Advertisement

ಮೊದಲಿಗೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ: ಸಚಿವ ಮಹೇಶ್‌

06:00 AM Oct 02, 2018 | Team Udayavani |

ಮೈಸೂರು: ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಮೊದಲು ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್‌. ಮಹೇಶ್‌ ತಿಳಿಸಿದರು. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗತ್ಯಕ್ಕಿಂತ ಹೆಚ್ಚಾಗಿರುವ ಶಿಕ್ಷಕರನ್ನು ಅಗತ್ಯವಿರುವ ಶಾಲೆಗಳಿಗೆ ಮೊದಲು ವರ್ಗಾವಣೆ ಮಾಡಿದ ನಂತರ ಕಡ್ಡಾಯ ಶಿಕ್ಷಕರನ್ನು ವರ್ಗಾವಣೆ ಮಾಡಲಾಗುವುದು. ವರ್ಗಾವಣೆ ನೀತಿಯ ಆಧಾರದ ಮೇಲೆ ಈ ಕಾರ್ಯಗಳನ್ನು ಮಾಡಲಾಗುತ್ತಿದೆ. ಈ ವೇಳೆ ಗ್ರಾಮೀಣ ಪ್ರದೇಶದ ಶಿಕ್ಷಕರನ್ನು ನಗರ ಪ್ರದೇಶಗಳಿಗೆ ಹಾಗೂ ನಗರ ಪ್ರದೇಶದ ಶಿಕ್ಷಕರನ್ನು ಗ್ರಾಮೀಣ ಪ್ರದೇಶಗಳಿಗೆ ವರ್ಗಾವಣೆ ಮಾಡಲಾಗುವುದು. ಪಟ್ಟಣ ಪಂಚಾಯಿತಿಯಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರಿಗೂ ಈ ನೀತಿ ಅನ್ವಯಿಸಲಿದೆ ಎಂದು ಹೇಳಿದರು.

ಮೂರನೇ ಹಂತದಲ್ಲಿ ಕೋರಿಕೆ ಶಿಕ್ಷಕರಿಗೆ ಮಾನವೀಯ ಮೌಲ್ಯಗಳ ಮೂಲಕ ವರ್ಗಾವಣೆ ಮಾಡಲು ಮುಂದಾಗಿದ್ದೆವು. ಆದರೆ ಅದು ಸಾಧ್ಯವಾಗದ ಕಾರಣ ವರ್ಗಾವಣೆ ನೀತಿಯ ಮೂಲಕವೇ ಶಿಕ್ಷಕರ ವರ್ಗಾವಣೆ ಮಾಡಲಾಗುವುದು. ಶಿಕ್ಷಕರ ವರ್ಗಾವಣೆಯಿಂದ ಶಾಲಾ ಕಲಿಕೆಯ ಮೇಲೆ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು. 

ಶಾಲಾ ಕಟ್ಟಡಗಳ ನಿರ್ಮಾಣ ಹಾಗೂ ದುರಸ್ತಿಗಾಗಿ ರಾಜ್ಯ ಸರ್ಕಾರ ನೀಡಿರುವ 400 ಕೋಟಿ ರೂ.ಗಳಲ್ಲಿ ಈಗಾಗಲೇ 150 ಕೋಟಿ ರೂ. ಬಿಡುಗಡೆಯಾಗಿದೆ. ಮೊದಲು ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ಮೂಲಸೌಕರ್ಯಕ್ಕಾಗಿ ಹಣ ಬಳಕೆ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಸರ್ವ ಶಿಕ್ಷಣ ಅಭಿಯಾನದಡಿಯಲ್ಲಿ ರಾಜ್ಯಕ್ಕೆ 200 ಕೋಟಿ ರೂ. ಬಿಡುಗಡೆಯಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next