Advertisement

ಆರೋಗ್ಯ ಸೇವೆಗಾಗಿ ಆಭಾ ಕಾರ್ಡ್‌ ಪಡೆಯಿರಿ

05:29 PM Nov 01, 2022 | Team Udayavani |

ತುಮಕೂರು: ಆಭಾ ಕಾರ್ಡ್‌ ಹೊಂದಿರುವ ಯಾವುದೇ ವ್ಯಕ್ತಿ ದೇಶದ ಯಾವುದೇ ಸರ್ಕಾರಿ, ಅನುಮೋದಿತ ಖಾಸಗಿ ಆಸ್ಪತ್ರೆಗಳಲ್ಲಿ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದ್ದು, ನಾಗರಿಕರು ಆಯುಷ್ಮಾನ್‌ ಭಾರತ್‌ ಹೆಲ್ತ್‌ ಅಕೌಂಟ್‌ (ಆಭಾ) ಕಾರ್ಡುಗಳನ್ನು ಪಡೆಯಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ತಿಳಿಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್‌ ಸಭಾಂಗಣದಲ್ಲಿ ಸೋಮವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್‌ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಜನಸಾಮಾನ್ಯರ ಆರೋಗ್ಯದ ಕಾಳಜಿಗಾಗಿ ಯೋಜನೆ ಜಾರಿಗೆ ತಂದಿದ್ದು, ಗ್ರಾಮ ಒನ್‌ ಸೇರಿದಂತೆ ನಿಗದಿತ ಸೇವಾ ಕೇಂದ್ರಗಳಲ್ಲಿ ಆಭಾ ಕಾರ್ಡ್‌ ಒದಗಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು. ಡಿಸೆಂಬರ್‌ 5ರಿಂದ 1ರಿಂದ 15ನೇ ವಯಸ್ಸಿನ ಮಕ್ಕಳಿಗೆ ಜೆಇ ಲಸಿಕಾ ಅಭಿಯಾನ ನಡೆಯುವ ಹಿನ್ನೆಲೆಯಲ್ಲಿ ಕೋವಿಡ್‌ ತಡೆಗಟ್ಟಲು ಮಕ್ಕಳಿಗೆ ನೀಡಲಾಗುತ್ತಿರುವ ಲಸಿಕಾಕರಣವನ್ನು ನ.10ರೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಶೀಘ್ರ ವಿಲೇವಾರಿ ಮಾಡಬೇಕು: ವಿಕಲಚೇತನರಿಗೆ ವೈದ್ಯಕೀಯ ಪ್ರಾಧಿಕಾರಗಳಿಂದ ದೃಢೀಕರಿಸಲಾಗುವ ವೈದ್ಯಕೀಯ ಪ್ರಮಾಣಪತ್ರದ ಸಮಗ್ರ ಮಾಹಿತಿಯುಳ್ಳ ಗಣಕೀಕೃತ ಗುರುತಿನ ಚೀಟಿ (ಯುಡಿಐಡಿ) ಕಾರ್ಡ್‌ ಗಳನ್ನು ಅರ್ಹ ವಿಕಲಚೇತನರಿಗೆ ನೀಡಬೇಕಾಗಿದ್ದು, ಬಾಕಿ ಇರುವ 350 ಅಧಿಕ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಕ್ಷಯರೋಗಿಗಳ ದತ್ತು ಕಾರ್ಯಕ್ರಮದಡಿ ರೋಗಿಗಳಿಗೆ ಬೇಕಾದ ಪೌಷ್ಟಿಕಾ ಹಾರ ಒದಗಿಸಲು ಆಸಕ್ತ ಸರ್ಕಾರಿ ಅಧಿಕಾರಿ, ನೌಕರರು ಜಿಲ್ಲಾ ಟಿಬಿ ನಿಯಂತ್ರಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.

ಜಿಪಿಎಸ್‌ ತ್ವರಿತಗತಿಯಲ್ಲಿ ಆಗಬೇಕು: ಬೆಳೆಹಾನಿ ಸರ್ವೆ ಮಾಡಿ ರೈತರ ಅಗತ್ಯ ದಾಖಲೆಗಳನ್ನು ಪರಿಹಾರ ಪೋರ್ಟಲ್‌ನಲ್ಲಿ ನಮೂದಿಸುವುದು, ಜೀವಹಾನಿ ಪ್ರಕರಣಗಳಿಗೆ ಶೀಘ್ರ ಪರಿಹಾರ, ಮನೆಹಾನಿಗೆ ಸಂಬಂಧಿಸಿದಂತೆ ಜಿಪಿಎಸ್‌ ಪೂರ್ಣಗೊಳಿಸಿ ಪರಿ ಹಾರ ನೀಡುವುದು, ಹೊಸದಾಗಿ ಕಟ್ಟುತ್ತಿರುವ ಮನೆ ಗಳ ಜಿಪಿಎಸ್‌ ಕಾರ್ಯ ತ್ವರಿತಗತಿಯಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಲರ್ಟ್‌ ಇರಬೇಕು ಎಂದು ಆಯಾ ತಾಲೂಕು ತಹಶೀಲ್ದಾರ್‌ ಹಾಗೂ ತಾಪಂ ಇಒಗಳಿಗೆ ಸೂಚಿಸಿದರು.

ಪಿಡಿಒಗಳಿಗೆ ದಾಖಲೆ ನೀಡಿ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಹಾಗೂ ಪಿಡಿಒಗಳು ಸೂಕ್ತ ನಿವೇಶನ ಗುರುತಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಪರ್ದಿಗೆ ವಹಿಸಬೇಕು. ಸರ್ಕಾರಿ/ಗ್ರಾಮ ಠಾಣ ಜಾಗದಲ್ಲಿರುವ ಸರ್ಕಾರಿ ಶಾಲೆಗಳನ್ನು ಶಿಕ್ಷಣ ಇಲಾ ಖೆಯ ಹೆಸರಿಗೆ ಖಾತೆ ಮಾಡಿಸಿಕೊಳ್ಳಲು ಅವಕಾಶ ವಿದ್ದು, ಸಂಬಂಧಿಸಿದ ಬಿಇಒ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮುಖ್ಯ ಶಿಕ್ಷಕರಿಂದ ಪಿಡಿಒಗಳಿಗೆ ದಾಖಲೆ ನೀಡಿ ಖಾತೆ ಮಾಡಿಸಿಕೊಳ್ಳಬೇಕು ಎಂದು ಸೂಚಿಸಿದರು.

Advertisement

ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿ ಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ವಿ. ಅಜಯ್‌, ಜಿಲ್ಲಾ ವಾರ್ತಾಧಿಕಾರಿ ಎಂ.ಆರ್‌.ಮಮತ, ಜಿಪಂ ಉಪಕಾರ್ಯದರ್ಶಿ ಅತಿಕ್‌ ಪಾಷಾ, ಡಿಎಚ್‌ಒ ಡಾ.ಮಂಜುನಾಥ್‌, ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ.ವೀಣಾ, ಡಿಡಿಎಲ್‌ಆರ್‌ ಸುಜಯ್‌ ಕುಮಾರ್‌, ತಹಶೀಲ್ದಾರ್‌ ಮೋಹನ್‌ ಕುಮಾರ್‌, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಟಿಎಸ್‌ಎಲ್‌ ಪ್ರೇಮಾ ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಸೂಕ್ತ ಸ್ಥಳಾವಕಾಶ ಗುರುತಿಸಿ : ಘನತ್ಯಾಜ್ಯ ವಿಲೇವಾರಿ ಘಟಕಗಳಿಗೆ ನೀಡಿರುವ ನಿವೇಶನ ಸಮರ್ಪಕವಾಗಿರದಿದ್ದರೆ ಸೂಕ್ತ ಸ್ಥಳಾವಕಾಶ ಗುರುತಿಸಿ ನೀಡಬೇಕು. ಪಂಚಾಯತಿ ವ್ಯಾಪ್ತಿಯ ಕರೆಗಳ ಕೆರೆ ಒತ್ತುವರಿ ತೆರವು ಗೊಳಿಸಿ ಪಿಡಿಒ ಹಾಗೂ ಸಂಬಂಧಿಸಿದ ಅಧಿಕಾರಿ ಗಳು ಮಹಜರ್‌ ಮಾಡಿಸಿ ಕೆರೆಯ ಗಡಿ ಗುರುತಿಸಬೇಕು. ಸ್ಮಶಾನಗಳ ಅಳತೆ, ಹದ್ದುಬಸ್ತು ಮಾಡಿಸುವುದು ಸೇರಿದಂತೆ ಅಗತ್ಯ ಕೆಲಸಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಆಯಾ ತಹಶೀಲ್ದಾರ್‌, ಇಒಗಳು ತಮ್ಮ ಅಧೀನ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next