Advertisement

ಏ.1ರಿಂದಲೇ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್: ಸಿಎಂ ಬೊಮ್ಮಾಯಿ

04:06 PM Feb 21, 2023 | Team Udayavani |

ಬೆಂಗಳೂರು: ಏಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

Advertisement

ಅವರು ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಈ ಯೋಜನೆ ರೂಪಿಸಲಾಗಿದೆ. ಮಿನಿ ಸ್ಕೂಲ್ ಬಸ್ ಗಳನ್ನು ಪರಿಚಯಿಸಬೇಕು. ಇರುವ ಬಸ್ ಗಳ ಸಂಚಾರ ಆರಂಭ ಮಾಡಬೇಕು. ಶಾಲೆ ಆರಂಭವಾಗುವ ಸಂದರ್ಭದಲ್ಲಿ ಪ್ರತಿ ತಾಲೂಕಿನಲ್ಲಿ ಕನಿಷ್ಟ ಐದು ಬಸ್ ಸಂಚಾರ ಆರಂಭ ಮಾಡಬೇಕು. ಅಗತ್ಯ ಬಿದ್ದರೆ ಇನ್ನಷ್ಟು ಅನುದಾನ ನೀಡಲಾಗುವುದು ಎಂದರು.

ಆರ್ಥಿಕ ಬೆಳವಣಿಗೆಯಲ್ಲಿ ಸಂಚಾರ ಪ್ರಮುಖ ಪಾತ್ರ ವಹಿಸುತ್ತದೆ. ಅದಕ್ಕೆ ಸರ್ಕಾರ ಆದ್ಯತೆ ನೀಡಿದೆ. ಈ ಬಾರಿಯ ಬಜೆಟ್ ನಲ್ಲಿ ವಿದ್ಯಾರ್ಥಿನಿಯರಿಗೆ ಹಾಗೂ ದುಡಿಯುವ ಹೆಣ್ಣುಮಕ್ಕಳಿಗೆ ಉಚಿತ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದು, ಸರ್ಕಾರ ನೌಕರ ವರ್ಗ ಹಾಗೂ ಆಡಳಿತ ಮಂಡಳಿ ಜೊತೆಗಿರುತ್ತದೆ. ಜನರಿಗೆ ಉತ್ತಮ ಸೇವೆ ಒದಗಿಸೋಣ ಎಂದರು.

ಸಂಚಾರದ ಹೊಸ ಪಡೆ

Advertisement

ಹೊಸ ಸಂಚಾರದ ವಿಶೇಷ ಒಂದು ಪಡೆ ಅಂಬಾರಿಯನ್ನು ಇಂದು ಲೋಕಾರ್ಪಣೆ ಮಾಡಲಾಗಿದೆ. ಇದರಲ್ಲಿ ಸ್ಲೀಪರ್ ವ್ಯವಸ್ಥೆ ಇದೆ‌. ದೊರ ಪ್ರಯಾಣಕ್ಕೆ ಅಗತ್ಯವಿರುವ ರೈಲ್ವೆ ಮಾದರಿಯಲ್ಲಿವುದಕ್ಕಿಂತ ಉತ್ತಮವಾದ ವ್ಯವಸ್ಥೆ ಕಲ್ಪಿಸಲಾಗಿದೆ. ಹಿಂದೆ ವೊಲ್ವೊ ಬಸ್ ಗಳು ಹೆಚ್ಚು ಅನುಕೂಲಕರವಾಗಿರಲಿಲ್ಲ.  ಹಿಂದಿನ ಸಮಸ್ಯೆಗಳನ್ನು ಅರಿತು ಈ ಬಸ್ ಗಳಲ್ಲಿ ಮಲ್ಟಿ ಎಕ್ಸೆಲ್ ವ್ಯವಸ್ಥೆ ಕಲ್ಪಿಸಿ,  ಉತ್ತಮ ವ್ಯವಸ್ಥೆ ರೂಪಿಸಲಾಗಿದೆ. ಸುಲಭವಾಗಿ, ಸುಖವಾಗಿ ರಾತ್ರಿ ಪ್ರಯಾಣ ಮಾಡಬಹುದಾಗಿದೆ. ರಾಜ್ಯ ಸಾರಿಗೆಗೆ ಇನ್ನಷ್ಟು ಬಸ್ಸುಗಳನ್ನು ಪಡೆದುಕೊಳ್ಳುವುದು ಸೂಕ್ತ ಎಂದರು.

ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಯೋಜನೆ ಅಗತ್ಯ ಕೆ.ಎಸ್.ಆರ್.ಟಿ.ಸಿ ತನ್ನದೇ ಇತಿಹಾಸವನ್ನು ಹೊಂದಿದ್ದು, ಉತ್ತಮ ಸೇವೆಯನ್ನು ಒದಗಿಸುತ್ತಿದೆ. ಕೆಂಪ್ ಬಸ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದುದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಆಗ ಡ್ರೈವರ್ ಮತ್ತು ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ಇತ್ತು. ಗ್ರಾಮೀಣ ಜನರು ತಮ್ಮ ಪ್ರಯಾಣವನ್ನು ಕೆ.ಎಸ್.ಆರ್.ಟಿ.ಸಿ ಬಸ್ ಗಳ ಮೂಲಕವೇ ಗುರುತಿಸಿಕೊಳ್ಳುತ್ತಾರೆ. ಇಂಥ ಸೇವೆಯು ಖಾಸಗೀಕರಣದಿಂದ ಪೈಪೋಟಿ ಎದುರಿಸುತ್ತಿದೆ. ಖಾಸಗಿಯವರು ಲಾಭದಾಯಕ ಮಾರ್ಗಗಳಲ್ಲಿ ಮಾತ್ರ ಸಂಚಾರ ನಡೆಸುತ್ತಾರೆ. ಸಾಮಾಜಿಕವಾಗಿ ಕೆಲಸ ಮಾಡುವ ಮಾರ್ಗಗಳಮ್ಮ ಕರಾರಸಾನಿಕ್ಕೆ ಬಿಡುತ್ತಾರೆ. ನಾವು ಸೇವಾ ವಲಯದಲ್ಲಿಯೂ ಹಾಗೂ ವಾಣಿಜ್ಯ ಮಾರ್ಗಗಳಲ್ಲಿಯೂ ಸಂಚರಿಸಿ ನಿಗಮವನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕು. ಸಂಚಾರ ಮಾಡಬೇಕಾಗುತ್ತದೆ ಎಂದರು.

ಸೋರಿಕೆ ತಡೆಗಟ್ಟಿ ಆದಾಯ ಹೆಚ್ಚಿಸಿ

ಬರುವ ದಿನಗಳಲ್ಲಿ ನಿಗಮ ಬಹಳ ದೊಡ್ಡ ಬದಲಾವಣೆಯನ್ನು ಕಾಣುವ ವಿಶ್ವಾಸವಿದೆ. ತನ್ನದೇ ಶಕ್ತಿಯ ಮೇಲೆ ನಿಲ್ಲಬೇಕೆನ್ನುವುದು ನಮ್ಮ ಅಭಿಲಾಷೆ. ಹಿಂದೆ ಇದ್ದಂತೆಯೇ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರ ಕೋವಿಡ್ ಹಾಗೂ ನಂತರದಲ್ಲಿ ಎಲ್ಲಾ ರಂಗಗಳಲ್ಲಿ ಕುಸಿತ ಕಂಡಿತು. ಈ ಸಂದರ್ಭದಲ್ಲಿ ಕರಾರಸಾನಿ ಸಂಸ್ಥೆ ಸಾಕಷ್ಟು ತೊಂದರೆ ಅನುಭವಿಸಿದೆ. ಆ ಸಂದರ್ಭದಲ್ಲಿ ಸರ್ಕಾರ ಸಂಪೂರ್ಣವಾಗಿ ಹಣಕಾಸಿನ ಬೆಂಬಲ ನೀಡಿದೆ. 2 ವರ್ಷವೂ ಬೆಂಬಲ ನೀಡಿ ನೌಕರರಿಗೆ ವೇತನ, ಡೀಸೆಲ್ ಬಿಲ್ ಗೆ ಅನುದಾನ ಒದಗಿಸಲಾಗಿದೆ. ನಷ್ಟದಲ್ಲಿದ್ದ ಸಾರಿಗೆ ನಿಗಮಗಳಿಗೆ 4600 ಕೋಟಿ ರೂ. ನೀಡಲಾಗಿದೆ. ಇತ್ತೀಚೆಗೆ ಒಂದು ಸಾವಿರ ಕೋಟಿ ರೂ.ಗಳನ್ನು ನೀಡಲಾಗಿದೆ. ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡಲು ಸಿದ್ದವಿದ್ದು, ತೆರಿಗೆ ವಿನಾಯ್ತಿ ನೀಡಲು ಕೂಡ ಸಿದ್ಧವಿದೆ.   ನಿಗಮಗಳು ವಾಣಿಜ್ಯ ಮಾರ್ಗಗಳ ಸಂಚಾರ ಹಾಗೂ ಸೋರಿಕೆ ತಡೆಯುವ ಮೂಲಕ ಆದಾಯ ಹೆಚ್ಚಳಕ್ಕೆ ಪ್ರಯತ್ನ ಪಡಬೇಕು. ಖರೀದಿಯಲ್ಲಿನ ಪಾರದರ್ಶಕತೆ ತರಬೇಕು. ಬಿಡಿ ಭಾಗ, ಆಯಿಲ್, ಟೈಯರ್ ಖರೀದಿಯಲ್ಲಿ ಪಾರದರ್ಶಕತೆ ತಂದು ವೆಚ್ಚವನ್ನು ಕಡಿಮೆ ಮಾಡಬೇಕು. ಸಾರಿಗೆ ಸಂಸ್ಥೆಯನ್ನು ಮತ್ತೊಮ್ಮೆ ಲಾಭದಾಯಕವಾಗಿ ನಡೆಸಬೇಕು ಎಂಬ ಅಭಿಲಾಷೆಗೆ ಎಲ್ಲರೂ ಸಹಕರಿಸಬೇಕು ಎಂದರು.

ಕಂದಾಯ ಸಚಿವ ಆರ್.ಅಶೋಕ್, ಕೆ.ಎಸ್.ಆರ್.ಟಿ. ಸಿ  ಅಧ್ಯಕ್ಷ ಚಂದ್ರಪ್ಪ , ಉಪಾಧ್ಯಕ್ಷ ಮೋಹನ್ ಮೆಣಸಿನಕಾಯಿ, ಶಾಸಕರಾದ ಸೋಮಶೇಖರ್ ರೆಡ್ಡಿ, ಸತೀಶ್ ರೆಡ್ಡಿ, ಯಾದವ್ , ನಿವೃತ್ತ ಐ.ಎ. ಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next