗ ನಿರ್ಮಾಣಕ್ಕಾಗಿ ಹೆಚ್ಚುವರಿಯಾಗಿ ಇನ್ನೂ 30 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಬಳ್ಳಾರಿ ನಾಲಾ ಸಮಸ್ಯೆ ಪರಿಹಾರಕ್ಕಾಗಿ ಶಾಶ್ವತ ಯೋಜನೆ ರೂಪಿಸುವ ಕೆಲಸ ಪ್ರಗತಿಯಲ್ಲಿದೆ ಎಂದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಮಾತನಾಡಿ ಜಿಲ್ಲೆಯಲ್ಲಿ ಇತ್ತೀಚಿನ ಅತಿವೃಷ್ಟಿಯಿಂದ ಮನೆಹಾನಿ, ಬೆಳೆಹಾನಿ ಹಾಗೂ ಮೂಲಸೌಕರ್ಯಗಳ ಹಾನಿ ಸೇರಿದಂತೆ ಒಟ್ಟಾರೆ ಅಂದಾಜು 400 ಕೋಟಿ ರೂ. ಹಾನಿಯಾಗಿದೆ. ಆದರೆ ಎನ್‌.ಡಿ.ಆರ್‌.ಎಫ್‌. ಮಾರ್ಗಸೂಚಿಯಂತೆ 105 ಕೋಟಿ ರೂಪಾಯಿ ಹಾನಿ ಕುರಿತು ವರದಿ ಸಲ್ಲಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಗೋಡೆ ಕುಸಿತ, ಸಿಡಿಲು ಬಡಿದು ಹಾಗೂ ಮರ ಬಿದ್ದ ಕಾರಣದಿಂದ ಒಟ್ಟು ಐವರು ಪ್ರಾಣ ಕಳೆದುಕೊಂಡಿದ್ದು ಈಗಾಗಲೇ ಅವರ ಕುಟುಂಬದ ವಾರಸುದಾರರಿಗೆ ತಲಾ ಐದು ಲಕ್ಷ ಪರಿಹಾರ ನೀಡಲಾಗಿದೆ ಎಂದು ಹೇಳಿದರು.

ಇದಲ್ಲದೆ ಜುಲೈ ಮತ್ತು ಆಗಷ್ಟ ತಿಂಗಳಲ್ಲಿ ಬೆಳೆಹಾನಿ ಆಗಿರುವ ಬಗ್ಗೆ ಜಂಟಿ ಸಮೀಕ್ಷೆ ಕೈಗೊಂಡು ತ್ವರಿತವಾಗಿ 17.01 ಕೋಟಿ ರೂಪಾಯಿ ಪರಿಹಾರವನ್ನು ಜಮಾ ಮಾಡಲಾಗಿದೆ. ಸೆಪ್ಟೆಂಬರ ತಿಂಗಳಲ್ಲಿ ಉಂಟಾಗಿರುವ ಹಾನಿಯ ಸಮೀಕ್ಷೆ ಕೈಗೊಂಡು ಅದಕ್ಕೂ ಸಹ ವಿಳಂಬ ಮಾಡದೆ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಪ್ರಸಕ್ತ ಸಾಲಿನಲ್ಲಿ ಮನೆಹಾನಿ ಸಮೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ಕೈಗೊಳ್ಳಲಾಗಿದೆ. ಯಾವುದೇ ದೂರುಗಳಿಲ್ಲ ಎಂದು ಹೇಳಿದ ಜಿಲ್ಲಾಧಿಕಾರಿಗಳು, ಅತಿವೃಷ್ಟಿಯಿಂದ 678 ಮನೆಗಳಿಗೆ ನೀರು ನುಗ್ಗಿದ್ದು ಸರಕಾರದ ಮಾರ್ಗಸೂಚಿಯಂತೆ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಬೆಳಗಾವಿ ನಗರ ಪೊಲೀಸ್‌ ಆಯುಕ್ತ ಡಾ| ಎಂ.ಬಿ.ಬೋರಲಿಂಗಯ್ಯ, ಜಿಪಂ ಸಿಇಒ ಅಧಿಕಾರಿ ದರ್ಶನ್‌, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪ ವಿಭಾಗಾಧಿಕಾರಿಗಳಾದ ರವೀಂದ್ರ ಕರಲಿಂಗಣ್ಣವರ, ಶಶಿಧರ್‌ ಬಗಲಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next