Advertisement

ಸ್ವಾತಂತ್ರ್ಯ ಹೋರಾಟಗಾರ ಶತಾಯುಶಿ ವೆಂಕಣ್ಣ ಬೊಮ್ಮಯ್ಯ ನಾಯಕ ನಿಧನ

09:12 PM Sep 04, 2022 | Team Udayavani |

ಅಂಕೋಲಾ: ತಾಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಬೊಮ್ಮಯ್ಯ ನಾಯಕ (102) ಅವರು ವಯೋಸಹಜ ಅನಾರೋಗ್ಯದಿಂದ ತಮ್ಮ ಸ್ವಗೃಹ ಸೂರ್ವೆಯಲ್ಲಿ ನಿಧನ ಹೊಂದಿದರು. ಕಳೆದ 2-3 ದಿನಗಳ ಹಿಂದಷ್ಟೇ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು, ವೆಂಟಿಲೇಟರ್ ಚಿಕಿತ್ಸೆ ನೀಡಿ ನಂತರ ಮನೆಗೆ ಕರೆದುಕೊಂಡು ಬರಲಾಗಿತ್ತು.

Advertisement

ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಜೈಲುವಾಸ ಅನುಭವಿಸಿರುವ ಅವರನ್ನು ಇತ್ತೀಚೆಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಾಜಿ ಶಾಸಕರು, ಹಲವಾರು ಸಂಘ ಸಂಸ್ಥೆಗಳು, ಭಾರತೀಯ ತಟರಕ್ಷಕ ಪಡೆ ಸೇರಿದಂತೆ ಹಲವರು ಸೂರ್ವೆಯ ವೆಂಕಣ್ಣ ನಾಯಕರ ಮನೆಗೆ ತೆರಳಿ ಸನ್ಮಾನಿಸಿ ಗೌರವ ಸಲ್ಲಿಸಿದ್ದರು. ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ಅವರ ನಿಧನದಿಂದ ಅಂಕೋಲಾ ತಾಲೂಕಿನ ಸ್ವಾತಂತ್ರ್ಯ ಹೋರಾಟದ ಕೊನೆಯ ಕೊಂಡಿ ಕಳಚಿದಂತಾಗಿದೆ.

ವೆಂಕಣ್ಣ ನಾಯಕ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ವಿಧಾನಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕಿ ರೂಪಾಲಿ ನಾಯ್ಕ, ಶಾಸಕ ಆರ್ ವಿ ದೇಶಪಾಂಡೆ, ಮಾಜಿ ಸಂಸದೆ ಮಾರ್ಗರೇಟ್ ಆಳ್ವ, ಮಾಜಿ ಶಾಸಕರಾದ ಸತೀಶ್ ಸೈಲ್, ಆನಂದ ಅಸ್ನೋಟಿಕರ ಸೇರಿದಂತೆ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ಅಧಿಕಾರಿ ವರ್ಗ, ವಿವಿಧ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಬೆಳಿಗ್ಗೆ 8.30ಕ್ಕೆ ಸೂರ್ವೆಯಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next