Advertisement
ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಗುರುವಾರ ಮಧ್ಯಾಹ್ನ ಬಿಜೆಪಿ ಕಚೇರಿಗೆ ಆಗಮಿಸಿದ ಯಡಿಯೂರಪ್ಪ ಪಕ್ಷದ ನಾಯಕರು, ಶಾಸಕರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಗೂಂಡಾಗಿರಿ ಮನೋಭಾವ ಬಿಡಬೇಕು. ರಾಜ್ಯದ ಜನ ಎಲ್ಲ ಬೆಳವಣಿಗೆಯನ್ನು ಗಮನಿಸುತ್ತಿದ್ದಾರೆ. ಇನ್ನೊಬ್ಬರ ಬಗ್ಗೆ ದೂರುವ ಬದಲು ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಗಮನ ಹರಿಸೋಣ ಎಂದು ಹೇಳಿದರು.
Related Articles
Advertisement
ಜನರ ಉತ್ತರ: ಚುನಾವಣೆಯಲ್ಲಿ 18- 20 ಅಭ್ಯರ್ಥಿಗಳು ನಾನಾ ಕಾರಣಕ್ಕೆ ಸೋತಿರಬಹುದು. ಆದರೆ ಪಕ್ಷ, ಸರ್ಕಾರ ನಿಮ್ಮೊಂದಿಗಿದೆ. ಆ ಜಿಲ್ಲೆಗಳಲ್ಲಿ ಪಕ್ಷ ಬಲವರ್ಧನೆಗೆ ಆದ್ಯತೆ ನೀಡಲಾಗುವುದು. ಕಾಂಗ್ರೆಸ್, ಜೆಡಿಎಸ್ ನಾಯಕರ ಮಾತಿನ ವೈಖರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗೌರವ ತರುವಂಥದ್ದಲ್ಲ. ಹಿಂದಿನ ಚರಿತ್ರೆ ಮರೆತು ಬಿಜೆಪಿ ಅಧಿಕಾರಕ್ಕೆ ಬರುವುದನ್ನು ಸಹಿಸದೆ ಹೇಳಿಕೆ ನೀಡುತ್ತಿದ್ದಾರೆ. ಅದಕ್ಕೆ ನಾವು ಉತ್ತರ ನೀಡುವುದು ಬೇಕಿಲ್ಲ. ಜನರೇ ಉತ್ತರಿಸಿದ್ದಾರೆ ಎಂದರು.
ಕೇಂದ್ರ ಸಚಿವ ಅನಂತಕುಮಾರ್ ಮಾತನಾಡಿ, “ದೇಶದ 22 ರಾಜ್ಯಗಳಲ್ಲಿ ಬಿಜೆಪಿ ಸರ್ಕಾರವಿದೆ. ಪ್ರಧಾನಿ ನರೇಂದ್ರ ಮೋದಿ, “ಅಭಿನವ ಚಾಣಕ್ಯ’ ಎಂದೇ ಖ್ಯಾತರಾದ ಅಮಿತ್ ಶಾ ಅವರ ಮುಂದಾಳತ್ವದಲ್ಲಿ ವಿಜಯ ಸಿಕ್ಕಿದೆ. 104 ಸ್ಥಾನ ಪಡೆದು ಶೇ.38ರಷ್ಟು ಮತ ಪಡೆದಿರುವ ಬಿಜೆಪಿಗೆ ಜನಾದೇಶದ ಕೊರತೆ ಇದೆ ಎಂದು ಬಿಂಬಿಸುವ ಪ್ರಯತ್ನ ನಡೆದಿದ್ದು, ಕಾಂಗ್ರೆಸ್, ಜೆಡಿಎಸ್ ಕುಚೇಷ್ಟೆ ಬಿಡಬೇಕು. ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ರಚನಾತ್ಮಕವಾಗಿ ಸ್ಪಂದಿಸಬೇಕು ಎಂದು ಹೇಳಿದರು.
ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಧರ್ಮೇಂದ್ರ ಪ್ರಧಾನ್, ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಶಾಸಕರಾದ ಅರವಿಂದ ಲಿಂಬಾವಳಿ, ಗೋವಿಂದ ಕಾರಜೋಳ ಇತರರು ಉಪಸ್ಥಿತರಿದ್ದರು.
ಬಿಜೆಪಿ ಕಚೇರಿಯಲ್ಲಿ ಸಂಭ್ರಮ: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಕಚೇರಿಯಲ್ಲಿ ಗುರುವಾರ ಸಂಭ್ರಮ ಮನೆ ಮಾಡಿತ್ತು. ಕಚೇರಿಯನ್ನು ತಳಿರು, ತೋರಣ, ಹೂವಿನ ಅಲಂಕಾರದಿಂದ ಸಿಂಗರಿಸಲಾಗಿತ್ತು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕಚೇರಿಗೆ ಆಗಮಿಸಿದ ಯಡಿಯೂರಪ್ಪ ಅವರಿಗೆ ಪುಷ್ಪವೃಷ್ಟಿ ಮಾಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು, ಬೆಂಬಲಿಗರು ಮೋದಿ, ಮೋದಿ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು. ಆರತಿ ಬೆಳಗಿ ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು. ನಾಯಕರು, ಮುಖಂಡರು ಯಡಿಯೂರಪ್ಪ ಅವರನ್ನು ಅಭಿನಂದಿಸಿ ಶುಭ ಕೋರಿದರು.
ಸಂವಿಧಾನಾತ್ಮಕ, ಪ್ರಜಾತಾಂತ್ರಿಕವಾಗಿರುವ ಸರ್ಕಾರವನ್ನು ಬುಡಮೇಲು ಮಾಡಿ ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಕಾಂಗ್ರೆಸ್ ಯತ್ನಿಸುತ್ತಿದ್ದು, ಜನ ಇದನ್ನು ಸಹಿಸುವುದಿಲ್ಲ. ಯಡಿಯೂರಪ್ಪ ಅವರು ಪೂರ್ಣಾವಧಿ ಆಡಳಿತ ನೀಡಲಿದ್ದಾರೆ.-ಅನಂತಕುಮಾರ್, ಕೇಂದ್ರ ಸಚಿವ