ಶ್ರವಣಬೆಳಗೊಳ: ಮಹಾಮಸ್ತಕಾಭಿಷೇಕ ಮಹೋತ್ಸವದ ಅಂಗವಾಗಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ವಿಂಧ್ಯಗಿರಿ ಸುತ್ತ ವಿವಿಧ ಕಲಾ ತಂಡಗಳು, ಸ್ತಬ್ಧ ಚಿತ್ರಗಳೊಂದಿಗೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರವಣಬೆಳಗೊಳದ ಜೈನಮಠದ ಪೀಠಾಧ್ಯಕ್ಷ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದ್ದಾರೆ.
ಶ್ರವಣಬೆಳಗೊಳದ ಆದಿಕವಿ ಪಂಪ ಗ್ರಂಥಾಲಯದ ಕಟ್ಟಡದಲ್ಲಿರುವ ಮಾಧ್ಯಮ ಕೇಂದ್ರದಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವ ಆಚರಣೆ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರಗಳನ್ನು ನೀಡಿದ ಅವರು, ವಿಂಧ್ಯಗಿರಿ ಬೆಟ್ಟದ ಸುತ್ತಲೂ 5 ಕಿ.ಮೀ. ವ್ಯಾಪ್ತಿಯಲ್ಲಿ ಬಾಹುಬಲಿ ಸ್ವಾಮಿಗೆ ಮಾಲೆ ಹಾಕುವ ಮಾದರಿಯಲ್ಲಿ ಮೆರವಣಿಯನ್ನು ಆಯೋಜಿಸಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ 200ಕ್ಕೂ ಹೆಚ್ಚು ಕಲಾ ತಂಡಗಳ ವಾದ್ಯಮೇಳ, ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಫೆ.7ರಿಂದ ನಡೆಯುತ್ತಿರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಗಮನ ಸೆಳೆಯುತ್ತಿವೆ ಎಂದರು. ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳು, 24 ತೀರ್ಥಂಕರರ ಪಲ್ಲಕ್ಕಿ ಉತ್ಸವಗಳು, 6 ಶಾಸ್ತ್ರಗ್ರಂಥಗಳು, ಧರ್ಮ ಧ್ವಜ ಹಾಗೂ ಕಲಸವನ್ನೊತ್ತ ಶ್ರಾವಕ ಶ್ರಾವಕಿಯರು ಸಹಿತ 8 ರಥ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದಲೂ ಬೆಳ್ಳಿ ಪಲ್ಲಕ್ಕಿ ರಥಗಳು ಆಗಮಿಸಲಿದ್ದು ವಿವಿಧ ಕಲಾ ತಂಡಗಳ ಸಹಿತ 200ಕ್ಕೂ ಹೆಚ್ಚು ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ.
ಈ ಬಾರಿ ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ರಾಜ್ಯಗಳಿಂದ ಹಾಗೂ ಕರ್ನಾಟಕದ ಹಲವಾರು ಗ್ರಾಮಗಳಿಂದ ಧವಸ ಧಾನ್ಯಗಳು ಹೆಚ್ಚಿನ ಪ್ರಮಾಣದಲ್ಲಿ ದಾನಿಗಳಿಂದ ಬರುತ್ತಿವೆ ಎಂದು ಶ್ರೀಗಳು ಹೇಳಿದರು.