Advertisement

ಅಕ್ಕಿ ಗ್ಯಾರಂಟಿ ಬಗ್ಗೆ ದಿನಕ್ಕೊಂದು ನೆಪ: ಕಾಂಗ್ರೆಸ್ ಸರಕಾರದ ವಿರುದ್ಧ ಹೆಚ್.ಡಿ.ಕೆ ಕಿಡಿ

05:36 PM Jun 21, 2023 | Team Udayavani |

ಬೆಂಗಳೂರು: ಕಾಂಗ್ರೆಸ್ ಸರಕಾರ ತಾನು ಎಸಗಿದ ಸ್ವಯಂಕೃತ ತಪ್ಪಿಗೆ ಕೇಂದ್ರ ಸರಕಾರ ಮೇಲೆ ಗೂಬೆ ಕೂರಿಸುತ್ತಾ ಜನರನ್ನು ಯಮಾರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಯಾರೋ ಚುನಾವಣಾ ತಂತ್ರಗಾರರ ಮಾತು ಕೇಳಿಕೊಂಡು ಗ್ಯಾರಂಟಿ ಘೋಷಣೆ ಮಾಡಿದಾಗ, ಯೋಜನೆ ಜಾರಿಗೆ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಅಕ್ಕಿ ಗ್ಯಾರಂಟಿ ಬಗ್ಗೆ ಇವರೇನು ಕೇಂದ್ರ ಸರಕಾರಕ್ಕೆ ಅರ್ಜಿ ಹಾಕಿದ್ರಾ? ಪೊಳ್ಳು ಭರವಸೆ ಕೊಟ್ಟು ಗ್ಯಾರಂಟಿ ಎಂದು ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು ಎಷ್ಟು ಸರಿ. ಸರಿ ತಪ್ಪು ಎನ್ನುವುದನ್ನು ನಾವು ಮಾಡಬೇಕಲ್ಲವೇ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಸರ್ಕಾರ ಕೊಡಬೇಕು ಯಾಕೆ ಅಕ್ಕಿ.ಕೊಡಬೇಕು ನಿಮಗೆ? ಕೇಂದ್ರ ಸರ್ಕಾರಕ್ಕೆ ಅರ್ಜಿ ಹಾಕಿಕೊಂಡಿದ್ರಾ ನೀವು? ಯಾವನೋ ಬಂದು ಎಲೆಕ್ಷನ್ ಸ್ಟ್ರಾಟೆಜಿಸ್ಟ್ ಐಡಿಯಾ ಕೊಟ್ಟ ಅಂತ ನೀವು ಫ್ರೀ ಫ್ರೀ ಅಂದ್ರಿ. ಸಚಿವರ ಹೆಂಡ್ತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ ಎಂದು ಹೇಳಿ ಎಲ್ಲರೂ ಅರ್ಜಿ ಹಾಕಿಕೊಳ್ಳಬಹುದು ಎಂದ್ರಿ. ಈಗ ನೋಡಿದರೆ ಬೇರೆ ವರಸೆ ಶುರು ಮಾಡಿಕೊಂಡಿದ್ದೀರಿ.

ಗೃಹಜ್ಯೋತಿ ಕತ್ತಲಾಗಿ ಪರಿಣಮಿಸಿದೆ. ವಿದ್ಯುತ್ ಉಚಿತ ಕೊಡ್ತೀವಿ ಅಂತ ಹೇಳಿದವರು ಈಗಿನ ಪರಿಸ್ಥಿತಿಯನ್ನು ಅವಲೋಕನ ಮಾಡಬೇಕು. ವಿಟಿಯು ಉಪ ಕುಲಪತಿ ಬಾಯಿ ಬಡ್ಕೊತಿದ್ದಾರೆ. ವಿದ್ಯುತ್ ಬಿಲ್ ನೋಡಿ ಅವರು ಶಾಕ್ ಗೆ ಗುರಿಯಾಗಿದ್ದಾರೆ. ಬಾಕಿ ಮೊತ್ತ ಕಂಡು ಬೇಸ್ತು ಬಿದ್ದಿದ್ದಾರೆ. ಇನ್ನೆಷ್ಟು ಶಾಕ್ ಕೊಡುತ್ತೀರಿ ಎಂದು ಮಾಜಿ ಮುಖ್ಯಮಂತ್ರಿ ಅವರು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ: ಮಹಮ್ಮದ್ ಸಾವದ್ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಬಂಟ್ವಾಳ ಮೂಲದ ಇಬ್ಬರ ಬಂಧನ

Advertisement

ಎರಡು ರಾಷ್ಟ್ರೀಯ ಪಕ್ಷಗಳ ಇಂದಿನ ನಡವಳಿಕೆ ನೋಡಿದಾಗ ತೀವ್ರ ಬೇಸರವಾಗುತ್ತಿದೆ ಎಂದ ಅವರು, ರಾಜ್ಯದ ಜನತೆ ಅವರನ್ನು ನಂಬಿ ಮತ ಕೊಟ್ಟಿದ್ದಾರೆ. ಜನತೆ ಎರಡು ಪಕ್ಷಗಳ ನಾಟಕ ನೋಡಬೇಕಾಗಿದೆ. ಇವರು ಯಾವ ರೀತಿ ಟೋಪಿ ಹಾಕ್ತಾರೆ ಅಂತ ನೋಡುವ ಅನಿವಾರ್ಯತೆಯನ್ನು ಜನರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷಡ ಅಧ್ಯಕ್ಷರು, ಸರಕಾರದ ಸಚಿವ ಕೇಂದ್ರ ಸರ್ಕಾರವನ್ನು ದೂಷಣೆ ಮಾಡುತ್ತಿದ್ದಾರೆ. ಗ್ಯಾರಂಟಿಗಳನ್ನು ರೂಪಿಸುವಾಗ ಇದೆಲ್ಲಾ ಗೊತ್ತಿರಲಿಲ್ಲವೇ? ಎಂದು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

ಮುಖ್ಯಮಂತ್ರಿಗಳು ನೋಡಿದರೆ ಭಾರತದ ಆಹಾರ ನಿಗಮಕ್ಕೆ ಪತ್ರ ಬರೆದಿದ್ದೆ ಎಂದು ಹೇಳುತ್ತಿದ್ದಾರೆ. ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಇಂಥ ಉಡಾಫೆ ಉತ್ತರ ಕೊಟ್ಟರೆ ಹೇಗೆ? ಕೇಂದ್ರದಿಂದ ಅಕ್ಕಿ ಬೇಕು ಅಂದರೆ ಕೇಂದ್ರ ಸರಕಾರದ ಸಂಬಂಧಪಟ್ಟ ಸಚಿವರ ಜತೆ ಮಾತನಾಡಬೇಕಿತ್ತು. ಮನವಿ ಕೊಡಬೇಕಿತ್ತು. ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವರೇ ಹೋಗಿ ಚರ್ಚೆ ನಡೆಸಬೇಕಿತ್ತು. ಅದನ್ನು ಬಿಟ್ಟು ಉಡಾಫೆ ಹೇಳಿಕೆ ಕೊಡ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಕೇಂದ್ರ ಸರ್ಕಾರಕ್ಕೆ ಅವರದೇ ಆದ ಕಮಿಟ್‌ಮೆಂಟ್ ಇರುತ್ತದೆ. ನಮಗೆ ಅಕ್ಕಿ ಬೇಕು ಅಂದರೆ ಅವರು ಹೇಗೆ ಕೊಡ್ತಾರೆ? ನಾನು ಸಾಲಾಮನ್ನಾ ಮಾಡಿದಾಗ ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿದ್ದ ಸಾಲಮನ್ನಾ ಮಾಡಿದಾಗ ಪ್ರಧಾನಿಗಳ ಹಟ್ಟಿರ ಹೋಗಿ ಕೇಳಿದ್ನಾ? ದರ್ದು ಇರೋದು ಕಾಂಗ್ರೆಸ್ ಪಕ್ಷಕ್ಕೆ, ಅವರಿಗೇನಿದೆ ದರ್ದು? ನಿಮಗೆ ಬೇಕಾದ ವ್ಯವಸ್ಥೆ ನೀವೇ ಮಾಡಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಸತೀಶ್ ಜಾರಕಿಹೊಳಿ ಹೇಳಿಕೆ ಸರಿಯಲ್ಲ:

ಯಾರೀ  ಸತೀಶ್ ಜಾರಕಿಹೊಳಿ? ಬಾಯಿ ಚಪಲಕ್ಕೆ ಮಾತನಾಡ್ತಿದ್ದಾರೆ ಅವರು. ಯಾಕೆ ಹ್ಯಾಕ್ ಮಾಡ್ತಾರೆ, ನಿಮ್ಮ ಸರ್ವರ್ ಬಲಪಡಿಸಿಕೊಳ್ಳೋದು ನಿಮ್ಮ ಜವಾಬ್ದಾರಿ ಎಂದರು.

ಇದನ್ನೂ ಓದಿ: ʼರಾಂಜನಾʼ ಕ್ಕೆ 10 ವರ್ಷ: ʼTere Ishk Meinʼ ಮೂಲಕ ಮತ್ತೆ ಆನಂದ್‌ ಜೊತೆ ಕೈಜೋಡಿಸಿದ ಧನುಷ್

ಎಕ್ಸ್ ಪ್ರೆಸ್ ಹೆದ್ದಾರಿ ಅಲ್ಲ ಸಾವಿನ ರಹದಾರಿ:

ಬೆಂಗಳೂರು- ಮೈಸೂರು ಹೆದ್ದಾರಿ ಎಕ್ಸ್ ಪ್ರೆಸ್ ಹೆದ್ದಾರಿಯೋ ಅಥವಾ ಸಾವಿನ ರಹದಾರಿಯೋ. ಈ ಹೆದ್ದಾರಿಯನ್ನು ಅತ್ಯಂತ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ. ಅದನ್ನು ಸರಿಪಡಿಸುವ ಬಗ್ಗೆ ಕೇಂದ್ರ ಸರ್ಕಾರವಾಗಲಿ, ಹೆದ್ದಾರಿ ಪ್ರಾಧಿಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಗಮನ ಕೊಡುತ್ತಿಲ್ಲ. ಯಾರೋ ಬಂದರು, ದುಡ್ಡು ಮಾಡಿಕೊಂಡು ಹೋದರು. ಜನ ಮಾತ್ರ ದಿನನಿತ್ಯವೂ ಸಾಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಕಿಡಿಕಾರಿದರು.

ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು ಕಡಿತಕ್ಕೆ ಕಿಡಿ:

ಶಾಲಾ ಮಕ್ಕಳಿಗೆ ವಿತರಣೆ ಮಾಡಲಾಗುವ ಮೊಟ್ಟೆ, ಬಾಳೆ ಹಣ್ಣು ಕಡಿತ ಮಾಡಿರುವ ಬಗ್ಗೆಯೂ ಕುಮಾರಸ್ವಾಮಿ ಅವರು  ಆಕ್ಷೇಪ ವ್ಯಕ್ತಪಡಿಸಿದರು.

ಮುಂದೆ ಒಂದು ಮೊಟ್ಟೆ, ಒಂದು ಬಾಳೆಹಣ್ಣು ಅದು ಕೂಡ ಇರಲ್ವೇನೊ? ಇವರಿಗೆ ಮಕ್ಕಳ ಆಹಾರದಲ್ಲಿ ಹಣದ ಹಪಾಹಪಿ ಶುರುವಾಗಿದೆ ಎಂದು ಅವರು ಕಟುವಾಗಿ ಟೀಕಿಸಿದರು.

ಪವರ್ ಶೇರಿಂಗ್ ಅವರಿಗೇ ಬಿಟ್ಟಿದ್ದು:

ಅಧಿಕಾರ ಹಂಚಿಕೆ ಅವರಿಗೆ ಸೇರಿದ ವಿಚಾರ. 5 ವರ್ಷ ಅವರೇ ಇರುತ್ತಾರೋ, ಇನ್ನಾರದರೂ ಬರುತ್ತಾರೋ ನನಗೆ ಗೊತ್ತಿಲ್ಲ. ವೀರಪ್ಪ ಮೊಯ್ಲಿ ಅವರ ಕಾಲದಲ್ಲಿ ವಿಧಾನಸೌಧದಲ್ಲಿ ಚೇರ್, ಮೇಜು ಹಿಡಿದುಕೊಂಡು ಕುಸ್ತಿ ಮಾಡಿದ್ದರು. ಈಗಲೂ ಆ ರೀತಿ ಆಗುತ್ತೋ ಏನೋ ನನಗೆ ಗೊತ್ತಿಲ್ಲ. ಎಲ್ಲವೂ ಮುಂದೆ ಗೊತ್ತಾಗಲಿದೆ ಎಂದರು ಅವರು.

Advertisement

Udayavani is now on Telegram. Click here to join our channel and stay updated with the latest news.

Next