Advertisement

ಲಕ್ಕುಂಡಿ ಉತ್ಸವ ಅರ್ಥಪೂರ್ಣ ಆಚರಣೆ

11:48 AM Mar 02, 2020 | Naveen |

ಗದಗ: ಈ ಬಾರಿ ಲಕ್ಕುಂಡಿ ಉತ್ಸವವನ್ನು ವಿಶಿಷ್ಟ, ಅರ್ಥಪೂರ್ಣ ಹಾಗೂ ಸಂಭ್ರಮದೊಂದಿಗೆ ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳಲು ಬ್ಯಾನರ್‌ ಹಾಗೂ ಪ್ಲಾಸ್ಟಿಕ್‌ ಮುಕ್ತ ಉತ್ಸವವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಸಹಕರಿಸಬೇಕು ಎಂದು ರಾಜ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಮನವಿ ಮಾಡಿದರು.

Advertisement

ಇಲ್ಲಿನ ಜಿಲ್ಲಾಡಳಿತ ಭವನದ ಜಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಲಕ್ಕುಂಡಿ ಉತ್ಸವ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಲಕ್ಕುಂಡಿ ಉತ್ಸವದ ಲೋಗೋ ಬಿಡುಗಡೆಗೊಳಿಸಿ ಅವರು ಮಾತನಾಡಿ, ಲಕ್ಕುಂಡಿಯ ಹಿಂದಿನ ಉತ್ಸವಗಳ ಅನುಭವದ ಆಧಾರದ ಮೇಲೆ ಈ ಬಾರಿಯ ಉತ್ಸವ ಸಮಾಜಮುಖೀಯಾಗಿ ಪ್ಲಾಸ್ಟಿಕ್‌ ಮುಕ್ತವಾಗಿ ಆಚರಿಸಬೇಕು ಎಂದು ಸಚಿವರು ಆಶಯ ವ್ಯಕ್ತಪಡಿಸಿದರು.

ಮಾರ್ಚ್‌ 21 ಮತ್ತು 22 ರಂದು ಎರಡು ದಿನಗಳ ಕಾಲ ಲಕ್ಕುಂಡಿ ಉತ್ಸವ ನಡೆಯಲಿದ್ದು, ರಾಜ್ಯದ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ, ಭಾರೀ ಹಾಗೂ ಮಧ್ಯಮ ಕೈಗಾರಿಕಾ ಸಚಿವರು ಭಾಗವಹಿಸಲಿದ್ದು, ಮುಖ್ಯಮಂತ್ರಿಗಳು ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಉತ್ಸವ ಅಂಗವಾಗಿ ಮಾ. 20ರಂದು ಗಾಳಿಪಟದ ಸ್ಪರ್ಧೆ ಹಾಗೂ 21ರಂದು ಮಧ್ಯಾಹ್ನ ಜಾನಪದ ಕಲಾ ಮೆರವಣಿಗೆ ನಡೆಯಲಿದೆ. ಮಾ. 22ರಂದು ಬೆಳಗ್ಗೆ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸುವುದು, ನಾಡಿನ ಖ್ಯಾತ ಕಲಾವಿದರನ್ನು ಆಹ್ವಾನಿಸುವುದರ ಜೊತೆಗೆ ಸ್ಥಳೀಯ ಹಾಗೂ ಲಕ್ಕುಂಡಿ ಗ್ರಾಮದ ಕಲಾವಿದರ ಕಲಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ಕಲ್ಪಿಸುವುದು, ಲಕ್ಕುಂಡಿ ಉತ್ಸವಕ್ಕೆ ಆಗಮಿಸುವ ಕಲಾವಿದರಿಗೆ ವಿಶೇಷ ಆಸಕ್ತಿ ವಹಿಸಿ, ಸರಿಯಾದ ವಸತಿ ಹಾಗೂ ಊಟೋಪಹಾರ ವ್ಯವಸ್ಥೆಯಾಗಬೇಕು. ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಆಹ್ವಾನ ಪತ್ರವನ್ನು ಕಳುಹಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಮಾತನಾಡಿ, ಈಗಾಗಲೇ ಜಿಲ್ಲಾಉಸ್ತುವಾರಿ ಸಚಿವರು ಲಕ್ಕುಂಡಿ ಗ್ರಾಮದಲ್ಲಿ ಉತ್ಸವದ ಪೂರ್ವಭಾವಿ ಸಭೆ ಜರುಗಿಸಿದ್ದು, ತಮ್ಮ ಅಧ್ಯಕ್ಷತೆಯಲ್ಲಿ ಕೂಡ ಸಭೆ ಜರುಗಿದ್ದು, ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆ ಗ್ರಾಮೀಣ ಕ್ರೀಡೆಗಳು, ವಿಚಾರಗೋಷ್ಠಿ, ಕವಿಗೋಷ್ಠಿ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಗತ್ಯದ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.

Advertisement

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಮಾತನಾಡಿ, ಲಕ್ಕುಂಡಿ ಉತ್ಸವವನ್ನು ವ್ಯವಸ್ಥಿತ ಹಾಗೂ ಯಶಸ್ವಿಯನ್ನಾಗಿಸಲು ಸ್ವಾಗತ, ಹಣಕಾಸು, ಪ್ರಚಾರ, ಪ್ರದರ್ಶನ, ಮೆರವಣಿಗೆ, ವಸತಿ, ಸಾರಿಗೆ ಸೇರಿದಂತೆ ಒಟ್ಟು 15 ಸಮಿತಿಗಳನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಬಾರಿಯ ಲಕ್ಕುಂಡಿ ಉತ್ಸವ ಜನ ಮೆಚ್ಚುಗೆಗೆ ಪಾತ್ರವಾಗಬೇಕು. ಈ ನಿಟ್ಟಿನಲ್ಲಿ ಉತ್ಸವದ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಆರೋಗ್ಯ ಇಲಾಖೆಯಿಂದ ಅಂಬುಲೆನ್ಸ್‌ ನಿಯೋಜನೆ, ಸ್ಥಳದಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಅದರೊಂದಿಗೆ ಲಕ್ಕುಂಡಿ ಗ್ರಾ.ಪಂ. ವತಿಯಿಂದ ಇಡೀ ಊರಿನಲ್ಲಿ ಸ್ವಚ್ಛತಾ ಕಾರ್ಯಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವ ಸಿ.ಸಿ.ಪಾಟೀಲ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿ.ಪಂ. ಸಿಇಒ ಡಾ| ಆನಂದ್‌ ಕೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಯತೀಶ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್‌ ಎಂ., ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next