Advertisement

ಎಫ್ಐಆರ್‌ ರದ್ದು: ಬಿಎಸ್‌ವೈ ಅರ್ಜಿ ವಿಚಾರಣೆ ಮುಂದೂಡಿಕೆ

06:32 AM Jul 02, 2019 | Team Udayavani |

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿರುದ್ಧದ ಆಪರೇಷನ್‌ ಕಮಲ ಆಡಿಯೋ ಟೇಪ್‌ ಪ್ರಕರಣ ಸಂಬಂಧದ ಅರ್ಜಿ ವಿಚಾರಣೆಯನ್ನು ಇಲ್ಲಿನ ಹೈಕೋರ್ಟ್‌ ಪೀಠ ಜು.22ಕ್ಕೆ ಮುಂದೂಡಿದೆ.

Advertisement

ಗುರುಮಿಠಕಲ್‌ ಜೆಡಿಎಸ್‌ ಶಾಸಕ ನಾಗನಗೌಡ ಕಂದಕೂರು ಅವರನ್ನು ಬಿಜೆಪಿಗೆ ಸೆಳೆಯಲು ಪುತ್ರ ಶರಣಗೌಡ ಅವರಿಗೆ ಬಿಎಸ್‌ವೈ ಲಂಚದ ಆಮಿಷವೊಡ್ಡಿದ್ದರು ಎನ್ನಲಾದ ಆಡಿಯೋ ಪ್ರಕರಣ ಸಂಚಲನ ಮೂಡಿಸಿತ್ತು. ಈ ಕುರಿತು ಶರಣಗೌಡ ಕಂದಕೂರು ದೇವದುರ್ಗ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿದ್ದರು.

ದೂರು ರದ್ದು ಮಾಡುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್‌ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದು, ಈಗಾಗಲೇ ಪ್ರಕರಣದ ತನಿಖೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಆದರೆ, ಪೊಲೀಸ್‌ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಬಿಎಸ್‌ವೈ ಅರ್ಜಿ ಸಲ್ಲಿಸಿದ್ದು, ಸೋಮವಾರ ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ ವಾದ ಮಂಡಿಸಿದರು.

ಅರ್ಜಿ ವಿಚಾರಣೆಗೆ ನೀಡಿರುವ ತಡೆಯಾಜ್ಞೆ ತೆರವುಗೊಳಿಸಬೇಕು. ಸಮಗ್ರ ತನಿಖೆಗೆ ಆದೇಶ ನೀಡಬೇಕು ಎಂದು ಶರಣಗೌಡ ಕಂದಕೂರ ಪರ ವಕೀಲರು ಪ್ರತಿವಾದ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು ಜು.22ಕ್ಕೆ ವಿಚಾರಣೆ ಮುಂದೂಡಿದರು.

Advertisement

Udayavani is now on Telegram. Click here to join our channel and stay updated with the latest news.

Next