Advertisement

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆನೀಡಲು ಮುಖ್ಯಮಂತ್ರಿಗೆ ಒತ್ತಾಯ

09:36 AM Sep 22, 2018 | |

ಚಿಕ್ಕಮಗಳೂರು: ಆಡಳಿತಕ್ಕೆ ಚುರುಕು ಮುಟ್ಟಿಸುವುದರ ಜತೆಗೆ ನನೆಗುದಿಗೆ ಬಿದ್ದಿರುವ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಕೂಡಲೇ ಚಾಲನೆ ನೀಡಬೇಕು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಲ್ಲಿ ಒತ್ತಾಯಿಸಲಿದ್ದೇವೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶನಿವಾರ ಮುಖ್ಯಮಂತ್ರಿ ಕುಮಾರಸ್ವಾಮಿ ನಗರಕ್ಕೆ ಭೇಟಿ ನೀಡುವ
ಸಂದರ್ಭದಲ್ಲಿ ಕರಗಡ ಕುಡಿಯುವ ನೀರಿನ ಯೋಜನೆ, ವೈದ್ಯಕೀಯ ಕಾಲೇಜು, ಜಿಲ್ಲಾಸ್ಪತ್ರೆ ಉನ್ನತೀಕರಣ, ಬಯಲು ಸೀಮೆಯ 63 ಕೆರೆಗಳನ್ನು ತುಂಬಿಸುವ ಯೋಜನೆ, ಜಿಲ್ಲೆಯ ಅತಿವೃಷ್ಟಿ, ಅನಾವೃಷ್ಟಿ ಪರಿಹಾರ ಕಾರ್ಯಕ್ರಮಗಳು, ಹಾಲು ಒಕ್ಕೂಟ ಸ್ಥಾಪನೆ ಸೇರಿ ಹಲವು ಅಭಿವೃದ್ಧಿ ಯೋಜನೆಗಳು ನೆನೆಗುದಿಗೆ ಬಿದ್ದಿರುವ ಬಗ್ಗೆ ಅವರ ಗಮನ ಸೆಳೆಯುತ್ತೇವೆ ಎಂದರು.

ತಮ್ಮ ಸರ್ಕಾರ ಅಧಿಕಾರದಲ್ಲಿದ್ದ 2013-14ರಲ್ಲೇ ವೈದ್ಯಕೀಯ ಕಾಲೇಜಿಗೆ ಮಂಜೂರಾತಿ ಸಿಕ್ಕಿದ್ದರೂ ಇನ್ನೂ ಒಂದು ರೂ. ಹಣವೂ ಬಿಡುಗಡೆಯಾಗಿಲ್ಲ. ಸಹಜವಾಗಿ ಜಿಲ್ಲೆಯ ಜನರಲ್ಲಿ ಈ ಬಗ್ಗೆ ಆಕ್ರೋಶವಿದೆ. ಮಲ್ಲೇಗೌಡ ಜಿಲ್ಲಾಸ್ಪತ್ರೆ ಉನ್ನತೀಕರಣ ಆಗದಿರುವುದರಿಂದ ಬಡವರು ಪರಿತಪಿಸುತ್ತಿದ್ದಾರೆ. ಪ್ರತಿನಿತ್ಯ ರೋಗಿಗಳು ವಿವಿಧ ಕಾರಣಗಳಿಗಾಗಿ ಹೊರ ಜಿಲ್ಲೆಯ ಆಸ್ಪತ್ರೆಗಳನ್ನು ಆಶ್ರಯಿಸಬೇಕಾಗಿದೆ. ಇದರಿಂದ ಜನ ತೀವ್ರ ಅಸಮಾಧಾನಗೊಂಡು ಸರ್ಕಾರದ ಉಪೇಕ್ಷೆಗೆ ಹಿಡಿಶಾಪ ಹಾಕುತ್ತಿದ್ದಾರೆ. ಇದನ್ನು ಮುಖ್ಯಮಂತ್ರಿ ಗಮನಕ್ಕೆ ತರುತ್ತೇವೆ ಎಂದರು. 

ಬಯಲುಸೀಮೆಯ 63 ಕೆರೆಗಳನ್ನು ತುಂಬಿಸುವ ಯೋಜನೆಗೆ ಡಿಪಿಆರ್‌ ತಯಾರಾಗಿದೆ. ಈ ಯೋಜನೆಗೆ ಕನಿಷ್ಠ 1000 ಕೋಟಿ ರೂ. ಅನುದಾನ ಬೇಕಾಗಬಹುದು. ಅದಕ್ಕೆ ಮಂಜೂರಾತಿ ನೀಡಿದರೆ 25 ತಿಂಗಳಲ್ಲಿ ನೀರು ಕೊಡಲು ಸಾಧ್ಯವಿದೆ. ಜಿಲ್ಲೆಯ ಮಲೆನಾಡು ಭಾಗದ ರೈತರು ಅತಿವೃಷ್ಟಿಯಿಂದಲೂ ಬಯಲು ಭಾಗದ ಜನರು ಬರದಿಂದಲೂ ಸಂಕಷ್ಟಕ್ಕೆ ಸಿಕ್ಕಿದ್ದಾರೆ. ಬಯಲಿನಲ್ಲಿ ಮಳೆಗಾಲದಲ್ಲೂ ಟ್ಯಾಂಕರ್‌ ನೀರು ಪೂರೈಸುವ ಸ್ಥಿತಿ ಇದೆ. ನಮ್ಮ ಕ್ಷೇತ್ರದಲ್ಲೇ
ಈಗಲೂ 7 ಗ್ರಾಮಗಳಿಗೆ ಟ್ಯಾಂಕರ್‌ನಲ್ಲಿ ನೀರು ಕೊಡುತ್ತಿದ್ದೇವೆ ಎಂದು ತಿಳಿಸಿದರು.

ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಿರುವ ಸರಬರಾಜುದಾರರಿಗೂ ಸಹ ಹಣ ಪಾವತಿಯಾಗಿಲ್ಲ. ಚಿಕ್ಕಮಗಳೂರು ತಾಲೂಕಿನಲ್ಲಿ 40 ಲಕ್ಷ, ಕಡೂರು ತಾಲ್ಲೂಕಿನಲ್ಲಿ 2.82 ಕೋಟಿ ರೂ. ಹಾಗೂ ತರೀಕೆರೆ ತಾಲೂಕಿನಲ್ಲಿ 1.15 ಕೋಟಿ ರೂ.ಸೇರಿ ಒಟ್ಟು 4.37 ಕೋಟಿ ರೂ. ಪಾವತಿ ಮಾಡಬೇಕಾಗಿದೆ. ಈ ಬಾಕಿ ಹಣವನ್ನು ತುರ್ತಾಗಿ ಪಾವತಿಸಲು ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಗ್ರಾಮಗಳಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಕ್ರಮವಹಿಸಲು ಮುಖ್ಯಮಂತ್ರಿಗಳು ಮುಂದಾಗಬೇಕು ಎಂದರು. 

Advertisement

ಸರ್ಕಾರಕ್ಕೆ ಎರಡು ಜವಾಬ್ದಾರಿಗಳಿವೆ. ಅತಿವೃಷ್ಟಿಯಿಂದ ಸಂಕಷ್ಟ ಅನುಭವಿಸುತ್ತಿರುವ ಕಾಫಿ, ಏಲಕ್ಕಿ, ಅಡಕೆ, ಇನ್ನಿತರೆ ತೋಟಗಾರಿಕೆ ಬೆಳೆಹಾನಿಗೆ ಪರಿಹಾರ ನೀಡಿ ನೆರವಿಗೆ ಬರಬೇಕಾಗಿರುವುದು. ಬಯಲಿನಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಜನರು ಗುಳೆ ಹೋಗುವುದನ್ನು ತಪ್ಪಿಸಬೇಕಾಗಿರುವುದು. ಈ ಹಿನ್ನೆಲೆಯಲ್ಲೂ
ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಅನೇಕ ರೈತರಿಗೆ 2016-17ನೆಯ ಸಾಲಿನ ಫಸಲ್‌ ಬಿಮಾ ಯೋಜನೆಯ ಪರಿಹಾರ ಪೂರ್ಣ ಮಟ್ಟದಲ್ಲಿ ಸಿಕ್ಕಿಲ್ಲ. ಯೂನಿವರ್ಸಲ್‌ ಸೋಂಪೊ ಎನ್ನುವ ಏಜೆನ್ಸಿ ರೈತರಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದರು. ಕರಗಡ 2 ನೆಯ ಹಂತದ ಕಾಮಗಾರಿಗೆ ಅನುದಾನ ಮಂಜೂರು ಮಾಡಬೇಕಾಗಿದೆ. ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ನೀರಿನ ಹಂಚಿಕೆ ಹಾಗೂ ಅನುದಾನ ಮಂಜೂರು ಮಾಡಬೇಕು ಎಂದು ಮನವಿ ಮಾಡಲಾಗುವುದು ಎಂದರು. ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ರಸ್ತೆ ಹಾಗೂ ಸೇತುವೆಗಳ ಅಭಿವೃದ್ದಿಗಾಗಿ ಕೇಂದ್ರೀಯ ರಸ್ತೆನಿಧಿಯಿಂದ 103.55 ಕೋಟಿ ರೂ. ಮಂಜೂರು ಮಾಡಿಸಿದ್ದು ,ರಾಜ್ಯ ಸರ್ಕಾರವು ಇದುವರೆಗೂ ಟೆಂಡರ್‌ ಕರೆದು ಅನುಷ್ಠಾನಗೊಳಿಸುವ ಕ್ರಮವಹಿಸಿರುವುದಿಲ್ಲ. ಆದ್ದರಿಂದ ಈ ಕಾಮಗಾರಿಗಳಿಗೆ ತುರ್ತಾಗಿ ಟೆಂಡರ್‌ ಕರೆದು ಕಾಮಗಾರಿ ಅನುಷ್ಠಾನಗೊಳಿಸಬೇಕಾಗಿ ಕೋರಲಾಗುವುದು ಎಂದು ತಿಳಿಸಿದರು.

ಪ್ರವಾಸಿ ತಾಣಗಳನ್ನು ಹೊಂದಿರುವ ಈ ಕ್ಷೇತ್ರ ಮೂಲ ಸೌಕರ್ಯದ ಕೊರತೆ ಎದುರಿಸುತ್ತಿದೆ. ಜಿಲ್ಲೆಯ ಎಲ್ಲಾ ಪ್ರವಾಸಿ
ತಾಣಗಳಿಗೆ ಅಗತ್ಯ ಮೂಲಸೌಕರ್ಯ ಗಳನ್ನೊದಗಿಸಬೇಕು. ಪರಿಸರ ರಕ್ಷಣೆ, ಉದ್ಯೋಗ ಸೃಷ್ಟಿ ಹಾಗೂ ಪ್ರವಾಸಿಗರ
ಹಿತದೃಷ್ಟಿಯಿಂದ ಜಿಲ್ಲೆಗೆ ಒಂದು ಉತ್ತಮವಾದ ಪ್ರವಾಸೋದ್ಯಮ ನೀತಿ ಜಾರಿಗೊಳಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು.
 ಸಿ.ಟಿ. ರವಿ, ಶಾಸಕ 

Advertisement

Udayavani is now on Telegram. Click here to join our channel and stay updated with the latest news.

Next