Advertisement

ನಿಗದಿತ ಅವಧಿಯಲ್ಲಿ ಲೆಕ್ಕ ನೀಡಿ

09:21 AM Jun 12, 2018 | Team Udayavani |

ಯಾದಗಿರಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಖರ್ಚು ಮಾಡಿದ ಸಂಪೂರ್ಣ ಮಾಹಿತಿಯನ್ನು ನಿಗದಿಪಡಿಸಿದ ದಿನಾಂಕದೊಳಗೆ ನೀಡದಿರುವ ಅಭ್ಯರ್ಥಿಗಳು ಮುಂಬರುವ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸಲು ಅರ್ಹರಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ ಹೇಳಿದರು.

Advertisement

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳ ಖರ್ಚು-ವೆಚ್ಚ ಕುರಿತಾದ ಸಭೆಯಲ್ಲಿ ಅವರು ಮಾತನಾಡಿದರು. ಅಭ್ಯರ್ಥಿಗಳು ಖರ್ಚು ಮಾಡಿದ ಸಂಪೂರ್ಣ ಮಾಹಿತಿಯನ್ನು ಚುನಾವಣೆ ಫಲಿತಾಂಶ ನಂತರದ ಒಂದು ತಿಂಗಳೊಳಗಾಗಿ ಚುನಾವಣಾ ವೆಚ್ಚ ವೀಕ್ಷಕರ ಸಮ್ಮುಖದಲ್ಲಿ ಪರಿಶೀಲಿಸಿ, ಚುನಾವಣಾ ಆಯೋಗಕ್ಕೆ ವರದಿ ನೀಡಬೇಕು. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಅಭ್ಯರ್ಥಿಗಳ ಖರ್ಚು-ವೆಚ್ಚದ ವಿವರವನ್ನು ತಕ್ಷಣ ನೀಡಬೇಕು ಎಂದು ಅವರು ಸೂಚಿಸಿದರು.

ಸುರಪುರ ಮತ್ತು ಶಹಾಪುರ ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರಾದ ಪಂಕಜ್‌ಕುಮಾರ್‌, ಯಾದಗಿರಿ ಮತ್ತು ಗುರುಮಠಕಲ್‌ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರಾದ ಸುರೇಂದ್ರ ಮೋಹನ್‌ ಮಾತನಾಡಿ, ವೆಚ್ಚ ವೀಕ್ಷಣಾ ಸಮಿತಿಯ ಅಧಿಕಾರಿಗಳು ಅಭ್ಯರ್ಥಿಗಳ ಖರ್ಚುವೆಚ್ಚದ ಮಾಹಿತಿಯನ್ನು ನಿಗದಿಪಡಿಸಿದ ನಮೂನೆಯಲ್ಲಿ ನಿಖರವಾಗಿ ಭರ್ತಿ ಮಾಡಬೇಕು. ಚುನಾವಣೆಗಾಗಿ ಖರ್ಚು ಮಾಡಿದ ವಿವರದ ಜೊತೆಗೆ ಅದಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಸಹ ಅಭ್ಯರ್ಥಿಗಳಿಂದ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಜಿಲ್ಲಾ ಚುನಾವಣಾ ಖರ್ಚು-ವೆಚ್ಚ ಸಮಿತಿ ನೋಡಲ್‌ ಅಧಿಕಾರಿ ಬನ್ನಪ್ಪ ಗುಡಿಮನಿ, ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಸಹಾಯಕ ವೆಚ್ಚ ವೀಕ್ಷಣಾಧಿಕಾರಿಗಳು ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು/ ಏಜೆಂಟರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next